ಉಪ ಚುನಾವಣೆ : ಸ್ಟಾರ್ ಪ್ರಚಾರಕರಲ್ಲಿ ಅನಂತ್ ಕುಮಾರ್ ಹೆಗಡೆ ಇಲ್ಲ!
Recommended Video

ಬೆಂಗಳೂರು, ಅಕ್ಟೋಬರ್ 25 : ಮೂರು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣೆಗೆ ಕೇವಲ 9 ದಿನಗಳು ಬಾಕಿ ಇದ್ದು, ಪ್ರಚಾರ ಬಿರುಸಿನಿಂದ ಸಾಗಿದೆ.
ಚುನಾವಣಾ ಆಯೋಗಕ್ಕೆ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ನೀಡಿದೆ. ಐದೂ ಕ್ಷೇತ್ರಗಳಿಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಟಾರ್ ಪ್ರಚಾರಕರು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನ.6ರಂದು ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಸಚಿವ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಆದರೆ, ಅವರು ಅನಾರೋಗ್ಯದಿಂದ ಈಗ ಚೇತರಿಸಿಕೊಳ್ಳುತ್ತಿದ್ದು, ಉಪ ಚುನಾವಣೆಗೆ ಪ್ರಚಾರ ನಡೆಸುವುದಿಲ್ಲ.
ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿದ್ದರು. ಆದರೆ, ಉಪ ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ. ಹೈಕಮಾಂಡ್ ನಾಯಕರ ಸೂಚನೆಯಂತೆ ಅವರ ಹೆಸರು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.....

ಸ್ಟಾರ್ ಪ್ರಚಾರಕರು
ಬಿಜೆಪಿ ಉಪ ಚುನಾವಣೆಯಲ್ಲಿ ಪ್ರಚಾರ ನಡೆಸಲು 38 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಿದ್ಧಪಡಿಸಿದೆ. ಕೇಂದ್ರ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಸೇರಿ ಪ್ರಚಾರಕರ ಪಟ್ಟಿಯಲ್ಲಿ ಹಲವು ನಾಯಕರಿದ್ದಾರೆ. ಉಪ ಚುನಾವಣೆಗೆ 9 ದಿನಗಳು ಬಾಕಿ ಇದ್ದು, ನಾಯಕರು ವಿವಿಧ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಈಗಾಗಲೇ ಅವರು ಮಂಡ್ಯ, ಶಿವಮೊಗ್ಗ, ಜಮಖಂಡಿಯಲ್ಲಿ ಪ್ರಚಾರ ನಡೆಸಿದ್ದಾರೆ. ರಾಮನಗರ, ಬಳ್ಳಾರಿಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಯಾವ-ಯಾವ ನಾಯಕರು
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್, ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ ಮುಂತಾದ ನಾಯಕರು ಇದ್ದಾರೆ. ಆದರೆ, ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಆನಾರೋಗ್ಯದ ಕಾರಣದಿಂದಾಗಿ ಪ್ರಚಾರದಲ್ಲಿ ಪಾಲ್ಗೊಳ್ಳುವುದಿಲ್ಲ. ಡಿ.ವಿ.ಸದಾನಂದ ಗೌಡರಿಗೆ ರಾಮನಗರ ಉಪ ಚುನಾವಣೆಯ ಉಸ್ತುವಾರಿಯನ್ನು ವಹಿಸಲಾಗಿದೆ.

ಅನಂತ್ ಕುಮಾರ್ ಹೆಗಡೆ ಇಲ್ಲ
ಅಚ್ಚರಿ ಎಂಬಂತೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ. 2018ರ ವಿಧಾನಸಭೆ ಚುನಾವಣೆಯಲ್ಲಿ ಅನಂತ್ ಕುಮಾರ್ ಹೆಗಡೆ ಸ್ಟಾರ್ ಪ್ರಚಾರಕರಾಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಆದರೆ, ಉಪ ಚುನಾವಣೆಯಲ್ಲಿ ಅವರನ್ನು ದೂರವಿಡಲಾಗಿದೆ. ಇದಕ್ಕೆ ಕಾರಣ ಇನ್ನೂ ಬಹಿರಂಗವಾಗಿಲ್ಲ.

ದಲಿತ, ಅಲ್ಪ ಸಂಖ್ಯಾತ ಮತ
ಉಪ ಚುನಾವಣೆ ಎದುರಾಗಿರುವ ಎಲ್ಲಾ ಕ್ಷೇತ್ರಗಳಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ ವರ್ಗದ ಮತಗಳು ಹೆಚ್ಚಿವೆ. ಒಂದು ವೇಳೆ ಅನಂತ್ ಕುಮಾರ್ ಹೆಗಡೆ ಅವರು ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದರೆ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ, ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅವರನ್ನು ಹೊರಗಿಡಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications