Karnataka Budget 2024: ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಬೆಂಗಳೂರು, ಫೆಬ್ರವರಿ.16: ಸಿಎಂ ಸಿದ್ದರಾಮಯ್ಯ ಫೆಬ್ರವರಿ 16 ರಂದು 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಜೆಟ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈ ಬಾರಿಯ ಬಜೆಟ್ನಲ್ಲಿ ಎಲ್ಲಾ ವರ್ಗಗಳನ್ನು ಪರಿಗಣಿಸಲಾಗಿದೆ. ಜೊತೆಗೆ 3,71,383 ಕೋಟಿ ರೂಪಾಯಿಯ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಬಜೆಟ್ ಭಾಷನದ ವೇಳೆ ಸಿದ್ದರಾಮಯ್ಯ ಜಿಎಸ್ಟಿ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಜಿಎಸ್ಟಿ ಸಂಗ್ರಹದಲ್ಲಿ ರಾಜ್ಯಕ್ಕೆ 2ನೇ ಸ್ಥಾನ!
'ಕರ್ನಾಟಕ ರಾಜ್ಯವು ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ 2ನೇ ರಾಜ್ಯವಾಗಿದ್ದು, 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿಕೆ ನೀಡಿದ್ದಾರೆ.

'ಸ್ವಂತ ತೆರಿಗೆ ರಾಜಸ್ವವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಶೇ.12ರಷ್ಟು ಬೆಳವಣಿಗೆಯನ್ನು ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಪ್ರಮಾಣ ಹೆಚ್ಚಾಗಿದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ' ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಆರ್ಥಿಕತೆ
ರಾಜ್ಯದ ಆರ್ಥಿಕತೆಯು 2023-24ನೇ ಸಾಲಿನಲ್ಲಿ ಶೇ.6.6ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಈ ಶ್ಲಾಘನೀಯ ಬೆಳವಣಿಗೆಯು, ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂಬುದನ್ನು ದೃಢಪಡಿಸಿದೆ ಎಂದಿದ್ದಾರೆ.
ಸೇವಾ ಮತ್ತು ಕೈಗಾರಿಕಾ ವಲಯಗಳು ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಕಳೆದ ಸಾಲಿಗೆ ಹೋಲಿಸಿದರೆ, 2023-24ನೇ ಸಾಲಿನಲ್ಲಿ ಸೇವಾ ವಲಯವು ಶೇ.8.7ರಷ್ಟು (ಸ್ಥಿರ ಬೆಲೆಗಳಲ್ಲಿ) ಮತ್ತು ಕೈಗಾರಿಕೆ ವಲಯವು ಶೇ.7.5ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆ ಸಾಧಿಸಿದೆ. ಪ್ರಸಕ್ತ ವರ್ಷದಲ್ಲಿ ಮುಂಗಾರು ವೈಫಲ್ಯದಿಂದ ರಾಜ್ಯವು ತೀವ್ರ ಬರಗಾಲವನ್ನು ಎದುರಿಸಬೇಕಾಯಿತು. ಇದರಿಂದಾಗಿ ಕೃಷಿ ಕ್ಷೇತ್ರವು ಶೇ.1.8ರಷ್ಟು (ಸ್ಥಿರ ಬೆಲೆಗಳಲ್ಲಿ) ಋಣಾತ್ಮಕ ಬೆಳವಣಿಗೆ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.
'ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿನ ಕುಸಿತ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿನ ಬಡ್ಡಿ ದರಗಳ ಹೆಚ್ಚಳದಿಂದ ಪ್ರಸಕ್ತ ವರ್ಷದ ಮೊದಲ ಆರು ತಿಂಗಳುಗಳಲ್ಲಿ ನಮ್ಮ ದೇಶಕ್ಕೆ ವಿದೇಶಿ ನೇರ ಹೂಡಿಕೆಯ ಕುಸಿತದ ನಡುವೆಯೂ, ರಾಜ್ಯದಲ್ಲಿ ಸೆಪ್ಟೆಂಬರ್ 2023ರ ಅಂತ್ಯದವರೆಗೆ 2.8 ಶತಕೋಟಿ ಅಮೇರಿಕನ್ ಡಾಲರ್ಗಳಷ್ಟು ವಿದೇಶಿ ಹೂಡಿಕೆಯಾಗಿರುತ್ತದೆ. ಇದು ವಿದೇಶಿ ಬಂಡವಾಳದಾರರಿಗೆ ರಾಜ್ಯವು ಆಕರ್ಷಕ ಹೂಡಿಕೆ ಕೇಂದ್ರವಾಗಿರುವುದನ್ನು ಸಾಬೀತುಪಡಿಸಿದೆ' ಎಂದು ಆಯವ್ಯಯ ಪತ್ರದಲ್ಲಿ ತಿಳಿಸಲಾಗಿದೆ.
ರಾಜ್ಯದ ಆರ್ಥಿಕ ಸ್ಥಿತಿ ಹೇಗಿದೆ?
ಸರಕು ಮತ್ತು ಸೇವಾ ತೆರಿಗೆಯನ್ನು ಪರಿಚಯಿಸುವ ಮೂಲಕ ರಾಜ್ಯಗಳ ತೆರಿಗೆ ಸಂಗ್ರಹಣೆಯು ಶೇ.14ರಷ್ಟು ಬೆಳವಣಿಗೆ ಹೊಂದಲಿದ್ದು, ಒಂದು ವೇಳೆ ಅಂದಾಜಿಗಿಂತ ಕಡಿಮೆ ಸಂಗ್ರಹವಾದಲ್ಲಿ, ಕೇಂದ್ರ ಸರ್ಕಾರದಿಂದ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರಗಳಿಗೆ ಭರವಸೆ ನೀಡಲಾಗಿತ್ತು. ಶೇ.14ರಷ್ಟು ಬೆಳವಣಿಗೆ ದರದಂತೆ 2017 ರಿಂದ 2023-24ರವರೆಗೆ ರಾಜ್ಯದಲ್ಲಿ ಒಟ್ಟು 4,92,296 ಕೋಟಿ ರೂ.ಗಳ ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ವಾಸ್ತವಿಕವಾಗಿ ರಾಜ್ಯದಲ್ಲಿ 3,26,764 ಕೋಟಿ ರೂ.ಗಳ ಜಿ.ಎಸ್.ಟಿ ತೆರಿಗೆ ಸ್ವೀಕೃತವಾಗಿದೆ.
ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿನ ಕೊರತೆ 1,65,532 ಕೋಟಿ ರೂ.ಗಳಿಗೆ ಎದುರಾಗಿ, ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 1,06,258 ಕೋಟಿ ರೂ. ಪರಿಹಾರವನ್ನು ಮಾತ್ರ ಬಿಡುಗಡೆ ಮಾಡಿದೆ. ಜಿ.ಎಸ್.ಟಿ. ತೆರಿಗೆಯ ಈ ಅವೈಜ್ಞಾನಿಕ ಅನುಷ್ಠಾನದಿಂದ ರಾಜ್ಯಕ್ಕೆ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 59,274 ಕೋಟಿ ರೂ.ಗಳ ನಷ್ಟವಾಗಿರುತ್ತದೆ.
15 ಹಣಕಾಸು ಆಯೋಗದ ಶಿಫಾರಸ್ಸಿನಿಂದ ರಾಜ್ಯಕ್ಕೆ 2,15,253 ಕೋಟಿ ರೂ.ಗಳು ಮಾತ್ರ ಹಂಚಿಕೆಯಾಗಲಿದೆ ಎಂದು ಸರ್ಕಾರವು ಅಂದಾಜಿಸಲಾಗಿದೆ. 15ನೇ ಹಣಕಾಸು ಆಯೋಗದ ಆರು ವರ್ಷದ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ಒಟ್ಟು ತೆರಿಗೆ ಹಂಚಿಕೆಯಲ್ಲಿ, ರಾಜ್ಯಕ್ಕೆ 62,098 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
15ನೇ ಹಣಕಾಸು ಆಯೋಗವು ಮೊದಲನೆಯ ವರದಿಯಲ್ಲಿ 2020-21ನೇ ವರ್ಷಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಒದಗಿಸುವಂತೆ ಹಾಗೂ ಅಂತಿಮ ವರದಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 6,000 ಕೋಟಿ ರೂ. ರಾಜ್ಯ ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿತ್ತು. ಆದರೆ ಈ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರವು ತಿರಸ್ಕರಿಸಿರುತ್ತದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರ ಇದ್ದರೂ ಸಹ ಕೇಂದ್ರದಿಂದ ಒಟ್ಟು 11,495 ಕೋಟಿ ರೂ.ಗಳ ವಿಶೇಷ ಅನುದಾನ ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ ಎಂದು ತಿಳಿಸಲಾಗಿದೆ.












Click it and Unblock the Notifications