ಸೆ. 10ರಂದು ಕುಮಾರಸ್ವಾಮಿ ನೇತೃತ್ವದ ನಿಯೋಗದಿಂದ ಮೋದಿ ಭೇಟಿ
ಬೆಂಗಳೂರು, ಸೆಪ್ಟೆಂಬರ್ 09 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಸೆ.10ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದೆ. ಭಾನುವಾರ ಸಂಜೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದಾರೆ.
ಸೋಮವಾರ ಬೆಳಗ್ಗೆ 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಗೆ ಸಮಯ ನೀಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಂಸದರು ಹಾಗೂ ಸಚಿವರು ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ನಿಯೋಗ ಮೋದಿ ಭೇಟಿ ಮಾಡಲಿದೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪರಿಹಾರ ಕೋರಿ ನಿಯೋಗ ಮನವಿ ಸಲ್ಲಿಸಲಿದೆ. ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯ ಕುರಿತು ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಲಿದೆ.

ನಿಯೋಗದಲ್ಲಿ ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಎಚ್.ಡಿ.ದೇವೇಗೌಡ, ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇರಲಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಗ್ರಾಮೀಣಾಭಿ ವೃದ್ಧಿ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ನಿಯೋಗದ ಜೊತೆ ಮೋದಿ ಭೇಟಿ ಮಾಡಲಿದ್ದಾರೆ.
ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದಾಗಿ 4 ಸಾವಿರಕ್ಕೂ ಅಧಿಕ ಕೋಟಿ ನಷ್ಟ ಉಂಟಾಗಿದೆ. ಕರ್ನಾಟಕ ಸರ್ಕಾರ ಈಗಾಗಲೇ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.












Click it and Unblock the Notifications