ಸರ್ಕಾರಿ ನೌಕರರ ಸಂಬಳ ಏರಿಕೆ ಮಾಡೋಲ್ಲ : ಸಿಎಂ
ಬೆಂಗಳೂರು, ಫೆ.20 : ರಾಜ್ಯ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಣೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರಿ ನೌಕರರಿಗೆ 2012ರಲ್ಲಿ ವೇತನ ಪರಿಷ್ಕರಣೆ ಮಾಡಲಾಗಿದೆ. ಸದ್ಯ ಪುನಃ ವೇತನ ಪರಿಷ್ಕರಣೆ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅವರು ವಿಧಾನಪರಿಷತ್ತಿಗೆ ತಿಳಿಸಿದ್ದಾರೆ.
ಗುರುವಾರ ವಿಧಾನಪರಿಷತ್ ಕಲಾಪದಲ್ಲಿ ಗೋ.ಮಧುಸೂದನ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, 2012ರಲ್ಲಿ ವೇತನ ನೌಕರರಿಗೆ ವೇತನ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ 6ನೇ ವೇತನ ಆಯೋಗದ ಪ್ರಕಾರ ವೇತನ ನೀಡುವ ಸಂಬಂಧ ವೇತನ ಸಮಿತಿ ಸರ್ಕಾರಕ್ಕೆ ಯಾವುದೇ ಶಿಫಾರಸು ಮಾಡಿಲ್ಲ. ಆದ್ದರಿಂದ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧಿಸಿದೆ. ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿದ್ದು, ಅವರ ಸಂಬಳಕ್ಕೆ ಸರ್ಕಾರ ಶೇ.40ರಷ್ಟು ಹಣವನ್ನು ಖರ್ಚು ಮಾಡುತ್ತಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಎ, ಬಿ ಮತ್ತು ಸಿ, ದರ್ಜೆಗಳ ಮನೆ ಬಾಡಿಗೆ ಭತ್ಯೆಯನ್ನೂ ಪರಿಷ್ಕರಿಸಲಾಗಿದೆ. ಆದ್ದರಿಂದ ಪ್ರಸ್ತುತ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ ಆಂಜನೇಯ : ಸರ್ಕಾರ ಹೊರಡಿಸಿದ್ದ ವಿದ್ಯಾರ್ಥಿ ವೇತನ ಕಡಿತ ಸುತ್ತೋಲೆ ವಿವಾದದ ಕುರಿತಂತೆ ವಿಧಾನಸಭೆಯಲ್ಲಿ ಗುರುವಾರ ಪ್ರತಿಪಕ್ಷಗಳು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರನ್ನು ತರಾಟೆಗೆ ತೆಗೆದುಕೊಂಡವು. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮುಷ್ಕರದಲ್ಲಿ ಪಾಲ್ಗೊಂಡರೆ ಅವರಿಗೆ ನೀಡಲಾಗುವ ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯ ಸೇರಿದಂತೆ ಸರ್ಕಾರದಿಂದ ಕೊಡುವ ವಿವಿಧ ಸೌಲಭ್ಯಗಳನ್ನು ಕಡಿತಗೊಳಿಸಲಾಗುವುದು ಎಂಬ ಸರ್ಕಾರದ ಸುತ್ತೋಲೆಯ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ವಿಷಯ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ವಿದ್ಯಾರ್ಥಿ ವೇತನ ಕಡಿತ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದಲ್ಲ. ಇದು 1977ರಿಂದಲೇ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿದೆ ಎಂದು ಸಮರ್ಥಿಸಿಕೊಂಡರು. ಇದರಿಂದ ಕೆರಳಿದ ವಿಕ್ಷಗಳು ಸರ್ಕಾರದ ವಿರುದ್ಧ ಧರಣಿ ಆರಂಭಿಸಿದವು. ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದ ಸಚಿವ ಆಂಜನೇಯ, ಮುಷ್ಕರದಲ್ಲಿ ಪಾಲ್ಗೊಂಡರೆ ಎಂಬ ಪದವನ್ನು ತೆಗೆದುಹಾಕಲಾಗುವುದು ಎಂದು ಹೇಳಿಕೆ ನೀಡಿದರು.
ಕುಡಿಯುವ ನೀರು ಪೂರೈಕೆಗೆ ಕ್ರಮ : ಬಿಬಿಎಂಪಿ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ವಿಧಾನಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು 66 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಬಿಬಿಎಂಪಿ ಮತ್ತು ಜಲಮಂಡಳಿ ಸಹಕಾರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.