ಕರ್ನಾಟಕ ಸಿಇಟಿ: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಅಣಕು ಪರೀಕ್ಷೆ
ಬೆಂಗಳೂರು, ಆಗಸ್ಟ್ 11: ಕರ್ನಾಟಕ ಸಿಇಟಿ 2021 ಪರೀಕ್ಷೆಯು ಆಗಸ್ಟ್ 28 ರಿಂದ 30ರವರೆಗೆ ನಡೆಯಲಿದೆ. ಕರ್ನಾಟಕದ ಸುಮಾರು 500 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಇಟಿ ಪ್ರೆಪ್ಮಾಸ್ಟರ್ ಅಣಕು ಪರೀಕ್ಷೆಯನ್ನು ಇದೇ ಆಗಸ್ಟ್ 14 ಹಾಗೂ 21ರಂದು ನಡೆಸಲಾಗುತ್ತಿದೆ.
ಆಕಾಂಕ್ಷಿಗಳು www.cetprepmaster.in ಅಲ್ಲಿ ನೋಂದಣಿ ಮಾಡಿ ಅಣಕು ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಣಕು ಪರೀಕ್ಷೆ ಸಂಜೆ 6 ಗಂಟೆಗೆ ನಡೆಯಲಿದೆ. ಅಭ್ಯರ್ಥಿಗಳು ಕ್ಯೂಆರ್ ಕೋಡ್ ಮೂಲಕ ಪ್ರೆಪ್ಮಾಸ್ಟರ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು.
ಆಗಸ್ಟ್ 28 ಹಾಗೂ 29ರಂದು ಸಿಇಟಿ ಪರೀಕ್ಷೆ
ಸೀಟು ಹಂಚಿಕೆಗೆ ಈ ವರ್ಷ ಪಿಯುಸಿಯ ಶೇ.50 ಅಂಕ ಪರಿಗಣಿಸದೇ ಇರಲು ಸಭೆಯಲ್ಲಿ ತೀರ್ಮಾನ ತೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಂಡಿದ್ದು, ಒಂದು ವೇಳೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ಮಾತ್ರ ದಿನಾಂಕವನ್ನು ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
ಉನ್ನತ ಶಿಕ್ಷಣ ಇಲಾಖೆಯ ಸಭೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಇದ್ದ ಅರ್ಹತೆ ಅಂಕಗಳ ಮಾನದಂಡ ಬದಲಾವಣೆಗೂ ನಿರ್ಧಾರ ಮಾಡಲಾಗಿದ್ದು, ಈ ವರ್ಷ ಗ್ರೇಡ್ ಆಧಾರದಲ್ಲಿ ಪಿಯುಸಿ ಫಲಿತಾಂಶ ನೀಡುತ್ತಿರುವ ಕನಿಷ್ಠ ಅಂಕಗಳ ಮಾನದಂಡ ನಿಯಮ ಸಡಿಲಿಕೆ ಮಾಡಿ, ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ಕಲ್ಪಿಸಿದೆ.
ಪಿಯುಸಿಯಲ್ಲಿ ಉತ್ತೀರ್ಣರಾದ ಆದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಕನಿಷ್ಠ ಶೇ.40-45 ಅಂಕ ಕಡ್ಡಾಯವಾಗಿ ಪಡೆಯಬೇಕಿತ್ತು. ಈ ಅಂಕಗಳನ್ನು ಪಡೆಯದೇ ಇದ್ದಲ್ಲಿ ಸಿಇಟಿ ಬರೆಯಲು ಅರ್ಹತೆ ಪಡೆಯುತ್ತಿರಲಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಸಾಮಾನ್ಯ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕ ನಿಯಮವನ್ನು ನಿಗದಿ ಮಾಡಲಾಗಿತ್ತು.
ಸುಮಾರು 2 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ವರ್ಷ 1,75,349 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ವರ್ಷ 2,00,215 ವಿದ್ಯಾರ್ಥಿಗಳಿಂದ ನೊಂದಣಿಯಾಗಿದೆ. ಈ ಪೈಕಿ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಹಾಗೂ 98 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಈ ಬಾರಿ ಓರ್ವ ತೃತೀಯ ಲಿಂಗಿ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.
ಜುಲೈ 16ರವರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನೀಟ್ ಪರೀಕ್ಷೆ ಹೆಚ್ಚು ವಿದ್ಯಾರ್ಥಿಗಳು ತಯಾರಾಗದ ಕಾರಣ. ಈ ಬಾರಿ ಕೆಲ ವಿದ್ಯಾರ್ಥಿಗಳು ಸಿಇಟಿಗೆ ಒಲವು ತೋರಿಸಿದ್ದಾರೆ. ಹೀಗಾಗಿ ಹೆಚ್ಚು ವಿದ್ಯಾರ್ಥಿಗಳಿಂದ ಸಿಇಟಿಗೆ ಅರ್ಜಿ ಸಲ್ಲಿಕೆಯಾಗಿದೆ.
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಿಗದಿತ ಲಿಂಕ್ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಈ ಬಾರಿ ಸಿಇಟಿ ಪರೀಕ್ಷೆಗೆ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಸಿಇಟಿಯಲ್ಲಿ ಎಂಜಿನಿಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್, ಫಾರ್ಮಸಿ ಪ್ರವೇಶ ಪರೀಕ್ಷೆಗೆ ಇದ್ದ ಅರ್ಹ ಅಂಕಗಳ ಷರತ್ತನ್ನು ತೆಗೆದು ಹಾಕಲಾಗಿದೆ. ಕೇವಲ ಸಿಇಟಿ ಅಂಕಗಳ ಆಧಾರದ ಮೇಲೆ ಮಾತ್ರ ರಾಂಕ್ ಕೊಡಲಾಗುವುದು. ವೃತ್ತಿಪರ ಎಂಜಿನಿಯರಿಂಗ್ ಕೋರ್ಸ್ಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಸಿಇಟಿ ಬರೆಯಲು ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.45 ಹಾಗೂ ಪ.ಜಾತಿ ಮತ್ತು ಪ.ವರ್ಗದ ಅಭ್ಯರ್ಥಿಗಳು ಶೇ.40ರಷ್ಟು ಅಂಕಗಳನ್ನು ಗಳಿಸಬೇಕೆಂಬ ಷರತ್ತು ಇತ್ತು.
ಆದರೆ ಈಗ ಬದಲಿಸಿದ್ದು, ಪಿಸಿಎಂ ಹಾಗೂ ನಿಗದಿತ ಐಚ್ಛಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಎಲ್ಲ, ಅಂದರೆ ಜಸ್ಟ್ ಪಾಸ್ ಆಗಿರುವ ವಿದ್ಯಾರ್ಥಿಗಳು ಕೂಡ ಸಿಇಟಿ ಬರೆಯಲು ಅರ್ಹತೆ ಹೊಂದಿರುತ್ತಾರೆ. ಅಂಕಗಳ ಮಿತಿ ಸಡಿಲಿಕೆ ಮಾಡಿರುವ ಬಗ್ಗೆ ಎಲ್ಲ ಸಂಬಂಧಿತ ಪರೀಕ್ಷಾ ಮಂಡಳಿಗಳು, ಇನ್ನಿತರೆ ಸಂಬಂಧಿತ ಎಲ್ಲ ಸಂಸ್ಥೆಗಳಿಗೆ ಸರಕಾರ ಪತ್ರ ಬರೆಯಲಿದೆ.
Recommended Video
ಎಲ್ಲ ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29ರಂದು ನಡೆಯುತ್ತದೆ. ಉಳಿದಂತೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಅಗಸ್ಟ್ 30ರಂದು ಪರೀಕ್ಷೆ ನಡೆಯಲಿದೆ. ಮೊದಲು ಯಾವ ಪದ್ಧತಿಯಲ್ಲಿ ಪರೀಕ್ಷೆ ನಡೆಯುತ್ತಿತ್ತೋ ಅದೇ ರೀತಿ ಪರೀಕ್ಷೆ ನಡೆಯುತ್ತದೆ. ಪ್ರತಿ ವಿಷಯಕ್ಕೆ 60 ಅಂಕ ಇರುತ್ತದೆ. ಮೊದಲ ದಿನ ಗಣಿತ ಮತ್ತು ಜೀವವಿಜ್ಞಾನ ಹಾಗೂ ಎರಡನೇ ದಿನ ಭೌತವಿಜ್ಞಾನ ಮತ್ತು ರಸಾಯನಿಕ ವಿಜ್ಞಾನ ಇರುತ್ತದೆ .