ಮಂಗಳವಾರದ ವಿಧಾನಸಭೆ ಕಲಾಪದ ಮುಖ್ಯಾಂಶಗಳು
ಬೆಂಗಳೂರು, ಮಾರ್ಚ್ 22 : ಬಜೆಟ್ ಅಧಿವೇಶನದ ಎರಡನೇ ದಿನದ ಕಲಾಪದಲ್ಲಿಯೂ ಎಸಿಬಿ ರಚನೆ ವಿಚಾರ ಸದ್ದು ಮಾಡುತ್ತಿದೆ. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಮಾಡಿರುವ ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. [ಎಸಿಬಿ ರಚನೆ : ಸಿದ್ದರಾಮಯ್ಯ ಸ್ಪಷ್ಟನೆಗಳು]
ಮಂಗಳವಾರ ಬೆಳಗ್ಗೆ 11ಗಂಟೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಎಸಿಬಿ ರಚನೆ ಪ್ರಸ್ತಾಪ ವಾಪಸ್ ಪಡೆಯಬೇಕು ಎಂದು ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದರಿಂದಾಗಿ ಕಲಾಪವನ್ನು 5 ನಿಮಿಷಗಳ ಕಾಲ ಮುಂದೂಡಲಾಯಿತು. [ಸದನದಲ್ಲಿ ಬಿಸಿ-ಬಿಸಿ ಚರ್ಚೆ, ಸಚಿವ ರಮಾನಾಥ ರೈ ನಿದ್ದೆ]

ನಂತರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಸಲಹೆಯಂತೆ ಧರಣಿ ಕೈಬಿಟ್ಟ ಬಿಜೆಪಿ ಸದಸ್ಯರು, ಚರ್ಚೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ಭ್ರಷ್ಟಾಚಾರ ನಿಗ್ರಹ ದಳ ರಚನೆ ಆದೇಶವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು. [ಎಸಿಬಿ ರಚನೆ : ಸರ್ಕಾರಕ್ಕೆ ಶೆಟ್ಟರ್ ಕೇಳಿದ ಪ್ರಶ್ನೆಗಳು]
ಜೂನ್ ತಿಂಗಳಿನಲ್ಲಿ ಕೆಲಸ ಆರಂಭ : ಬೆಂಗಳೂರು-ಮೈಸೂರು ನಡುವಿನ ಆರು ಪಥದ ರಸ್ತೆ ಕಾಮಗಾರಿ ಮೇ ಅಥವ ಜೂನ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಸ್.ಸಿ ಮಹದೇವಪ್ಪ ಅವರು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.
ಹೀಗಿರುವ ನಾಲ್ಕು ಪಥದ ರಸ್ತೆಯನ್ನು ಆರು ಪಥದ ರಸ್ತೆಯನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅಗತ್ಯ ಹಣಕಾಸು ನೆರವು ನೀಡುವಂತೆಯೂ ಮನವಿ ಮಾಡಿದ್ದಾರೆ ಎಂದು ಹೇಳಿದರು.
ಖಾಸಗೀಕರಣ ಮಾಡಿಲ್ಲ : ಬೆಂಗಳೂರಿನ ವೆಂಕಟಪ್ಪ ಆರ್ಟ್ ಗ್ಯಾಲರಿಯನ್ನು ಖಾಸಗೀಕರಣ ಮಾಡಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಸ್ಪಷ್ಟಪಡಿಸಿದ್ದಾರೆ. ಗ್ಯಾಲರಿ ಖಾಸಗೀಕರಣಕ್ಕೂ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 'ಆರ್ಟ್ ಗ್ಯಾಲರಿಯನ್ನು ಅಭಿವೃದ್ಧಿಪಡಿಸಲು ಖಾಸಗಿಯವರಿಗೆ ಗುತ್ತಿಗೆ ನೀಡಲಾಗಿದೆ. ಅಭಿವೃದ್ಧಿಪಡಿಸಿದ ನಂತರ ಗ್ಯಾಲರಿಯನ್ನು ಸರ್ಕಾರಕ್ಕೆ ಬಿಟ್ಟು ಕೊಡಲಿದ್ದಾರೆ. ಇದು ಖಾಸಗೀಕರಣ ಅಲ್ಲ' ಎಂದು ತಿಳಿಸಿದರು.












Click it and Unblock the Notifications