ʼಹಿಟ್ಲರ್ʼ ಎಂದು ಸಿದ್ದರಾಮಯ್ಯ ಕರೆದಿದ್ದು ಯಾರನ್ನ?
ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ʼಹಿಟ್ಲರ್ ಕಾಲದಲ್ಲಿ ಸುಳ್ಳು ಹೇಳಲೆಂದೇ ಒಬ್ಬ ಮಂತ್ರಿಯಿದ್ದಂತೆ, ಈಗ ವಿಪಕ್ಷ ನಾಯಕರು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಗುಡುಗಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಆರೋಪಗಳ ಕುರಿತು ಮಾತನಾಡಿದ ಅವರು, ಬಿಜೆಪಿಯವರು ಬಡವರಪರ ನಾವು ಕೆಲಸ ಮಾಡುವುದನ್ನು ಸಹಿಸುವುದಿಲ್ಲ. ಬಡವರು ಶಕ್ತಿವಂತರಾದರೆ, ಅವರ ಮೇಲೆ ಶೋಷಣೆ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಟ್ಲರ್ ಕಾಲದಲ್ಲಿ ಸುಳ್ಳು ಹೇಳಲೆಂದೇ ಒಬ್ಬ ಮಂತ್ರಿ ಇದ್ದರು ಎನ್ನುವಂತೆ ಈಗ ವಿಪಕ್ಷ ನಾಯಕರು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಸಾಮಾಜಿಕ ನ್ಯಾಯವನ್ನು ಕೇಳಬಾರದೆಂಬುದೇ ಇಂತಹ ಪಟ್ಟಭದ್ರ ಹಿತಾಸಕ್ತಿಗಳ ಆಶಯವಾಗಿದೆ. ಜನರ ಆಶೀರ್ವಾದವಿರುವವರೆಗೆ ಸಿದ್ದರಾಮಯ್ಯನನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಬಡವರಪರ ಕೆಲಸದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲʼ ಎಂದು ಸವಾಲು ಹಾಕಿದ್ದಾರೆ.
ʼಈ ಹಿಂದೆ ನಾನು ಸಿಎಂ ಆಗಿದ್ದಾಗ, ಅನ್ನಭಾಗ್ಯ, ಶಾದಿ ಭಾಗ್ಯ ಶೂ ಭಾಗ್ಯ, ಇಂದಿರಾ ಕ್ಯಾಂಟೀನ್, ಮನಸ್ವಿನಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೆನು. ಯಾವುದೇ ಜಾತಿ-ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಬರುವಂತಾಗಲು ಐದು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದಕ್ಕಾಗಿ 52,009 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.
ಬಳಿಕ ಶಿವಾಜಿನಗರದ ಚರಕ ಸೂಪಲ್ ಸ್ಪೆಷಾಲಿಟಿ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಸಮಾಜದಲ್ಲಿ ಬಡವರು ಮತ್ತು ಕೆಳ-ಮಧ್ಯಮ ವರ್ಗದವರು ಸರ್ಕಾರಿ ಆಸ್ಪತ್ರೆಗಳ ಮೇಲೆಯೇ ಅವಲಂಬಿಸಿರುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವಂತಹ ಗುಣಮಟ್ಟದ ಆರೋಗ್ಯ ಸೌಲಭ್ಯ ಸೂಪಲ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ದೊರೆಯಲಿದೆ ಎಂದಿದ್ದಾರೆ.

ʼಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಈ ಭಾಗದ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡಲಿದೆ. 2016-17ರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಸೂರು, ಕಲಬುರಗಿ, ಬೆಳಗಾವಿ ಹಾಗೂ ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಲಕ್ಷಗಟ್ಟಲೆ ಚಿಕಿತ್ಸಾ ವೆಚ್ಚವನ್ನು ಬಡವರಿಗೆ ಭರಿಸಲು ಸಾಧ್ಯವಿಲ್ಲ. ಅಲ್ಲಿನ ದುಬಾರಿ ವೆಚ್ಚವನ್ನು ಬಡವರು ಪಾವತಿಸದೇ ಹೋದಲ್ಲಿ ಅವರಿಗೆ ತಮ್ಮವರ ಶವವನ್ನು ನೀಡದೇ ಅಮಾನುಷವಾಗಿ ವರ್ತಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಹಿಂದಿದ್ದಾರೆ ಮೋದಿ-ಶಾ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ ವಿಪಕ್ಷಗಳಿಗೆ ಟಾಂಗ್ ನೀಡಿದೆ. ರಾಜ್ಯಪಾಲರು ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ದೂರಿಗೆ ಆಮೆಯಂತಾಗುತ್ತಾರೆ. ಕಾಂಗ್ರೆಸ್ ನಾಯಕರ ವಿರುದ್ಧದ ದೂರಿಗೆ ಚಿರತೆಯಂತಾಗುತ್ತಾರೆ! ಮುಡಾ ಪ್ರಕರಣದಲ್ಲಿ ದಿನ ಕಳೆಯುವುದರೊಳಗೆ ನೋಟಿಸ್ ನೀಡುತ್ತಾರೆ. ಆದರೆ ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿಷಯದಲ್ಲಿ ತಿಂಗಳುಗಳೇ ಕಳೆದರೂ ಫೈಲ್ ತೆರೆದೇ ನೋಡಿರಲಿಲ್ಲ ಎಂದು ತಿರುಗೇಟು ನೀಡಿದೆ.
ರಾಜ್ಯಪಾಲರ ಈ ನಡವಳಿಕೆಗೆ ಮೋ-ಶಾ ಜೋಡಿ ನಿರ್ದೇಶನವಿದೆ. ಅಭೂತಪೂರ್ವ ಜನಬೆಂಬಲದೊಂದಿಗೆ ರಚನೆಯಾದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪಣ ತೊಟ್ಟಿದೆ. ಆದರೆ ನ್ಯಾಯ ಮಾರ್ಗದಲ್ಲಿರುವ ನಮ್ಮ ಸರ್ಕಾರವನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರ ವಿರುದ್ಧದ ಊಹಾಪೋಹದ ದೂರನ್ನು ಗಂಭೀರವಾಗಿ ತೆಗೆದುಕೊಳ್ಳುವ ರಾಜ್ಯಪಾಲರು ವಿಪಕ್ಷಗಳ ನಾಯಕರ ವಿರುದ್ಧ ದಾಖಲೆ ಸಮೇತ ದೂರಿದ್ದರೂ ನಂಬುತ್ತಿಲ್ಲವೇಕೆ? ಎಂದು ಪ್ರಶ್ನೆ ಮುಂದಿಟ್ಟಿದೆ.












Click it and Unblock the Notifications