Karnataka Budget 2025: ಬಜೆಟ್ನಲ್ಲಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್
ಬೆಂಗಳೂರು ಮಾರ್ಚ್ 7: ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆಯಲ್ಲಿ ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಮಕ್ಕಳನ್ನು ಶಾಲೆಗಳತ್ತ ಸೆಳೆಯಲು ಹಾಗೂ ಶಿಕ್ಷಣ ಪಡೆಯುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ಹಿತದೃಷ್ಟಿಯಿಂದ ಬಜೆಟ್ನಲ್ಲಿ ಬಂಪರ್ ಆಫರ್ ನೀಡಿದ್ದಾರೆ.
ಹೌದು.. ಬಜೆಟ್ ಮಂಡನೆ ವೇಳೆ ಶಾಲಾ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಕೊಟ್ಟಿದ್ದಾರೆ. ಶಾಲಾ ಮಕ್ಕಳಿಗೆ ವಾರದ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ ಮಾಡಲು ಘೋಷಣೆ ಮಾಡಲಾಗಿದೆ. ಇದಕ್ಕಾಗಿ 1,500 ಕೋಟಿ ರೂ. ಮೀಸಲಿಡಲಾಗುತ್ತದೆ ಎಂದು ಬಜೆಟ್ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬಜೆಟ್ ಮುಖ್ಯ ಅಂಶಗಳು: -
* ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ 53ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
* ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ನ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಶೇ 25ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
*ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2000 ರೂಪಾಯಿ ಹೆಚ್ಚಿಸಲಾಗುವುದು.
* ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1000 ರೂಪಾಯಿ ಹೆಚ್ಚಿಸಲಾಗುವುದು.
* ರಾಜ್ಯದ ಅರ್ಜ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
* ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ. ರೂಪಾಯಿ ವೆಚ್ಚದಲ್ಲಿ ಒಟ್ಟಾರೆ 5000 ಶಾಲೆಗಳಿಗೆ ವಿಸ್ತರಿಸಲಾಗುವುದು.
ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು
2023-24ನೇ ಸಾಲಿನ ಜುಲೈ ಬಜೆಟ್ನಲ್ಲಿ ಘೋಷಣೆ ಮಾಡಿರುವಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ 6 ರೂ. ನಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ/ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿತ್ತು.
ಈ ಹಿಂದೆ ವಾರದಲ್ಲಿ 2 ದಿನ ಮೊಟ್ಟೆ ನೀಡುವ ವೇಳೆ ಮಧ್ಯಾಹ್ನ ಬಿಸಿಯೂಟ ಸೇವನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಪ್ರಮಾಣ ಶೇ.93.66ರಷ್ಟಿತ್ತು.ಇದೀಗ ಆರು ದಿನ ಮೊಟ್ಟೆ ನೀಡಿದ ಮೇಲೆ ಇದರ ಪ್ರಮಾಣ ಶೇ.98.97ರಷ್ಟು ಏರಿಕೆಯಾಗಿದೆ. ಒಟ್ಟಾರೆ ಶೇ.5.31ರಷ್ಟು ಹೆಚ್ಚಳವಾಗಿದೆ. ಬಾಳೆಹಣ್ಣು ತಿನ್ನುವ ವಿದ್ಯಾರ್ಥಿಗಳ ಸಂಖ್ಯೆಗಿಂತ 4 ಪಟ್ಟು ಹೆಚ್ಚಿನ ವಿದ್ಯಾರ್ಥಿಗಳು ಮೊಟ್ಟೆ ತಿನ್ನುತ್ತಿದ್ದಾರೆ.
ರಾಜ್ಯ ಸರ್ಕಾರ ವಾರದಲ್ಲಿ ಮೊದಲು 2 ದಿನ ಮಾತ್ರವೇ ಮೊಟ್ಟೆ ನೀಡುತ್ತಿತ್ತು. ಅಜೀಂ ಪ್ರೇಮ್ ಜೀ ಫೌಂಡೇಷನ್ 1,500 ಕೋಟಿ ರೂ. ಅನುದಾನ ನೀಡಿದ ನಂತರ, ಇದನ್ನು ಮತ್ತೆ ನಾಲ್ಕು ದಿನಕ್ಕೆ ವಿಸ್ತರಿಸಿ ಒಟ್ಟಾರೆ ವಾರದ ಆರು ದಿನ ಮೊಟ್ಟೆ ನೀಡಲು ಆರಂಭಿಸಿತು. ರಾಜ್ಯದಲ್ಲಿ 1ರಿಂದ 10ನೇ ತರಗತಿಗೆ 52.76 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 2 ದಿನ ಮೊಟ್ಟೆ ನೀಡುವ ಸಮಯದಲ್ಲಿ 32.33 ಲಕ್ಷ ವಿದ್ಯಾರ್ಥಿಗಳು ಮೊಟ್ಟೆ ಸೇವನೆ ಮಾಡಿದ್ದು, ವಾರದಲ್ಲಿ6 ದಿನಗಳಂತೆ ಸಂಪೂರ್ಣ ಒಂದು ತಿಂಗಳಲ್ಲಿ6.64 ಕೋಟಿ ವಿದ್ಯಾರ್ಥಿಗಳು ಮೊಟ್ಟೆ ಸೇವನೆ ಮಾಡಿದ್ದಾರೆ.












Click it and Unblock the Notifications