Karnataka Budget 2025: ಸಿದ್ದರಾಮಯ್ಯ 'ಲೆಕ್ಕ'ದಲ್ಲಿ ಎಲ್ಲಾ ಶಾಸಕರಿಗೆ ಭರ್ಜರಿ ಗಿಫ್ಟ್!
ಬೆಂಗಳೂರು, ಮಾರ್ಚ್ 07: ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂ. ಒದಗಿಸಲಾಗಿದೆ. ಕಳೆದ ಎರಡು ಆಯವ್ಯಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಜೊತೆಗೆ ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿ. ಯ ಶೇ.3ರ ಮಿತಿಯೊಳಗೆ ಮತ್ತು ಒಟ್ಟು ಹೊಣೆಗಾರಿಕೆಯನ್ನು ಜಿ.ಎಸ್.ಡಿ.ಪಿ. ಯ ಶೇ.25ರ ಮಿತಿಯೊಳಗೆ ನಿಯಂತ್ರಿಸುವ ಮೂಲಕ ವಿತ್ತೀಯ ಶಿಸ್ತನ್ನು ಪಾಲಿಸಲಾಗಿರುತ್ತದೆ ಎಂಬುದು ಗಮನಾರ್ಹ.

ಸರ್ಕಾರವು ತನ್ನ ಆಡಳಿತ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಹಾಗೂ ಪಾರದರ್ಶಕತೆಯನ್ನು ಹೆಚ್ಚಿಸಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ವಿವಿಧ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ʻಬಿʼ ಮತ್ತು ʻಸಿʼ ವೃಂದಗಳಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ವಿವಿಧ ನಿಯಮಗಳ ಸರಳೀಕರಣದ ಮೂಲಕ ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸಲಾಗುವುದು.
ವಿತ್ತೀಯ ಕೊರತೆ ಮತ್ತು ಒಟ್ಟು ಹೊಣೆಗಾರಿಕೆಯನ್ನು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಸೂಚಿಸಿರುವ ಮಿತಿಯೊಳಗೆ ನಿರ್ವಹಿಸಿ, ನಾವು ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡುವುದರೊಂದಿಗೆ ಬಂಡವಾಳ ವೆಚ್ಚದಲ್ಲಿಯೂ ಗಣನೀಯ ಹೆಚ್ಚಳ ಮಾಡಿದ್ದು, ಹೆಮ್ಮೆಯ ಸಂಗತಿ. ವಿತ್ತೀಯ ಶಿಸ್ತು ಕಾಯ್ದುಕೊಂಡು ಜನಕಲ್ಯಾಣ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಆಯವ್ಯಯ ಹಂಚಿಕೆ ಮಾಡುವುದರೊಂದಿಗೆ, ಬಂಡವಾಳ ವೆಚ್ಚಗಳಿಗೂ ಅನುದಾನ ಒದಗಿಸಿ, ರಾಜ್ಯದ ಆರ್ಥಿಕತೆಯನ್ನು ಸದೃಢಗೊಳಿಸುವ ಅಂಶಗಳೊಂದಿಗೆ ಕಳೆದ ಸಾಲಿನ ಆಯವ್ಯಯ ಮಂಡಿಸಿದ್ದೆನು. ಇದೀಗ 2025-26ನೇ ಸಾಲಿನ ಆಯವ್ಯಯವನ್ನು ಸಹ ಇದೇ ಆಶಯದೊಂದಿಗೆ ಮಂಡಿಸುತ್ತಿದ್ದೇನೆ ಎಂಧು ಸಿದ್ದರಾಮಯ್ಯ ಅವರು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯಗಳ ನಡುವಿನ ತೆರಿಗೆ ಹಂಚಿಕೆಯಲ್ಲಿ ಕನಿಷ್ಠ ಶೇ.50ರಷ್ಟು ಪಾಲನ್ನು ರಾಜ್ಯಗಳಿಗೆ ನೀಡಬೇಕು ಎಂದು ನಾವು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದು ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಪನ್ಮೂಲಗಳ ನ್ಯಾಯಯುತ ಹಂಚಿಕೆಯನ್ನು ಖಚಿತಪಡಿಸುತ್ತದೆ. ಕೇಂದ್ರ ಸರ್ಕಾರ ವಿಧಿಸುವ ಸೆಸ್ ಮತ್ತು ಸರ್ಚಾರ್ಜ್ಗಳನ್ನು ಒಟ್ಟು ತೆರಿಗೆ ರಾಜಸ್ವದ ಶೇ.5 ಕ್ಕೆ ಮಿತಿಗೊಳಿಸಬೇಕು. ಇದಕ್ಕಿಂತ ಹೆಚ್ಚಿನ ಸೆಸ್ ಮತ್ತು ಸರ್ಚಾರ್ಜ್ಗಳನ್ನು ವಿಧಿಸಿದರೆ, ಹೆಚ್ಚಿನ ಮೊತ್ತವನ್ನು ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಪಾಲಿನಲ್ಲಿ ಪರಿಗಣಿಸಬೇಕು. ರಾಜ್ಯಗಳ ನಡುವಿನ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ, ಒಟ್ಟು ತೆರಿಗೆ ಹಂಚಿಕೆಯಲ್ಲಿ ತೆರಿಗೆ ಸಂಗ್ರಹಿಸುವ
ರಾಜ್ಯಕ್ಕೆ ಶೇ.60ರಷ್ಟು ಪಾಲನ್ನು ಮರಳಿಸಬೇಕು. ಆದ್ದರಿಂದ, ಹಂಚಿಕೆಯಾಗುವ ತೆರಿಗೆಯಲ್ಲಿ ಇತರೆ ರಾಜ್ಯಗಳ ಪಾಲನ್ನು ಶೇ.40ಕ್ಕೆ ಮಿತಿಗೊಳಿಸಬೇಕು ಎಂದು ನಾವು 16ನೇ ಹಣಕಾಸು ಆಯೋಗಕ್ಕೆ ಒತ್ತಾಯ ಮಾಡಿದ್ದೇವೆ.
ಈ ಸವಾಲುಗಳ ನಡುವೆಯೂ, ರಾಜ್ಯ ಸರ್ಕಾರದ ಸಂಪನ್ಮೂಲ ಕ್ರೊಢೀಕರಣ ಕ್ರಮಗಳಿಂದ ರಾಜಸ್ವ ಸ್ವೀಕೃತಿಗಳು ಉತ್ತಮ ಬೆಳವಣಿಗೆ ಸಾಧಿಸಿದ್ದು, ರಾಜ್ಯದ ಅಭಿವೃದ್ಧಿ ಕುರಿತ ನಮ್ಮ ದೂರದೃಷ್ಟಿಯ ಯೋಜನೆಗಳನ್ನು ಸಾಕಾರಗೊಳಿಸಲು ಸಾಧ್ಯವಾಗಿದೆ. 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ. 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆಯಿದೆ.
2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ 14,500 ಕೋಟಿ ರೂ.ಗಳು ಸಂಗ್ರಹವಾಗುವ ನಿರೀಕ್ಷೆಯಿದ್ದು, ಆಯವ್ಯಯ ಗುರಿಗಿಂತ ಹೆಚ್ಚು ಸಂಗ್ರಹವಾಗಲಿದೆ. ತೆರಿಗೆಯೇತರ ರಾಜಸ್ವವು ವರ್ಷವಾರು ಶೇ.10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆಯಿದೆ. ಆದರೂ ಜಿ.ಎಸ್.ಡಿ.ಪಿ.ಯ ಶೇಕಡಾವಾರು ಪರಿಗಣಿಸಿದಾಗ ತೆರಿಗೆಯೇತರ ಸಂಪನ್ಮೂಲ ಹೆಚ್ಚಳಕ್ಕೆ ವಿಪುಲ ಅವಕಾಶಗಳಿವೆ. ಸಂಪನ್ಮೂಲ ಕ್ರೊಢೀಕರಣಕ್ಕಾಗಿ ರಾಜ್ಯ ಸರ್ಕಾರವು ʻಸಂಪನ್ಮೂಲ ಕ್ರೊಢೀಕರಣ ಸಮಿತಿʼಯನ್ನು ರಚನೆ ಮಾಡಿರುತ್ತದೆ ಎಂದು ತಿಳಿಸಿದರು.












Click it and Unblock the Notifications