Government Employee: ಕರ್ನಾಟಕ ಬಜೆಟ್, ಸರ್ಕಾರಿ ನೌಕರರಿಗೆ ಸಿಕ್ಕಿದ್ದೇನು?
ಬೆಂಗಳೂರು, ಮಾರ್ಚ್ 07: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಗಾತ್ರ 4,09,549 ಲಕ್ಷ ಕೋಟಿ ರೂ.ಗಳು. ವಿವಿಧ ವಲಯಗಳಿಗೆ ಬಂಪರ್ ಕೊಡುಗೆಗಳನ್ನು ಬಜೆಟ್ನಲ್ಲಿ ನೀಡಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ ಸರ್ಕಾರಿ ನೌಕರರಿಗೆ ನೀಡಿರುವ ಕೊಡುಗೆಗಳನ್ನು ಉಲ್ಲೇಖಿಸಿದ್ದಾರೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರಿ ನೌಕರರು ಸರ್ಕಾರದ ಮುಂದೆ ಇಟ್ಟಿದ್ದರು. ಬಜೆಟ್ನಲ್ಲಿ ಯಾವ-ಯಾವ ಕೊಡುಗೆ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
* ನಮ್ಮ ಸರ್ಕಾರವು ಆಯೋಜಿಸಿದ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸ್ವೀಕರಿಸಿದ 2,43,676 ಅಹವಾಲುಗಳಲ್ಲಿ ಶೇ 97ರಷ್ಟನ್ನು ಪರಿಹರಿಸಲಾಗಿದೆ. ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು AI ಚಾಲಿತ ತಂತ್ರಜ್ಞಾನಗಳಿಂದ ನವೀಕರಿಸಿ iPGRS-2.0 ಮೂಲಕ ಕರ್ನಾಟಕವನ್ನು ನಾಗರಿಕ ಕೇಂದ್ರಿತ ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿ ಇರಿಸಲಾಗುವುದು.
* ನಿವೃತ್ತ ಅಧಿಕಾರಿ ನೌಕರರ ವಿಶ್ರಾಂತಿ ವೇತನದ ಮಂಜೂರಾತಿ ಮತ್ತು ಬಟವಾಡೆ ವ್ಯವಸ್ಥೆಯನ್ನು ಖಜಾನೆ-2 ರ ಅಧೀನದಲ್ಲಿ ಸರಳೀಕರಿಸಲಾಗುವುದು.
* 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ, ಪಿಂಚಣಿ ಮತ್ತು ಕೆಲವು ನಿರ್ದಿಷ್ಟ ಭತ್ಯೆಗಳನ್ನು ಪರಿಷ್ಕರಿಸಿ ದಿನಾಂಕ 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗಿದೆ. ಇದಕ್ಕಾಗಿ ರಾಜ್ಯವು ವಾರ್ಷಿಕ 19,401 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ಭರಿಸುತ್ತಿದೆ.
* ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ (KSRSAC) DFNE ಜಿಐಎಸ್ (ಕೆ-ಜಿಐಎಸ್) ಪೋರ್ಟಲ್ನಲ್ಲಿ ಇಲಾಖೆಗಳ ಆಸ್ತಿಗಳ ಮಾಹಿತಿ ಲಭ್ಯವಿದ್ದು, 29 ಸಾವಿರಕ್ಕೂ ಹೆಚ್ಚು ಕಂದಾಯ ಗ್ರಾಮಗಳ ಹಿಸ್ಸಾ ನಕ್ಷೆಗಳನ್ನು ಡಿಜಿಟಲೀಕರಿಸಲಾಗಿದೆ. ಈ ಪೋರ್ಟಲ್ ಅನ್ನು ಆಧುನಿಕ ತಂತ್ರಜ್ಞಾನಗಳಾದ AI/ ML ಮತ್ತು ಇತರ ಪರಿಕರಗಳನ್ನು ಬಳಸಿ 2025-26ನೇ ಸಾಲಿನಿಂದ ಹಂತ ಹಂತವಾಗಿ 150 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
* ಕೃತಕ ಬುದ್ಧಿಮತ್ತೆ (AI) ಹಾಗೂ ಭೌಗೋಳಿಕ ಮಾಹಿತಿ ವ್ಯವಸ್ಥೆಯಂತಹ (GIS) ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಎಲ್ಲಾ ಇಲಾಖೆಗಳಲ್ಲಿ ಸುಧಾರಿತ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆಯನ್ನು ಪರಿಚಯಿಸಲಾಗುವುದು.
* ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ (SDC) ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ನೀಡಲಾಗುವುದು.
* ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದೆ. ಇದರಲ್ಲಿ ಪ್ರಮುಖವಾಗಿ DBT ವೇದಿಕೆಯ ಮೂಲಕ ಇಲ್ಲಿಯವರೆಗೆ ಸುಮಾರು 50,000 ಕೋಟಿ ರೂ. ವಿತರಿಸಲಾಗಿದೆ. ಮುಂದಿನ ವರ್ಷದಲ್ಲಿ ಸರ್ಕಾರದ ಎಲ್ಲಾ ನಗದು ಮತ್ತು ನಗದುರಹಿತ ಪ್ರಯೋಜನದ ಯೋಜನೆಗಳನ್ನು DBT ವೇದಿಕೆಗೆ ತರಲು ಸೂಕ್ತ ಕ್ರಮವಹಿಸಲಾಗುವುದು.
* KSWAN ಯೋಜನೆಯನ್ನು ರಾಜ್ಯದಾದ್ಯಂತ ಹೆಚ್ಚುವರಿ 10,000 ಕಛೇರಿಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ.
* ಕೃತಕ ಬುದ್ಧಿಮತ್ತೆ (AI) ಚಾಲಿತ ಆಡಳಿತವನ್ನು ಬಲಪಡಿಸಲು ಕರ್ನಾಟಕ AI ಕೋಶವನ್ನು ಸ್ಥಾಪಿಸಲಾಗಿದೆ. ಕಂಪ್ಯೂಟರ್ ವಿಷನ್, NLP, LLM ಮತ್ತು ಇತರ AL ತಂತ್ರಜ್ಞಾನಗಳನ್ನು ಬಳಸಿಕೊಂಡು, Al-ಆಧಾರಿತ ಆಡಳಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
* ರಾಜ್ಯದ ಬಹುತೇಕ ಎಲ್ಲಾ ಕಛೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಟಾನಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರವು ತನ್ನದೇ ಆದ ಇ-ಆಫೀಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗುವುದು.












Click it and Unblock the Notifications