ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು, ಸೆಪ್ಟೆಂಬರ್ 27 : ಕರ್ನಾಟಕ ಸರ್ಕಾರ ಬಹು ಚರ್ಚಿತ 'ಮೌಢ್ಯ ಪ್ರತಿಬಂಧಕ ಕಾಯ್ದೆ' ಜಾರಿಗೆ ತರಲು ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆ ಮಾಡಲು ಒಪ್ಪಿಗೆ ನೀಡಲಾಗಿದೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಮೌಢ್ಯ ಪ್ರತಿಬಂಧಕ ಕಾಯ್ದೆ' ಜಾರಿಗೆ ತರಲು ಒಪ್ಪಿಗೆ ಸಿಕ್ಕಿದೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತ ಮಸೂದೆ ಮಂಡನೆ ಮಾಡಲಾಗುತ್ತದೆ.
ಮೂಢನಂಬಿಕೆ ಮಸೂದೆ : ಸಿಎಂ, ಸಚಿವರ ಗೊಂದಲ
ಮಾಟ-ಮಂತ್ರಕ್ಕೆ ಬ್ರೇಕ್ ಹಾಕಲಿದೆ ಸರ್ಕಾರ!
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಈ ಕುರಿತು ಮಾಹಿತಿ ನೀಡಿದರು. 'ಮಹಾರಾಷ್ಟ್ರ ರಾಜ್ಯದ ಮಾದರಿಯಲ್ಲಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ಈ ಕಾಯ್ದೆ ಜಾರಿಗೆ ಬಂದರೆ ಬೆತ್ತಲೆ ಸೇವೆಗೆ ಸಂಪೂರ್ಣವಾಗಿ ನಿಷೇಧ ಹೇರಲಾಗುತ್ತದೆ' ಎಂದರು.
'ಮಡೆಸ್ನಾನ, ದೇವರ ಹೆಸರಿನಲ್ಲಿ ಹಿಂಸೆಗೆ ಅವಕಾಶ ನೀಡುವುದಿಲ್ಲ. ಜ್ಯೋತಿಷ್ಯ, ವಾಸ್ತು ಶಾಸ್ತ್ರಕ್ಕೆ ಮಸೂದೆಯಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ' ಎಂದು ಜಯಚಂದ್ರ ಸ್ಪಷ್ಟಪಡಿಸಿದರು.
'ಸಮಾಜದಲ್ಲಿರುವ ಮೌಡ್ಯ ಮತ್ತು ಕಂದಾಚಾರ ನಿಗ್ರಹಕ್ಕಾಗಿ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಸರ್ಕರ ಬದ್ಧವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು.