ಇದು ಉಪ ಚುನಾವಣೆಯೋ?, ಕುಟುಂಬ ರಾಜಕಾರಣವೋ?, ಅರಿಯದಾಗಿದೆ!
Recommended Video

ಬೆಂಗಳೂರು, ಅಕ್ಟೋಬರ್ 15 : ನವೆಂಬರ್ 3ರಂದು ನಡೆಯಲಿರುವ ಮೂರು ಲೋಕಸಭೆ, 2 ವಿಧಾನಸಭೆ ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಈ ಉಪ ಚುನಾವಣೆ ಕುಟುಂಬ ರಾಜಕಾರಣಕ್ಕೆ ಸಾಕ್ಷಿಯಾಗಲಿದೆ.
ಮೂರು ಪಕ್ಷಗಳು ಉಪ ಚುನಾವಣೆಗೆ ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಕುಟುಂಬದ ಸದಸ್ಯರೇ ಕಣದಲ್ಲಿದ್ದಾರೆ ಎಂಬುದು ಗಮನಿಸಬೇಕಾದ ಅಂಶ.
ಶಿವಮೊಗ್ಗ, ರಾಮನಗರ, ಬಳ್ಳಾರಿ ಮತ್ತು ಜಮಖಂಡಿ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಎಲ್ಲಾ ಪಕ್ಷಗಳ ನಾಯಕರು ಕುಟುಂಬ ಸದಸ್ಯರಿಗೆ ಉಪ ಚುನಾವಣೆ ಟಿಕೆಟ್ ಕೊಡಿಸಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರಲಿದ್ದಾರೆಯೇ?, ಕಾದು ನೋಡಬೇಕು.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳನ್ನು ಕುಟುಂಬ ರಾಜಕಾರಣ ಬಿಟ್ಟಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನಡೆಯತ್ತಿದ್ದ ಕುಟುಂಬ ರಾಜಕೀಯ, ಉಪ ಚುನಾವಣೆಯಲ್ಲಿಯೂ ಮುಂದುವರೆದಿದೆ. ಎಲ್ಲಿ, ಯಾರು ಅಭ್ಯರ್ಥಿ? ನೋಡಿ...

ಶಿವಮೊಗ್ಗ ಕ್ಷೇತ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಯಡಿಯೂರಪ್ಪ ಪುತ್ರ ಅಭ್ಯರ್ಥಿಯಾಗಿದ್ದಾರೆ.
ಶಿಕಾರಿಪುರ ಕ್ಷೇತ್ರದಲ್ಲಿಯೂ ವಿಧಾನಸಭೆ ಚುನಾವಣೆಯಲ್ಲಿ ಹೀಗೆ ಅಪ್ಪ-ಮಗ ಕ್ಷೇತ್ರವನ್ನು ಅದಲು ಬದಲು ಮಾಡಿಕೊಂಡಿದ್ದರು.

ರಾಮನಗರ ಕ್ಷೇತ್ರ
2018ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಗೆದ್ದಿದ್ದರು. ಅವರು ಚನ್ನಪಟ್ಟಣದಲ್ಲೂ ಗೆದ್ದ ಕಾರಣ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.
ಈಗ ಉಪ ಚುನಾವಣೆಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿ. ಅನಿತಾ ಕುಮಾರಸ್ವಾಮಿ ಅವರು ಗೆದ್ದು ಬಂದರೆ ಪತಿ, ಪತ್ನಿ ಇಬ್ಬರು ಒಟ್ಟಿಗೆ ವಿಧಾನಸಭೆ ಪ್ರವೇಶಿಸಬಹುದಾಗಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರ
ಬಿ.ಶ್ರೀರಾಮುಲು ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದರು. ಆಗ ಅವರು ಬಳ್ಳಾರಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈಗ ಉಪ ಚುನಾವಣೆ ಎದುರಾಗಿದ್ದು ಶ್ರೀರಾಮುಲು ಅವರ ಸಹೋದರಿ ಜೆ.ಶಾಂತ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಜಮಖಂಡಿ ವಿಧಾನಸಭಾ ಕ್ಷೇತ್ರ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಆಯ್ಕೆಯಾಗಿದ್ದರು. ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಪಕ್ಷ ಸಿದ್ದು ನ್ಯಾಮಗೌಡ ಪುತ್ರ ಆನಂದ್ ಸಿದ್ದು ನ್ಯಾಮೇಗೌಡಗೆ ಉಪ ಚುನಾವಣೆ ಟಿಕೆಟ್ ನೀಡಿದೆ.












Click it and Unblock the Notifications