Karnataka Budget 2024: 'ಒಂದು ತೋಟದಲ್ಲಿ ನೂರು ಹೂವು ಅರಳಲಿ' ಎನ್ನುತ್ತಾ ಸಮಾಜ ಕಲ್ಯಾಣ ಇಲಾಖೆಗೆ ಸಿದ್ದು ಕೊಟ್ಟಿದ್ದೇನು?

ಬೆಂಗಳೂರು, ಫೆಬ್ರವರಿ.16: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಯೋಜನೆಗಳಿಗೆ ಒಟ್ಟಾರೆ 39,121 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ. ಸಿದ್ದರಾಮಯ್ಯ ಲೆಕ್ಕಾಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

"ಒಂದು ತೋಟದಲ್ಲಿ ನೂರು ಹೂವು ಅರಳಲಿ,ಎಲ್ಲಾ ಕೂಡಿ ಆಡುವಂಥ ಗಾಳಿ ಬೀಸಲಿ....." ಎಂಬ ಡೇರ್ ಡೆವಿಲ್‌ ಮುಸ್ತಫಾ ಚಿತ್ರದ ವಾಕ್ಯಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಕೆಗೆ ನೀಡಿರುವ ಯೋಜನೆಗಳನ್ನು ಓದಿದ್ದಾರೆ. ಆ ಯೋಜನೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

Karnataka Budget 2024: Key Announcement For Social Welfare Department

1. ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,447 ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,121 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ.

2. ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ Clause-3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ.

3. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

Karnataka Budget 2024: Key Announcement For Social Welfare Department

4 . ಕ್ರೈಸ್‌ ಅಡಿಯಲ್ಲಿ 2023-24ನೇ ಸಾಲಿನಲ್ಲಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು.

5. ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು.

6. 2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು.

7. ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು.

8. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ. ನಂತೆ ಹೆಚ್ಚಿಸಲಾಗುವುದು.

9. ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ ಬೆಂಗಳೂರು ಪೂರ್ವ ಭಾಗದಲ್ಲಿ 500 ಸಂಖ್ಯೆಯ ಒಂದು ನಿರಾಶ್ರಿತರ ಪರಿಹಾರ ಕೇಂದ್ರವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

10. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ Corpus Fund ಅನ್ನು ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು.

11. ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು.

12. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ.

2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು;

• 1 ರಿಂದ 5ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿ ಪ್ರಾರಂಭಿಸಲಾಗುವುದು.

• 1 ರಿಂದ 7ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯನ್ನು ಪ್ರಾರಂಭಿಸಲಾಗುವುದು.

• ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25 ರಿಂದ 40ಕ್ಕೆ ಹೆಚ್ಚಿಸಲಾಗುವುದು.

3. ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳು ಇಲ್ಲದಿರುವ 7 ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡರಂತೆ 100 ಸಂಖ್ಯಾಬಲದ ಬಾಲಕ/ಬಾಲಕಿಯರ 14 ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.

4. IISc, IIT ಮತ್ತು NIT ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ

6 ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್‌ ಪದವೀಧರರಿಗೆ 15,000 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು.

5. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು.

6. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು.

7. ಪರಿಶಿಷ್ಟ ಪಂಗಡದ ಕೊರಗ, ಜೇನುಕುರುಬ, ಯರವ, ಕಾಡುಕುರುಬ, ಸೋಲಿಗ, ಗೊಂಡ, ಸಿದ್ದಿ, ಮಲೈಕುಡಿ, ಕುಡಿಯ, ಹಸಲರು, ಗೌಡಲು, ಬೆಟ್ಟಕುರುಬ, ಹಕ್ಕಿ-ಪಿಕ್ಕಿ, ಇರುಳಿಗ, ರಾಜಗೊಂಡ ಹರಿಣಿಶಿಕಾರಿ ಮುಂತಾದ 23 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಈ ಕೆಳಕಂಡ ಎರಡು ಉಪಕ್ರಮಗಳನ್ನು ರೂಪಿಸಲಾಗುವುದು;

• ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟುಗಳನ್ನು ಮೀಸಲಿರಿಸಿ, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರ ಪ್ರವೇಶ ಕಲ್ಪಿಸಲಾಗುವುದು.

• ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು ವಿಶೇಷ ಕೋಶವನ್ನು 3 ಕೋಟಿ ರೂ.ಗಳ ಅನುದಾನದಲ್ಲಿ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಸ್ಥಾಪಿಸಲಾಗುವುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+