Karnataka Cabinet: ಮೇ 27 ರಂದು ಪ್ರಮಾಣ ವಚನ ಸ್ವೀಕರಿಸಲಿರುವ 24 ಸಚಿವರು
ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. 24 ಸಚಿವರು ಮೇ 27ರಂದು ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಸರ್ಕಾರದ ಮನವಿಯಂತೆ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಇನ್ನೂ ಸಚಿವರ ಪಟ್ಟಿ ಅಧಿಕೃತವಾಗಿ ಹೊರಬಿದ್ದಿಲ್ಲವಾದರೂ, ದೆಹಲಿಯಲ್ಲಿ ಕೊನೆ ಹಂತದ ಕಸರತ್ತು ನಡೆಯುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನ ಮಾಡುತ್ತಿದ್ದಾರೆ.

ಕಾಂಗ್ರೆಸ್ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿರುವುದು ಕೂಡ ಹೈಕಮಾಂಡ್ಗೆ ಸಚಿವ ಸ್ಥಾನ ಅಂತಿಮಗೊಳಿಸುವಲ್ಲಿ ತೊಡಕಾಗಿದೆ. ಹಿರಿಯ ಶಾಸಕರು ಸಚಿವ ಸಂಪುಟ ಸೇರ್ಪಡೆ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ತಮ್ಮ ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿ ನಡೆಸುತ್ತಿದ್ದಾರೆ.
ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಸೇರಿದಂತೆ ಹಿರಿಯರು ಸಚಿವ ಸಂಪುಟ ಸೇರಲು ಡಿ.ಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ತಮ್ಮ ಆಪ್ತರಾದ ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್ ಅವರನ್ನು ಸಂಪುಟಕ್ಕೆ ಸೇರಿಸಲು ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಸಿದ್ದರಾಮಯ್ಯ ಅವರು ವಿರೋಧಿಸಿದ್ದು, ಒಂದೇ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ಬೇಡ ಎಂದಿದ್ದಾರೆ ಎನ್ನಲಾಗಿದೆ. ಇನ್ನೂ ನಾಲ್ಕೈದು ಸಚಿವರ ಹೆಸರು ಅಂತಿಮವಾಗಿಲ್ಲ, ತಡರಾತ್ರಿವರೆಗೂ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಂದೂ ಕೂಡ ದೆಹಲಿಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆ ಇದ್ದು. ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮ್ನಲ್ಲಿ ಸಭೆ ನಡೆಯುತ್ತಿದ್ದು, ಸಚಿವರ ಪಟ್ಟಿ ಅಂತಿಮವಾದ ಬಳಿಕವೇ ಬೆಂಗಳೂರಿಗೆ ವಾಪಸಾಗಲಿದ್ದಾರೆ.












Click it and Unblock the Notifications