Karnataka Budget 2023: ಬಜೆಟ್ ಮಂಡನೆ, ಗ್ಯಾರಂಟಿ ಜಾರಿಗೆ ಬೊಮ್ಮಾಯಿ ನೀಡಿದ ಸಲಹೆಗಳು
ಬೆಂಗಳೂರು, ಜಲೈ 06: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಭರವಸೆ ನೀಡಿರುವ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು ಅಭಿಪ್ರಾಯಪಟ್ಟರು.

ಚುನಾವಣೆ ಸಂದರ್ಭದಲ್ಲಿ ಗ್ಯಾರೆಂಟಿಗಳನ್ನು ಸಾಮಾನ್ಯ ಆಶ್ವಾಸನೆಗಳನ್ನೇ ವಿಶೇಷ ಎಂದು ಬಿಂಬಿಸಿದ್ದಾರೆ. ಗ್ಯಾರೆಂಟಿ ಗಳಿಗೆ ಜನರು ಮರುಳಾಗಿದ್ದಾರೊ ಇಲ್ಲವೋ ಗೊತ್ತಿಲ್ಲ. ಜನರು ಮನ್ನಣೆ ಕೊಟ್ಟಿದ್ದಾರೆ. ಜನರು ನೀವು ಕೊಟ್ಟ ಮಾತುಗಳನ್ನು ಹೆಚ್ಚು ನಂಬಿದ್ದಾರೆ. ಎಲ್ಲರಿಗೂ ಗೃಹ ಲಕ್ಷ್ಮಿ, ಎಲ್ಲರಿಗೂ 10 ಕೆಜಿ ಉಚಿತ ಅಕ್ಕಿ, ಎಲ್ಲರಿಗೂ ಗೃಹ ಜ್ಯೋತಿ, ಡಿಗ್ರಿಯಾದವರಿಗೆ ನಿರುದ್ಯೋಗ ಭತ್ಯೆ ಅಂತ ಹೇಳಿದ್ದೀರಿ. ಈಗ ಎಲ್ಲದಕ್ಕೂ ಕಂಡಿಷನ್ ಹಾಕಿ ಎಲ್ಲದಕ್ಕೂ ಏಜೆಂಟ್ ಗಳು ಹುಟ್ಟಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.
ಗ್ಯಾರಂಟಿಗಳಿಗೆ 20-25 ಸಾವಿರ ಕೋಟಿ ಮಾತ್ರವೇ ಖರ್ಚು
ಶಕ್ತಿ ಯೋಜನೆಯಡಿ ಬಸ್ ಪ್ರಯಾಣ ಮಾತ್ರ ಆರಂಭವಾಗಿದೆ. ಅಕ್ಕಿ ಬದಲು ದುಡ್ಡು (ತಲಾ 170) ಕೊಡುವುದಾಗಿ ಸರ್ಕಾರ ಹೇಳಿದೆ. ನೀವು ಕೊಡುವ ಹಣಕ್ಕೆ ಎರಡೂವರೆ ಕೆಜಿ ಅಕ್ಕಿ ಬರುತ್ತದೆ ಎಂದು ಬೊಮ್ಮಾಯಿ ಟೀಕಿಸಿದರು. ನೀವು ಘೋಷಣೆ ಮಾಡಿರುವಂತೆ ಎಲ್ಲ ಯೋಜನೆಗಳ ಜಾರಿಗೆ 52 ಸಾವಿರ ಕೋಟಿ ಖರ್ಚಾಗುತ್ತದೆ ಅಂತ ನೀವೆ ಹೇಳಿದ್ದೀರಿ. ಆದರೆ, ಎಲ್ಲದಕ್ಕೂ ಕಂಡಿಷನ್ ಹಾಕಿರೋದರಿಂದ ಸುಮಾರು 20 ರಿಂದ 25 ಸಾವಿರ ಕೊಟಿ ಮಾತ್ರ ಖರ್ಚಾಗಬಹುದು ಎಂದು ವಿವರಿಸಿದರು.

ರಾಜ್ಯದಲ್ಲಿ ಸರಕು ಸಾಗಾಣೆ ತೆರಿಗೆ (GST) ಸಂಗ್ರಹ ಹೆಚ್ಚಾಗಿದೆ. ಇತರ ತೆರಿಗೆ ಸಂಗ್ರಹ ಕೂಡ ಏರಿಕೆ ಆಗಿದೆ. ಈ ಸರ್ಕಾರ ಹೆಚ್ಚಿನ ಸಾಲ ತೆಗೆದುಕೊಳ್ಳುವ ಅಗತ್ಯವಿಲ್ಲ. ನಾನು ಕಳೆದ ಬಾರಿ ಬಜೆಟ್ ಮಂಡನೆ ಮಾಡಿದ್ದೇನೆ. 78 ಸಾವಿರ ಕೋಟಿ ಸಾಲ ತೆಗೆದುಕೊಳ್ಳಲು ಅವಕಾಶ ಇದ್ದು, ಅಷ್ಟನ್ನು ಮಾತ್ರ ಸಾಲ ತೆಗೆದುಕೊಂಡರೆ ಸಾಕಾಗುತ್ತದೆ ಎಂದರು.
ರಾಜ್ಯದ ಮೂಲ ಸೌಕರ್ಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮೀಸಲಿಟ್ಟ ಹಣವನ್ನು ಬಳಕೆ ಮಾಡಬಹುದು. ಎಲ್ಲ ನೀರಾವರಿ ಯೋಜನೆ, ಶಿಕ್ಷಣ ಇಲಾಖೆ ಯೋಜನೆ, ಕೃಷಿ ಹಾಗೂ ಸೇವಾ ವಲಯಕ್ಕೆ ಆದ್ಯತೆ ನೀಡಬೇಕು. ಅದನ್ನು ಬಿಟ್ಟು ಜನರ ದುಡ್ಡನ್ನು ಕಸಿದುಕೊಂಡು ಇನ್ನೊಂದು ಕಡೆ ಕೊಟ್ಟ ಹಾಗೆ ಆಗುತ್ತದೆ ಎಂದು ಅವರು ತಿಳಿಸಿದರು.












Click it and Unblock the Notifications