ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಯುಟರ್ನ್ ಹೊಡೆದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು, ಮಾ. 18: ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಯು ಟರ್ನ್ಹೊಡೆದಿದ್ದಾರೆ. ಅವರು ಹೀಗೆ ಯು ಟರ್ನ್ ಹೊಡೆದಿರುವುದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಅಚ್ಚರಿಯನ್ನುಂಟು ಮಾಡಿದೆ. ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಈ ಹಿಂದೆಯೆ ಪ್ರಕಟಿಸಿದ್ದರು.
ಕುಮಾರಸ್ವಾಮಿ ಅವರ ಹೇಳಿಕೆ ಆಧರಿಸಿ ಅವರು ಹಾಗೆ ಹೇಳಿದ್ದರು. ಆದರೆ ಇದೀಗ ಕುಮಾರಸ್ವಾಮಿ ಅವರೇ ಯು ಟರ್ನ್ ಹೊಡೆದಿದ್ದಾರೆ. ಅದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಣ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅದಕ್ಕೆ ಸೂಕ್ತ ಕಾರಣವನ್ನೂ ಕೊಟ್ಟಿದ್ದಾರೆ.
ಬೆಳಗಾವಿ ಲೋಕಸಭೆ, ರಾಯಚೂರು ಜಿಲ್ಲೆ ಮಸ್ಕಿ ಹಾಗೂ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಇದೇ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ನಮ್ಮಲ್ಲಿ ಹಣವಿಲ್ಲ, ಹೀಗಾಗಿ ಸ್ಪರ್ಧೆ ಮಾಡಲ್ಲ ಎಂದಿದ್ದರು!
ಜೆಪಿ ಭವನದಲ್ಲಿ ನಡೆದ ಪದಾಧಿಕಾರಿಗಳ ಸಭೆಯ ಬಳಿಕ ಮಾತನಾಡಿರುವ ಎಚ್ಡಿ ಕುಮಾರಸ್ವಾಮಿ ಅವರು ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ಮಾತನಾಡಿದ್ದ ಅವರು ಆರ್ಥಿಕ ಕಾರಣದಿಂದ ನಮ್ಮ ಅಭ್ಯರ್ಥಿಗಳು ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಮ್ಮಲ್ಲಿ ಹಣ ಬಲವಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಹೇಳಿದಂತೆ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದಿಲ್ಲ ಎಂದಿದ್ದರು.
ನಾವು ನಿರ್ಧಾರ ಬದಲಿಸಲು ಸಿದ್ದರಾಮಯ್ಯ ಕಾರಣ!
ಇದೀಗ ತಮ್ಮ ಹೇಳಿಕೆಗೆ ಹಿಂಪಡೆದಿರುವ ಕುಮಾರಸ್ವಾಮಿ ಅವರು, ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ. ಹಾಗೂ ಅದಕ್ಕೆ ವಿಪಕ್ಷ ನಾಯಕ ಕಾರಣ ಎಂದು ಸಿದ್ದರಾಮಯ್ಯ ಅವರ ಕಡೆಗೆ ಪರೋಕ್ಷವಾಗಿ ಬೆರಳು ತೋರಿಸಿದ್ದಾರೆ.
ಜೆಡಿಎಸ್ ಪಕ್ಷ ಬಿಜೆಪಿ 'ಬಿ ಟೀಂ' ಎಂದಿದ್ದರು
ಜೆಡಿಎಸ್ ಬಿಜೆಪಿಗೆ ಹತ್ತಿರವಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ (ಸಿದ್ದರಾಮಯ್ಯ) ಹೇಳುತ್ತಿದ್ದಾರೆ. ನಾವೇನು ಯಾವುದೇ ಪಕ್ಷದ ಬಳಿ ಹೋಗಿಲ್ಲ. ಕಳೆದ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ವ್ಯವಸ್ಥಿತವಾಗಿ ನಮ್ಮ ಪಕ್ಷವನ್ನು ಬಿಜೆಪಿ ಬಿ ಟೀಂ ಎನ್ನುವ ಮೂಲಕ ನಮ್ಮ ಗೆಲುವಿನ ಸಂಖ್ಯೆಯನ್ನು ಕಡಿಮೆ ಮಾಡಿದ್ದರು. ಇಲ್ಲದಿದ್ದರೆ ಕನಿಷ್ಠ 60 ಸ್ಥಾನಗಳನ್ನು ನಾವು ಗೆಲ್ಲುತ್ತಿದ್ದೆವು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಹೀಗಾಗಿ ಈಗ ಉಪ ಚುನಾವಣೆಯಲ್ಲಿ ನಾವು ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹಾಕುತ್ತಿದ್ದೇವೆ ಎಂದು ಎಚ್ಡಿಕೆ ಸ್ಪಷ್ಟಪಡಿಸಿದ್ದಾರೆ.
ಬಸವಕಲ್ಯಾಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ
ರಾಯಚೂರು ಜಿಲ್ಲೆಯಲ್ಲಿ ಐದರಿಂದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಜೆಡಿಎಸ್ಗೆ ಸಾಮರ್ಥ್ಯವಿದೆ. ಮುಸ್ಲೀಂ ಸಮಾಜ ನಮ್ಮ ಪಕ್ಷದ ಬಗ್ಗೆ ಬೇರೆ ರೀತಿಯ ಭಾವನೆ ಮೂಡಿಸಿದ್ದಾರೆ. ಹಾಗಾಗಿಯೇ ಇಡೀ ರಾಜ್ಯಕ್ಕೆ ಒಂದು ಸಂದೇಶ ರವಾನೆಯಾಗಬೇಕು ಎಂಬ ಕಾರಣಕ್ಕೆ ಬಸವಕಲ್ಯಾಣ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿ ಮುಸ್ಲೀಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದೇವೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ವರದಿ ತರಿಸಿಕೊಂಡಿದ್ದೇನೆ. ಈ ಹಿಂದೆ ಅಲ್ಲಿ ನಮ್ಮ ಪಕ್ಷ 7 ಬಾರಿ ಗೆದ್ದಿದೆ. ಹೀಗಾಗಿ ನಮಗೆ ಅಲ್ಲಿ ಬಲವಿದೆ. ಹೀಗಾಗಿ ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಸೈಯದ್ ಯಾಸ್ರಬ್ ಅಲಿ ಖಾದ್ರಿ ಅವರು ಈ ಬಾರಿ ಜೆಡಿಎಸ್ನಿಂದ ಉಪ ಚುನಾಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದಿದ್ದಾರೆ.
ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಹಾಗು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Recommended Video
ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದಿದ್ದೇವು
ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಹೆಚ್.ಡಿ. ದೇವೇಗೌಡರು ಘೋಷಣೆ ಮಾಡಿದ್ದು ನಿಜ. ಆದರೆ ಕಾರ್ಯಕರ್ತರನ್ನು ಒಗ್ಗಟ್ಟಾಗಿಡಬೇಕು. ಮುಂದಿನ ಸಾರ್ವತ್ರಿಕ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕೆಂಬ ಕಾರಣಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.