ಕರ್ನಾಟಕ ಲೋಕಸಭೆ, ವಿಧಾನಸಭೆ ಉಪಚುನಾವಣೆಗಳಿಗೆ ಮುಹೂರ್ತ ನಿಗದಿ: ನ.3ರಂದು ಮತದಾನ
Recommended Video
ನವದೆಹಲಿ, ಅಕ್ಟೋಬರ್ 6: ವಿವಿಧ ಕಾರಣಗಳಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಸಕಭಾ ಕ್ಷೇತ್ರಗಳು ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ದಿನ ಉಪಚುನಾವಣೆ ನಡೆಯಲಿದೆ.
ನವದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್, ರಾಜ್ಯದಲ್ಲಿನ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ಒಂದೇ ಹಂತದಲ್ಲಿ ನಡೆಯಲಿದೆ. ನ. 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
LIVE: 5 ರಾಜ್ಯಗಳ ವಿಧಾನಸಭೆ ಚುನಾವಣೆ: ದಿನಾಂಕ ಘೋಷಿಸಿದ ಚು.ಆಯೋಗ
ಛತ್ತೀಸ್ ಗಢದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೊದಲ ಹಂತ(18 ವಿಧಾನಸಭಾ ಕ್ಶಶೇತ್ರ) ನವೆಂಬರ್ 12(ಸೋಮವಾರ) ರಂದು ನಡೆಯಲಿದೆ, ಛತ್ತೀಸ್ ಗಢ ಎರಡನೇ ಹಂತ ನವೆಂಬರ್ 20(ಮಂಗಳವಾರ) ರಂದು ನಡೆಯಲಿದೆ.
ರಾಜಸ್ಥಾನ ಮತ್ತು ತೆಲಂಗಾಣಗಳಲ್ಲಿ ಒಂದೇ ಹಂತದ ಮತದಾನ ನಡೆಯಲಿದ್ದು ಡಿಸೆಂಬರ್ 7(ಶುಕ್ರವಾರ)ರಂದು ಚುನಾವಣೆ ನಡೆಯಲಿದೆ. ಎಲ್ಲಾ ರಾಜ್ಯಗಳ ಚುನಾವಣಾ ಫಲಿತಾಂಶವೂ ಡಿಸೆಂಬರ್ 11 ಮಂಗಳವಾರದಂದು ಹೊರಬೀಳಲಿದೆ.
ಮಧ್ಯಪ್ರದೇಶ ಮತ್ತು ಮಿಜೋರಾಂಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನವೆಂಬರ್ 28 ರಂದು ಮತದಾನ ನಡೆಯಲಿದೆ.
ಅ.16ರಂದು ನಾಮಪತ್ರ ಸಲ್ಲಿಕೆ
ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ ಕ್ಷೇತ್ರಗಳಿಗೆ ಮತ್ತು ರಾಮನಗರ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3ರಂದು (ಶನಿವಾರ) ಉಪ ಚುನಾವಣೆ ನಡೆಯಲಿದೆ. ನ. 6ರಂದು (ಮಂಗಳವಾರ) ಫಲಿತಾಂಶ ಪ್ರಕಟವಾಗಲಿದೆ
ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಅ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ. 17ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು. ಅ. 20ರಂದು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನವಾಗಿದೆ.
5 ರಾಜ್ಯಗಳ ವಿಧಾನಸಭಾ ಚುನಾವಣೆ: ಸವಿವರ ವೇಳಾಪಟ್ಟಿ
ಶಿವಮೊಗ್ಗ ಲೋಕಸಭೆ ಕ್ಷೇತ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ 2009ರ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಸಂಸದರಾಗಿ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು, ಸ್ವಕ್ಷೇತ್ರವಾದ ಶಿಕಾರಿಪುರದಿಂದ ಮತ್ತೆ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ನ ಜಿ.ಬಿ. ಮಾಲತೇಶ್ ವಿರುದ್ಧ ಜಯಳಿಸಿದ್ದರು. ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಮಂಡ್ಯ ಲೋಕಸಭೆ ಕ್ಷೇತ್ರ
2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ನ ರಮ್ಯಾ ಸೋಲು ಅನುಭವಿಸಿದ್ದರು. ಆದರೆ, 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಬೆಂಬಲಿತ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸೋಲಿಸಿದ್ದರು. ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳ್ಳಾರಿ ಲೋಕಸಭೆ ಕ್ಷೇತ್ರ
ಬಳ್ಳಾರಿಯ ಸಂಸದರಾಗಿದ್ದ ಬಿ. ಶ್ರೀರಾಮುಲು, ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿದಿದ್ದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರೆ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ನ ಯೋಗೇಶ್ ಬಾಬು ವಿರುದ್ಧ ಭರ್ಜರಿ ಜಯಗಳಿಸಿದ್ದರು. ಅವರ ರಾಜೀನಾಮೆಯಿಂದ ತೆರವಾಗಿರುವ ಬಳ್ಳಾರಿ ಲೋಕಸಭೆಗೆ ಉಪ ಚುನಾವಣೆ ನಡೆಯಬೇಕಿದೆ.
ರಾಮನಗರ ಚುನಾವಣೆ
ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಿಂದಲೂ ಸ್ಪರ್ಧಿಸಿ ಗೆದ್ದಿದ್ದರು. ರಾಮನಗರದಲ್ಲಿ ಕಾಂಗ್ರೆಸ್ನ ಇಕ್ಬಾಲ್ ಹುಸೇನ್ ಅವರನ್ನು ಸೋಲಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಅವರನ್ನು ಮಣಿಸಿದ್ದರು. ಬಳಿಕ ಅವರು ಸ್ವಕ್ಷೇತ್ರವಾದ ರಾಮನಗರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಜೆಡಿಎಸ್ ಪ್ರಾಬಲ್ಯ ಇರುವ ರಾಮನಗರದಲ್ಲಿ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.
ಜಮಖಂಡಿ ವಿಧಾನಸಭೆ
ಸಿದ್ದು ನ್ಯಾಮಗೌಡ ಅವರ ಅಕಾಲಿಕ ಮರಣದಿಂದ ತೆರವಾದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯನ್ನು ಸಮೀಪದ ಮತಗಳಿಂದ ಸೋಲಿಸಿದ್ದ ಕಾಂಗ್ರೆಸ್ನ ಸಿದ್ದು ನ್ಯಾಮಗೌಡ, ಮೇ 28ರಂದು ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.