ಕೋವಿಡ್19ಗಾಗಿ ಕ್ರಮ: ಫುಲ್ ಶಟ್ ಡೌನ್, 30 ಫೀವರ್ ಕ್ಲಿನಿಕ್ ಸ್ಥಾಪನೆ
ಬೆಂಗಳೂರು, ಮಾರ್ಚ್ 23: ಕೋವಿಡ್ 19 ಅನ್ನು ತಡೆಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸುವಂತೆ ಖಾಸಗಿ ಆಸ್ಪತ್ರೆಗಳು, ತಜ್ಞ ವೈದ್ಯರು ಹಾಗೂ ಪರಿಣತರನ್ನು ಮನವಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು.
ಕೋವಿಡ್19 ಬಗ್ಗೆ ತೆಗೆದುಕೊಳ್ಳಬೇಕಾದ ತುರ್ತುಕ್ರಮಗಳ ಬಗ್ಗೆ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರೊಂದಿಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ನಡೆಸಿದರು.

ಸಭೆಯ ಮುಖ್ಯಾಂಶಗಳು:
• ಸರ್ಕಾರವು ಅವರು ನೀಡಿರುವ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದ್ದೇನೆ.
• ಅವರು ಸಂಪೂರ್ಣ ಶಟ್ ಡೌನ್ ಮಾಡುವುದೇ ಪರಿಹಾರ ಎಂದು ಸಲಹೆ ನೀಡಿದರು.
• ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸಿ, ಪ್ರಾಥಮಿಕ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. 30 ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗುವುದು.
• ಖಾಸಗಿ ಆಸ್ಪತ್ರೆಯವರು ಶೇ. 50 ರಷ್ಟು ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆಯನ್ನು ಒದಗಿಸುವ ಭರವಸೆ ನೀಡಿದ್ದಾರೆ.
• ನೂರಕ್ಕೂ ಹೆಚ್ಚು ವೆಂಟಿಲೇಟರ್ ಗಳನ್ನು ಒದಗಿಸಲು ಮುಂದೆ ಬಂದಿದ್ದಾರೆ.
• ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1200 ಹಾಸಿಗೆಗಳ ಪ್ರತ್ಯೇಕ ಬ್ಲಾಕ್ ಗುರುತಿಸುವ ಜೊತೆಗೆ ಖಾಸಗಿ ಆಸ್ಪತ್ರೆಯೊಂದನ್ನು ಸಹ ಗುರುತಿಸಲು ಸಹಕರಿಸುವುದಾಗಿ ತಿಳಿಸಿದ್ದಾರೆ.
• ಜನರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು "ಮನೆಯಲ್ಲೇ ಇದ್ದು, ಸೋಂಕು ಮುಕ್ತರಾಗಿರಿ" ಎಂಬ ಘೋಷವಾಕ್ಯವನ್ನು ಪಾಲಿಸಬೇಕಾಗಿದೆ.
• ಕೋವಿಡ್ 19 ಅನ್ನು ತಡೆಯಲು, ಸರ್ಕಾರ-ಖಾಸಗಿ ಸಹಭಾಗಿತ್ವವನ್ನು ಬಲಪಡಿಸಲು ತೀರ್ಮಾನಿಸಲಾಯಿತು.
•ಸರ್ಕಾರ ಕೋವಿಡ್ 19 ತಡೆಯುವುದರೊಂದಿಗೆ ಸೋಂಕಿತರ ಚಿಕಿತ್ಸೆಗೂ ಪೂರ್ವ ಸಿದ್ಧತೆ ನಡೆಸುತ್ತಿದೆ.
• ಸರ್ಕಾರವು ಜನರಿಗೆ ಈ ಸೋಂಕಿನ ಗಂಭೀರತೆಯನ್ನು ಅರಿವು ಮೂಡಿಸಲು ತೀರ್ಮಾನಿಸಿದೆ.
• ನಗರ ಪ್ರದೇಶದಲ್ಲಿ ವಾಸವಾಗಿರುವ ಜನರಿಗೆ ನಮ್ಮ ಕಳಕಳಿಯ ಮನವಿ- ದಯವಿಟ್ಟು ಇನ್ನೂ ಕೋವಿಡ್ ಸೋಂಕು ಮುಕ್ತವಾಗಿರುವ ಹಳ್ಳಿಗಳಿಗೆ ತೆರಳಬೇಡಿ. ಕೋವಿಡ್ 19 ಹರಡುವುದನ್ನು ತಡೆಯಲು ಸರ್ಕಾರದೊಂದಿಗೆ ಸಹಕರಿಸಿ, ಮನೆಯಿಂದ ಹೊರ ಬರಬೇಡಿ.
• ಜನರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಈ ಕೆಳಕಂಡ ತೀರ್ಮಾನ ಕೈಗೊಂಡಿದೆ.
• ರಾಜ್ಯಾದ್ಯಂತ ಮಾರ್ಚ್ 31ರ ವರೆಗೆ ಮೊನ್ನೆ ತಿಳಿಸಿದ 9 ಜಿಲ್ಲೆಗಳಲ್ಲಿ ಸೆಕ್ಷನ್ 144ನ್ನು ಮುಂದುವರೆಸಲಾಗುವುದು. ಎಲ್ಲ ಅತ್ಯವಶ್ಯಕ ಸೇವೆಗಳನ್ನು ಹೊರತು ಪಡಿಸಿ ಇತರ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.
• ಸಾರಿಗೆ ಮತ್ತು ಗೃಹ ಇಲಾಖೆಯ ಸಭೆ ನಡೆಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ.
• ಹೋಮ್ ಕ್ವಾರಂಟೈನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲು ತೀರ್ಮಾನಿಸಲಾಯಿತು
• ಜೀವನೋಪಾಯಕ್ಕೆ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಜನರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ಒದಗಿಸಲಾಗುವುದು.
• ಬೆಂಗಳೂರು ಕರಗ ಉತ್ಸವ ನಡೆಸಲು ಅವಕಾಶ ಇಲ್ಲ.
• ದೇವಾಲಯ, ಪ್ರಾರ್ಥನಾಲಯಗಳಲ್ಲಿ ಗುಂಪು ಸೇರುವಂತಿಲ್ಲ.
• ಟೆಲಿಕನ್ಸಲ್ಟೇಶನ್ ಗೆ ಅವಕಾಶ ನೀಡಲಾಗವುದು, ಚಿಕಿತ್ಸೆ - ಸಲಹೆಗೆ ಹೊರಬರುವ ಅಗತ್ಯ ಇಲ್ಲ.












Click it and Unblock the Notifications