Siddaramaiah: 'ಚುನಾವಣಾ ರಾಜಕಾರಣಕ್ಕೆ' ಗುಡ್ಬೈ ಹೇಳಿದ ಸಿಎಂ ಸಿದ್ದರಾಮಯ್ಯ
ಮೈಸೂರು, ಏಪ್ರಿಲ್ 02: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ತವರು ಕ್ಷೇತ್ರದಲ್ಲಿಯೇ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರ ಅವರ ಅಭಿಮಾನಿಗಳಲ್ಲಿ ಆಘಾತ ನೀಡಿದೆ.
ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ಅವರು ತಿಳಿಸಿದರು. ಜೊತೆಗೆ ಈ ನಿರ್ಧಾರಕ್ಕೆ ಕಾರಣಗಳೇನು ಎಂಬುದನ್ನು ಸ್ವತಃ ಸಿದ್ದರಾಮಯ್ಯ ಅವರೇ ವಿವರಿಸಿದ್ದಾರೆ.

ಅವರವರ ದೇಹಸ್ಥಿತಿ, ಆರೋಗ್ಯದ ಬಗ್ಗೆ ಅವರಿಗೇ ಗೊತ್ತಿರುತ್ತದೆ. ನನಗೆ ಮೊದಲಿನಂತೆ ಉತ್ಸಾಹ ಭರಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನನಗೆ ಯಾವ ಆತಂಕ ಇಲ್ಲ. ಆತಂಕ ಇದ್ದರೆ ಮಾತ್ರ ಟೆನ್ಷನ್ ಇರುತ್ತದೆ. ನನಗೆ ಆ ರೀತಿ ಏನು ಇಲ್ಲ. ಹೀಗಾಗಿ ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ಹಿಂದೆಯೂ ನಿವೃತ್ತಿ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ
ಈ ಹಿಂದೆಯು ಕೆಲವು ಭಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತು ಮಾತನಾಡಿದ್ದರು. 2023ರಲ್ಲಿ ಏಪ್ರಿಲ್ ನಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದರು. ಆಗ ಅವರು ವಿಪಕ್ಷ ನಾಯಕರಾಗಿದ್ದರು.
ಅದಕ್ಕೂ ಮೊದಲು ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ ಆಗಲಿದೆ. ಮುಂದೆ ಮತ್ತೆ ನಾನು ಚುನಾವಣೆ ನಿಲ್ಲುವುದಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದಿದ್ದರು.

ಸಿದ್ದರಾಮಯ್ಯ ಅವರು ಕೆಲವು ಭಾರಿ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಆದರೆ ಆ ಮಾತಿನಂತೆ ನಡೆದುಕೊಂಡಿರಲಿಲ್ಲ. ಈ ಬಾರಿ ಮತ್ತದನ್ನೇ ಹೇಳಿದ್ದಾರೆ. ಈ ಬಾರಿಯು ತಮ್ಮ ಮಾತಿನ ಮೇಲೆ ನಿಲ್ಲುತ್ತಾರಾ? ಅಥವಾ ಲೋಕಸಭಾ ಚುನಾವಣೆಯ ಅಭ್ಯರ್ಥಿ ಗೆಲ್ಲಿಸುವುದಕ್ಕೋಸ್ಕರ ಈ ರೀತಿ ಹೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಗನ ರಾಜಕೀಯ ಹಾದಿ ಸುಗಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣ ನಿವೃತ್ತಿ ಬಳಿಕ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಹಾದಿ ಮತ್ತಷ್ಟು ಸುಗಮಗೊಳ್ಳುವ ನಿರೀಕ್ಷೆ ಇದೆ. ಕಾರಣ ತಂದೆ ಸ್ಪರ್ಧಿಸಿದ ಕ್ಷೇತ್ರದಿಂದ ಸಿದ್ದರಾಮಯ್ಯ ಪುತ್ರ ಕಣಕ್ಕಿಳಿದು ಗೆದ್ದವರು. ಇಲ್ಲಿ ಕುರುಬ ಸಮುದಾಯ ಮತದಾರರು ಹೆಚ್ಚಿದ್ದು, ಇದು ಯತೀಂದ್ರ ಅವರಿಗೆ ವರದಾನವಾಗಲಿದೆ.
ಬದಲಾದ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಣಕ್ಕಿಳಿದರು. ಅಂದು ಅವರು ಬಾದಾಮಿಯಲ್ಲಿ ಮಾತ್ರ ಗೆದ್ದರು. ಹಲವು ಏರಿಳಿತಗಳ ನಡುವೆ ಗೆಲುವಿನ ಕ್ಷೇತ್ರವನ್ನು ಸಿಎಂ ತಮ್ಮ ಪುತ್ರನಿಗೆ ಬಿಟ್ಟುಕೊಟ್ಟಿದ್ದರು. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಯತೀಂದ್ರ ಅವರು ವರುಣಾದಿಂದ ಗೆಲುವು ಸಾಧಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದುಕೊಂಡರೆ ಪುತ್ರನ ರಾಜಕೀಯ ಭವಿಷ್ಯ ಮತ್ತಷ್ಟು ಸರಳವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅವರು ಒಂದೆರಡು ದಿನ ಮೈಸೂರಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಕ್ಷೇತ್ರದ ಗೆಲುವು ಕಾಂಗ್ರೆಸ್ಗೆ ಮತ್ತು ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯಾಗಿದೆ. ಈ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದಾರೆ. ಇದೇ ವೇಳೆ ಅವರು ಚುನಾವಣಾ ರಾಜಕಾರಣದಿಂದ ದೂರ ಉಳಿಯುವ ಹೇಳಿಕೆ ಮತ್ತೊಮ್ಮೆ ಚರ್ಚೆ ಹುಟ್ಟು ಹಾಕುವಂತೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ನಿವೃತ್ತಿ ಕುರಿತು ಮಾಹಿತಿ ನೀಡಿದ ನಂತರ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರ ಪರಿಹಾರ, ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಕುರಿತು ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಅವರು ವಾಗ್ದಾಳಿ ನಡೆಸಿದರು.












Click it and Unblock the Notifications