ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೊನಾವೈರಸ್ ಸೋಂಕು ದೃಢ
ಬೆಂಗಳೂರು, ಆ. 03: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಕೋವಿಡ್-19 ಸೋಂಕು ದೃಢಪಟ್ಟಿರುವುದನ್ನು ಸ್ವತಃ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Recommended Video
ನನ್ನ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಯಾವುದೇ ರೋಗಲಕ್ಷಣಗಳು ಇಲ್ಲ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.
'ರಾಜಾಹುಲಿ' ತಂಟೆಗೆ ಬಂದರೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದು ಯಾರು?
ರಾಜ್ಯದಲ್ಲಿ ಕೋವಿಡ್-19 ಮೊದಲ ಪ್ರಕರಣ ದೃಢಪಟ್ಟ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ. ಅಧಿಕಾರಿಗಳು, ಮಂತ್ರಿಗಳು ಸೇರಿದಂತೆ ನಿರಂತರವಾಗಿ ಸಭೆಗಳನ್ನು ಬಿಎಸ್ವೈ ನಡೆಸಿದ್ದರು. ಕೇಂದ್ರದ ಮಾರ್ಗಸೂಚಿಯಂತೆ ಪ್ರತಿ ಮೂರು ದಿನಗಳಿಗೊಮ್ಮೆ ಪ್ರಮುಖ ಹುದ್ದೆಗಳಲ್ಲಿ ಇರುವವರು ಕೋವಿಡ್ ಪರೀಕ್ಷೆಗೆ ಒಳಗಾಗುತ್ತಾರೆ.
ಆಸ್ಪತ್ರೆಗೆ ದಾಖಲು
ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಿಎಂ ಯಡಿಯೂರಪ್ಪ ಅವರು ನಿನ್ನೆ ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಿದ್ದರು. ಇವತ್ತು ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜೊತೆಗೆ ವೈದ್ಯರ ಸಲಹೆಯಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಎಚ್ಎಎಲ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಯಡಿಯೂರಪ್ಪ ಅವರು ದಾಖಲಾಗಿದ್ದಾರೆ ಎಂಬ ಮಾಹಿತಿ ಬಂದಿದೆ.
ಸಚಿವರು, ಅಧಿಕಾರಿಗಳು ಸೇರಿದಂತೆ ಇತರ ಮಹತ್ವದ ಹುದ್ದೆಗಳಲ್ಲಿರುವವರು ಪ್ರತಿ ಮೂರು ದಿನಗಳಿಗೊಮ್ಮೆ ಕೋವಿಡ್-19 ಪರೀಕ್ಷೆಗೆ ಒಳಗಾಗುತ್ತಾರೆ.
ಈಶ್ವರ್ ಖಂಡ್ರೆ ಪ್ರಾರ್ಥನೆ
ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರ್ ಕಂಡ್ರೆ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.
ಯಡಿಯೂರಪ್ಪ ಉಚ್ಛಾಟನೆ ಮಾಡಿದ್ದವರಿಗೆ ರಾಜ್ಯ ಉಪಾಧ್ಯಕ್ಷ ಹುದ್ದೆ!
ಕೋವಿಡ್ ವಿರುದ್ಧ ಜಯಗಳಿಸಿ
ಇನ್ನು ಜಲಸಂಪನ್ಮೂಲ ಸಚಿವ ರಮೇಸ್ ಜಾರಕಿಹೊಳಿ ಅವರು ಆದಷ್ಟು ಬೇಗ ಸಿಎಂ ಯಡಿಯೂರಪ್ಪ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಕೋವಿಡ್ ಸೋಂಕು ತಗುಲಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಹುಟ್ಟು ಹೋರಾಟಗಾರರಾದ ಬಿ ಎಸ್ ವೈ ಅವರು ಕೊರೋನಾ ವಿರುದ್ಧದ ಹೋರಾಟದಲ್ಲಿ ಜಯಗಳಿಸಿ, ಗುಣಮುಖರಾಗಿ ಮರಳಲಿ. ರಾಜ್ಯದ ಜನತೆಯ ಹಾರೈಕೆ ಮತ್ತು ಪ್ರಾರ್ಥನೆಗಳು ನಿಮ್ಮೊಂದಿಗಿವೆ ಎಂದು ರಮೇಶ್ ಜಾರಕಿಹೊಳಿ ಅವರು ಹಾರೈಸಿದ್ದಾರೆ.
ಕೇಂದ್ರ ಗೃಹ ಸಚಿವ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾವೈರಸ್ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಪಾಸಿಟಿವ್ ಬಂದಿರುವ ವಿಷಯವನ್ನು ಅಮಿತ್ ಶಾ ಟ್ವೀಟ್ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದರು. ಜೊತೆಗೆ ರಾಜ್ಯದಲ್ಲಿಯೂ ಹಲವು ರಾಜಕೀಯ ನಾಯಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿಗೆ ತುತ್ತಾಗಿದ್ದ ಹಲವು ಜನಪ್ರತಿನಿಧಿಗಳು ಈಗಾಗಲೇ ಸೋಂಕಿನಿಂದ ಚೇತರಿಸಿ ಕೊಂಡಿದ್ದಾರೆ.