ಸೆಪ್ಟೆಂಬರ್ 12 ರಿಂದ ಹತ್ತು ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ
ಬೆಂಗಳೂರು ಆಗಸ್ಟ್ 25: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ವಿಧಾನಸೌಧದಲ್ಲಿ ಸೆಪ್ಟೆಂಬರ್ 12 ರಿಂದ 10 ದಿನಗಳ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ವಿಪಕ್ಷಗಳು ಅಧಿವೇಶನದಲ್ಲಿ ಧ್ವನಿ ಎತ್ತಲು ಸಜ್ಜಾಗುತ್ತಿವೆ.
40% ಕಮಿಷನ್ ಆರೋಪ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟವನ್ನು ರೂಪಿಸಲು ಕಾಂಗ್ರೆಸ್ ಮುಂದಾಗಿದೆ. ರಾಜ್ಯ ಸರ್ಕಾರದ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಈ ಬಗ್ಗೆ ಮುಂಗಾರು ಅಧಿವೇಶನದಲ್ಲಿ ವಿಪಕ್ಷ ನಾಯಕ ಚರ್ಚೆಗೆ ಒತ್ತಾಯಿಸಿದ್ದಾರೆ.
ಬಿಲ್ ಬಾಕಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರದ ಇಲಾಖೆಗೆಗಳು ಶೇ40 ಕಮಿಷನ್ ಕೇಳುತ್ತವೆ ಎಂದು ಗುತ್ತಿಗೆದಾರರ ಸಂಘ ಆರೋಪ ಮಾಡಿತ್ತು. ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮಾಡಿದ್ದ ಗಂಭೀರ ಸ್ವರೂಪದ ಆರೋಪದಿಂದಾಗಿ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದ ಸಂಘದ ಪದಾಧಿಕಾರಿಗಳು ಕೆಲವೊಂದು ಬೇಡಿಕೆಗಳನ್ನು ಸಿಎಂ ಮುಂದೆ ಇಟ್ಟಿದ್ದರು.

ಇದಾದ ಬಳಿಕ ಯಾವುದೇ ಬಹಿರಂಗವಾದ ಹೇಳಿಕೆಗಳನ್ನು ನೀಡಿರಲಿಲ್ಲ. ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಮೂಲಕ ಶೇ. 40 ಕಮಿಷನ್ ಆರೋಪದ ವಿರುದ್ಧ ಕಾಂಗ್ರೆಸ್ ನೇರ ಹೋರಾಟಕ್ಕೆ ಮುಂದಾಗುವ ಸೂಚನೆ ನೀಡಿದೆ.












Click it and Unblock the Notifications