ಬ್ರಾಹ್ಮಣರಿಗೆ ಕೊಟ್ಟ ಭರವಸೆ ಈಡೇರಿಸಿದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 15 : ಬ್ರಾಹ್ಮಣ ಸಮುದಾಯದವರಿಗೆ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈಡೇರಿಸಿದ್ದಾರೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದ್ದು, ಮಂಡಳಿಗೆ 25 ಕೋಟಿ ಅನುದಾನ ನೀಡಲು ಅನುಮೋದನೆ ಸಿಕ್ಕಿದೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಸಬಲೀಕರಣಕ್ಕಾಗಿ ಮಂಡಳಿಯನ್ನು ಸ್ಥಾಪನೆ ಮಾಡಲಾಗುತ್ತದೆ. ಕಂದಾಯ ಇಲಾಖೆಯ ಅಧೀನದಲ್ಲಿ ಈ ಮಂಡಳಿ ಕಾರ್ಯ ನಿರ್ವಹಣೆ ಮಾಡಲಿದೆ.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, 'ವಿದ್ಯಾರ್ಥಿ ವೇತನ, ಸ್ವ ಉದ್ಯೋಗ ಸೃಷ್ಟಿ, ಕಡಿಮೆ ಬಡ್ಡಿದರದಲ್ಲಿ ಸಾಲ, ಸಾಮೂಹಿಕ ವಿವಾಹ ಹಾಗೂ ಉಪನಯನ ಆಯೋಜನೆ, ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಪಿಂಚಣಿ ನೀಡುವ ಕೆಲಸಗಳನ್ನು ಮಂಡಳಿ ಮಾಡಲಿದೆ' ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ವಿಪ್ರ ಸಮಾವೇಶಕ್ಕೆ ಚಾಲನೆ ನೀಡಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುತ್ತದೆ. ಸಮಾಜದ ಅಭಿವೃದ್ಧಿಗೆ 100 ಕೋಟಿ ರೂ. ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದರು.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ಬಳಿಕ ಮಂಡಿಸಿದ್ದ 2018-19ನೇ ಸಾಲಿನ ಬಜೆಟ್ನಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಮತ್ತು 25 ಕೋಟಿ ಅನುದಾನ ನೀಡುವ ಘೋಷಣೆ ಮಾಡಿದ್ದರು. ಈಗ ಅದಕ್ಕೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ.












Click it and Unblock the Notifications