ಸಿಇಟಿ ಗೊಂದಲಕ್ಕೆ ತೆರೆಎಳೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿ. 20 : ಈ ಶೈಕ್ಷಣಿಕ ವರ್ಷ ವೃತ್ತಿ ಶಿಕ್ಷಣ ಪ್ರವೇಶ ಕುರಿತ 2006 ರ ವಿಧೇಯಕ ಜಾರಿಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರಿಂದ ಕಳೆದ ಹಲವು ದಿನಗಳಿಂದ ಉಂಟಾಗಿದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ. ರಾಜ್ಯಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಜಯ ದೊರಕಿದೆ.
ಶುಕ್ರವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವರಾದ ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ್, ಟಿ.ಬಿ.ಜಯಚಂದ್ರ, ಡಾ. ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ಸಭೆ ನಡೆಸಿದರು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು, ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ವೃತ್ತಿ ಶಿಕ್ಷಣ ಪ್ರವೇಶ ಕುರಿತ 2006 ರ ವಿಧೇಯಕ ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಈ ಕಾಯಿದೆಯನ್ನು 2006 ರಲ್ಲಿ ಪಾಸು ಮಾಡಿರುವುದು ಕುಮಾರಸ್ವಾಮಿ, ಯಡಿಯೂರಪ್ಪ ನೇತೃತ್ವದ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ. ಇದನ್ನು ತಂದದ್ದು ನಾವಲ್ಲ. ಇದರ ಅನ್ವಯ ಶುಲ್ಕ ನಿಗದಿ ಮತ್ತು ಪ್ರವೇಶಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಮೇಲುಸ್ತುವಾರಿಗೆ ಸಮಿತಿಗೆ ಸೂಚಿಸಲಾಗಿದೆ. ಇನ್ನೂ ವರದಿ ಸಲ್ಲಿಕೆಯಾಗಿಲ್ಲ. ಆದ್ದರಿಂದ ಈ ಶೈಕ್ಷಣಿಕ ವರ್ಷದಿಂದ ವಿಧೇಯಕ ಜಾರಿಗೆ ತರುವುದಿಲ್ಲ ಎಂದು ಹೇಳಿದರು. [ವೃತ್ತಿ ಶಿಕ್ಷಣ ಈ ವರ್ಷ ದುಬಾರಿ ಆಗಲ್ಲ]
ವೃತ್ತಿ ಶಿಕ್ಷಣ ಪ್ರವೇಶ ಕುರಿತ 2006 ರ ವಿಧೇಯಕ ಜಾರಿಗೊಳಿಸಲು ಸರ್ಕಾರ ತಯಾರಿ ಮಾಡಿಕೊಂಡಿದೆ ಎಂದು ರಾಜ್ಯಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು. ಕಾಯ್ದೆ ಜಾರಿಗೆ ಬಂದರೆ, ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೆಟ್ಟು ಬೀಳಲಿದೆ, ಆದ್ದರಿಂದ ಸರ್ಕಾರ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದರು.
ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲೂ ಸಿಇಟಿ ಗೊಂದಲ ಇತ್ಯರ್ಥಗೊಳಿಸುವಂತೆ ಹಿರಿಯ ಸಚಿವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು. ಸಿಇಟಿ ಗೊಂದಲದಿಂದಾಗಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಬರುವ ಸನ್ನಿವೇಶ ನಿರ್ಮಾಣ ಆಗುತ್ತಿದೆ. ಆದ್ದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂಗೆ ಮನವಿ ಮಾಡಿದ್ದರು. [ಸಂಪುಟ ಸಭೆಯ ನಿರ್ಣಯಗಳು]












Click it and Unblock the Notifications