Karnataka Budget 2023; 7ನೇ ರಾಜ್ಯ ವೇತನ ಆಯೋಗದ ಬಗ್ಗೆ ಹೇಳಿದ್ದೇನು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ನಲ್ಲಿ ಮಂಡನೆ ಮಾಡಿದ್ದಾರೆ. ಬಜೆಟ್ನಲ್ಲಿ ಕರ್ನಾಟಕ 7ನೇ ವೇತನ ಆಯೋಗದ ಕುರಿತು ಹೇಳಿರುವುದೇನು?
ಬೆಂಗಳೂರು, ಫೆಬ್ರವರಿ 17; ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್ನಲ್ಲಿ ರಾಜ್ಯ ಸರ್ಕಾರಿ ನೌಕರರ ಬಗ್ಗೆ ಕೆಲವು ಮಾಹಿತಿ ನೀಡಲಾಗಿದೆ. ಆದರೆ 7ನೇ ವೇತನ ಆಯೋಗದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಬಜೆಟ್ ಮಂಡಿಸಿದರು. ಬಜೆಟ್ ಭಾಷಣದಲ್ಲಿ ಅವರು, ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಸರ್ಕಾರಕ್ಕೆ ಒಟ್ಟು 5 ವರದಿಗಳನ್ನು ಸಲ್ಲಿಸಿದ್ದು, ಇದರಲ್ಲಿ 3,630 ಇಲಾಖಾವಾರು ಶಿಫಾರಸ್ಸುಗಳು ಒಳಗೊಂಡಿವೆ ಎಂದರು.
ಆಯೋಗದ ಶಿಫಾರಸುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಆಡಳಿತದಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರುವ ಮೂಲಕ ಮನೆ ಬಾಗಿಲಿಗೇ ಸರ್ಕಾರ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಒಟ್ಟು 2.35 ಗಂಟೆಯ ಬಜೆಟ್ ಭಾಷಣದಲ್ಲಿ, ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ. ಈ ಎಲ್ಲಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿಯೇ ಪೂರ್ಣಗೊಳಿಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಭಾಷಣದಲ್ಲಿ ವಿವರಣೆ ನೀಡಿದರು.
ಬಜೆಟ್ನಲ್ಲಿ ವೃತ್ತಿ ತೆರಿಗೆ ಅಧಿನಿಯಮವನ್ನು ಸರಳೀಕರಣಗೊಳಿಸಲು ಉದ್ದೇಶಿಸಲಾಗಿದೆ. ಕಡಿಮೆ ವರಮಾನ ಹೊಂದಿರುವ ವರ್ಗದವರಿಗೆ ಪರಿಹಾರ ನೀಡುವುದಕ್ಕಾಗಿ ಸಂಬಳ ಅಥವಾ ಮಜೂರಿ ಪಡೆಯುವ ನೌಕರರ ತೆರಿಗೆ ವಿನಾಯಿತಿ ಮಿತಿಯನ್ನು 15,000 ರೂ.ನಿಂದ 25,000 ರೂ.ಗೆ ವಿಸ್ತರಣೆ ಮಾಡಲು ಪ್ರಸ್ತಾಪಿಸಲಾಗಿದೆ ಎಂದರು.
ಬಜೆಟ್ ಭಾಷಣದ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿದರು. ಆಗ 7ನೇ ವೇತನ ಆಯೋಗದ ಬಗ್ಗೆ ಪ್ರಶ್ನಿಸಲಾಯಿತು. ಆಗ ಉತ್ತರ ನೀಡಿದ ಅವರು, "7ನೇ ರಾಜ್ಯ ವೇತನ ಆಯೋಗವನ್ನು ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗಿದೆ" ಎಂದರು.
"ಎಲ್ಲವನ್ನೂ ಬಜೆಟ್ ಭಾಷಣದಲ್ಲಿಯೇ ಹೇಳಬೇಕು ಎಂದೇನಿಲ್ಲ. ಸುಧಾಕರ್ ರಾವ್ ಅಧ್ಯಕ್ಷತೆಯ ಆಯೋಗದಿಂದ ವರದಿ ಕೇಳಿದ್ದೇವೆ. ಈ ವರ್ಷವೇ ವರದಿ ಅನುಷ್ಠಾನಗೊಳಿಸಬೇಕು ಎಂಬ ಗುರಿ ಇದೆ" ಎಂದು ವಿವರಣೆ ನೀಡಿದರು.

ವೇತನ ಆಯೋಗ ರಚನೆ; ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳ ವೇತನ, ತುಟ್ಟಿಭತ್ಯೆ ಹಾಗೂ ಇತರ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ, ಪರಿಷ್ಕರಿಸಿ ಸರ್ಕಾರಕ್ಕೆ ವರದಿ ನೀಡಲು ದಿನಾಂಕ 19/11/2022ರಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚನೆ ಮಾಡಿದೆ.
ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾಂಶಗಳ ಕುರಿತಂತೆ ಸಾರ್ವಜನಿಕರು, ಸೇವಾ ಸಂಘಗಳು ಹಾಗೂ ಸರ್ಕಾರಿ ನೌಕರರು ಅಲ್ಲದೇ, ಇಲಾಖೆಗಳಿಂದ, ಸಂಸ್ಥೆಗಳಿಂದ ಮಾಹಿತಿ ಹಾಗೂ ಮುಕ್ತ ಸಲಹೆಗಳನ್ನು ಪಡೆಯುವ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಆಯೋಗವು ಪ್ರಶ್ನಾವಳಿಗಳನ್ನು ತಯಾರು ಮಾಡಿದೆ.
ಮೊದಲು ಫೆಬ್ರವರಿ 10ರ ತನಕ ಈ ಪ್ರಶ್ನಾವಳಿಗೆ ಉತ್ತರ ನೀಡಲು ಅವಕಾಶ ನೀಡಲಾಗಿತ್ತು. ಅದನ್ನು ಫೆಬ್ರವರಿ 28ರ ತನಕ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈಗಾಗಲೇ ಇದಕ್ಕೆ ಉತ್ತರವನ್ನು ನೀಡಿದೆ.
ಕರ್ನಾಟಕದಲ್ಲಿ ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಆಯೋಗ ಸರ್ಕಾರಕ್ಕೆ ಮಧ್ಯಂತರ ವರದಿ ನೀಡಬೇಕು ಎಂಬುದು ರಾಜ್ಯ ಸರ್ಕಾರಿ ನೌಕರರ ಸಂಘದ ಬೇಡಿಕೆಯಾಗಿದೆ.












Click it and Unblock the Notifications