ಉಪ ಚುನಾವಣೆ ಗುಪ್ತಚರ ವರದಿ : ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲು!
ಬೆಂಗಳೂರು, ನವೆಂಬರ್ 04 : 5 ಕ್ಷೇತ್ರಗಳ ಉಪ ಚುನಾವಣೆ ಮತದಾನ ಅಂತ್ಯಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಉಪ ಚುನಾವಣೆ ಫಲಿತಾಂಶದ ಬಗ್ಗೆ ಗುಪ್ತಚರ ಇಲಾಖೆ ಸಂಗ್ರಹಿಸಿದ ಮಾಹಿತಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಸೇರಿದೆ.
3 ಲೋಕಸಭಾ ಕ್ಷೇತ್ರ ಮತ್ತು 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಶನಿವಾರ ನಡೆದಿದೆ. ಶೇ 65.57 ರಷ್ಟು ಮತದಾನ ನಡೆದಿದ್ದು ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನವಾಗಿದೆ.
ಮತದಾನದ ಬಳಿಕ ಗುಪ್ತಚರ ಇಲಾಖೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಚುನಾವಣಾ ಫಲಿತಾಂಶದ ವರದಿಯನ್ನು ನೀಡಿದೆ. ನವೆಂಬರ್ 6ರಂದು ಮತ ಎಣಿಕೆ ನಡೆಯಲಿದ್ದು, ಯಾರಿಗೆ ದೀಪಾವಳಿ ಉಡುಗೊರೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಜಮಖಂಡಿಯಲ್ಲಿ ಶೇ 81.58, ರಾಮನಗರದಲ್ಲಿ ಶೇ 73.71 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರಗಳ ಪೈಕಿ ಬಳ್ಳಾರಿಯಲ್ಲಿ 63.85, ಶಿವಮೊಗ್ಗದಲ್ಲಿ 61.05 ಮತ್ತು ಮಂಡ್ಯದಲ್ಲಿ ಶೇ 53.93 ರಷ್ಟು ಮತದಾನ ನಡೆದಿದೆ....

ಮುಖ್ಯಮಂತ್ರಿಗಳಿಗೆ ವರದಿ
ಉಪ ಚುನಾವಣೆಯ ಮತದಾನದ ಬಳಿಕ ಗುಪ್ತಚರ ಇಲಾಖೆ ಹಲವು ಮೂಲಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಗುಪ್ತಚರ ಇಲಾಖೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವರದಿ ನೀಡಿದೆ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ಉಪ ಚುನಾವಣೆ ಫಲಿತಾಂಶ ದೀಪಾವಳಿ ಉಡುಗೊರೆ ನೀಡಲಿದೆ. ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ದೊರೆಯುವುದಿಲ್ಲ.

ರಾಮನಗರ, ಮಂಡ್ಯ
ರಾಮನಗರ ವಿಧಾನಸಭಾ ಕ್ಷೇತ್ರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಗೆಲುವು ಸಾಧಿಸಲಿದೆ. ಅರದಲ್ಲೂ ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಅನಿತಾ ಕುಮಾರಸ್ವಾಮಿ ಅವರು ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಮಂಡ್ಯದಲ್ಲಿ ಎಲ್.ಆರ್.ಶಿವರಾಮೇಗೌಡ ಅವರು ಗೆಲುವು ಸಾಧಿಸಲಿದ್ದಾರೆ. ಡಾ.ಸಿದ್ದರಾಮಯ್ಯ ಅವರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಜೆಡಿಎಸ್ ಎರಡೂ ಸ್ಥಾನದಲ್ಲಿ ಗೆಲ್ಲುವ ಮೂಲಕ ಕ್ಷೇತ್ರವನ್ನು ಉಳಿಸಿಕೊಳ್ಳಲಿದೆ ಎಂದು ಗುಪ್ತಚರ ಇಲಾಖೆ ವರದಿ ಹೇಳಿದೆ.

ಜಮಖಂಡಿಯಲ್ಲಿ ಕಾಂಗ್ರೆಸ್
ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಮತ್ತು ಕಾಂಗ್ರೆಸ್ನ ಆನಂದ್ ನ್ಯಾಮಗೌಡ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಅಂತಿಮವಾಗಿ ಆನಂದ್ ನ್ಯಾಮಗೌಡ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ಹೇಳಿದೆ.

ಬಳ್ಳಾರಿಯಲ್ಲಿ ಕಾಂಗ್ರೆಸ್ಗೆ ಜಯ
ಉಪ ಚುನಾವಣೆಯಲ್ಲಿಯೇ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ ಬಳ್ಳಾರಿ. ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಸಹೋದರಿ ಜೆ.ಶಾಂತ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಬಿ.ಶ್ರೀರಾಮುಲು ಅವರಿಗೆ ಮುಖಭಂಗವಾಗಲಿದ್ದು, ವಿ.ಎಸ್.ಉಗ್ರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ಹೇಳಿದೆ.

ಶಿವಮೊಗ್ಗದಲ್ಲಿ ತೀವ್ರ ಪೈಪೋಟಿ
ಶಿವಮೊಗ್ಗ ಲೋಕಸಭಾ ಕ್ಷೇತ್ರ ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಬಿ.ವೈ.ರಾಘವೇಂದ್ರ ಮತ್ತು ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ ಮಧು ಬಂಗಾರಪ್ಪ ನಡುವೆ ತೀವ್ರ ಪೈಪೋಟಿ ನಡೆಯಲಿದೆ.
ಗುಪ್ತಚರ ಇಲಾಖೆ ವರದಿ ಪ್ರಕಾರ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು ಗೆಲುವು ಸಾಧಿಸಲಿದ್ದಾರೆ. ಆದರೆ, ಗೆಲುವಿನ ಅಂತರ ಕಡಿಮೆ ಇರಲಿದೆ, ಮಧು ಬಂಗಾರಪ್ಪ ಅವರು ಹೆಚ್ಚು ಮತಗಳನ್ನು ಪಡೆದು ಪ್ರಬಲ ಪೈಪೋಟಿ ನೀಡಲಿದ್ದಾರೆ.

ನ.6ರಂದು ಫಲಿತಾಂಶ
ಉಪ ಚುನಾವಣೆಗಳ ಬಗ್ಗೆ ಗುಪ್ತಚರ ಇಲಾಖೆ ವರದಿ ಏನೇ ಬಂದರೂ ಜನರ ಅಭಿಪ್ರಾಯವನ್ನು ಯಾರೂ ಸಹ ಲೆಕ್ಕಹಾಕಲು ಸಾಧ್ಯವಿಲ್ಲ. ನವೆಂಬರ್ 6ರ ಮಂಗಳವಾರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಯಾರು ಗೆಲವು ಸಾಧಿಸಲಿದ್ದಾರೆ? ಎಂದು ಕಾದು ನೋಡಬೇಕು.












Click it and Unblock the Notifications