ವಿದ್ಯುತ್ ಅಭಾವ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ರಣತಂತ್ರವೇನು?
ಬೆಂಗಳೂರು: ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ ಸಂದರ್ಭಕ್ಕೆ ಅಗತ್ಯ ಯೋಜನೆ/ ಸಿದ್ಧತೆ ಏಕೆ ಮಾಡಿಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಇಂಧನ ಇಲಾಖೆ ಅಧಿಕಾರಿಗಳ ವಿರುದ್ಧ ಇಂದು ಗರಂ ಆದ್ರು. ಗೃಹಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನೆ ವೇಳೆ, ರೈತರ ಪ್ರತಿಭಟನೆ ಪ್ರಸ್ತಾಪಿಸಿ ಅಧಿಕಾರಿಗಳನ್ನು ಸಿಎಂ ತರಾಟೆ ತೆಗೆದುಕೊಂಡರು. ಅಲ್ಲದೆ ಬಿಜೆಪಿ ವಿರುದ್ಧವೂ ಸಿದ್ದರಾಮಯ್ಯ ಹೊಸ ಅಸ್ತ್ರ ಒಂದನ್ನು ಪ್ರಯೋಗಿಸಿದ್ದಾರೆ.
ಕಚೇರಿ ಬಿಟ್ಟು ಹೊರಗೆ ಹೋಗಿ!
ಅಂದಹಾಗೆ, ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ನಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ರೆ, ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ವಿದ್ಯುತ್ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಫೀಲ್ಡ್ಗೆ ಹೋಗಬೇಕು. ಪರಿಸ್ಥಿತಿಯನ್ನ ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆ ಆಲಿಸಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದ್ರು.

ರೈತರಿಗೆ ಏನು ಬೇಕು ಅರ್ಥ ಮಾಡಿಕೊಳ್ಳಿ
ಹಿಂದಿನ ಸರ್ಕಾರದಲ್ಲಿ ಉತ್ತಮವಾಗಿ ಹಾಗೂ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯ ಇರುತ್ತದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್ ಅನ್ನೇ ಅವರಿಗೆ ಅಗತ್ಯ ವೇಳೆ ಸರಬರಾಜು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆಗಿ ಸೂಚಿಸಿದರು.
ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ? ವಿಚಕ್ಷಣಾ ದಳದಲ್ಲಿ ಎಷ್ಟು SP ಗಳು ಇದ್ದೀರಿ ? ಏನು ಮಾಡುತ್ತಿದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎನ್ನುವ ನಿರ್ದೇಶನವನ್ನು ಸಿಎಂ ಸಿದ್ದರಾಮಯ್ಯ ಇದೇ ವೇಳೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ವಿದ್ಯುತ್ ಉತ್ಪಾದನೆ, ಪ್ರಸರಣೆ & ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸಭೆಯ ವೇಳೆ ಹಾಜರಿದ್ದರು.
ವಿದ್ಯುತ್ ಅಭಾವದ ಬಗ್ಗೆ ಸಿಎಂ ಖಡಕ್ ಸೂಚನೆ
1) ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ಹಿನ್ನೆಲೆ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ 3 ಪಾಳಿಗಳಲ್ಲಿ ನಿರಂತರ 5 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ & ಲೋಡ್ ಶೆಡ್ಡಿಂಗ್ ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಎಸ್ಕಾಂಗಳ ಎಂಡಿ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
2) ಕೃಷಿ ಕ್ಷೇತ್ರದಲ್ಲಿ ವಿದ್ಯುತ್ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಈ ವೇಳೆ ಸೂಚಿಸಿದರು.
3) ಲಭ್ಯ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂ.ಡಿ.ಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನ ಜಿಲ್ಲೆಗೊಬ್ಬರಂತೆ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರವಾಗಿ 5 ಗಂಟೆ ವಿದ್ಯುತ್ ಪೂರೈಕೆಗೆ ಯಾವ ಅಡಚಣೆ ಇಲ್ಲ ಎಂಬುದನ್ನು ಖಾತರಿಪಡಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.
4) ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆ ಆಗುತ್ತಿರುವುದನ್ನ, ಖಾತರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಸೂಚನೆ ನೀಡಿದರು.
5) ಕಳೆದ 5 ವರ್ಷಗಳಿಂದ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಹೆಚ್ಚಳ ಕೇವಲ 4000 ಮೆಗಾವ್ಯಾಟ್ ಮಾತ್ರ ಇದೆ. ರಾಜ್ಯದ ಒಟ್ಟಾರೆ ವಿದ್ಯುತ್ ಉತ್ಪಾದನಾ ಸಾಮರ್ಥ್ಯವು 32,000 ಮೆಗಾವ್ಯಾಟ್ ಇದ್ದರೂ ಇದರಲ್ಲಿ 16 ಸಾವಿರ ಮೆಗಾವ್ಯಾಟ್ ಸೌರ ವಿದ್ಯುತ್ ಆಗಿದ್ದು, ಇದು ಹಗಲು ಹೊತ್ತಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿ ಕೆಲವು ಸಮಸ್ಯೆ ಇದ್ದುದನ್ನು ನಿವಾರಿಸಲಾಗಿದ್ದು, ಇದೀಗ ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
6) ಹಾಗೇ ನವೆಂಬರ್ ತಿಂಗಳಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್ ನಿಂದ 600 ಮೆ.ವ್ಯಾ. ವಿದ್ಯುತ್ ಪಡೆಯಲಾಗುವುದು. ಕೆ.ಇ.ಆರ್.ಸಿ.. ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್ ಅಲ್ಪಾವಧಿ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
7) ರಾಜ್ಯದಲ್ಲಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಪಡೆಯಲು ರಾಷ್ಟ್ರೀಯ ವಿಪತ್ತಿನ ಅಡಿಯಲ್ಲಿ ವಿದ್ಯುತ್ ಕಾಯ್ದೆಯ ಸೆಕ್ಷನ್ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್ ಕೊರತೆ ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.
9) ದಕ್ಷಿಣದ ರಾಜ್ಯಗಳಲ್ಲಿ ವಿದ್ಯುತ್ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ನೀವು contingency plan ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಸಿಎಂ ಇದೇ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದರು.
10) ಇನ್ನು ಶೇಕಡಾ 13 ರಷ್ಟು ವಿದ್ಯುತ್ ವಿತರಣೆ ನಷ್ಟ ಆಗುತ್ತಿದೆ. ವಿದ್ಯುತ್ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್ ಕಳವು ಅತಿ ಕಡಿಮೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯವಾಗಿತ್ತು.
11) ಹಾಗೇ ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲ ಜಿಲ್ಲೆಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗುತ್ತೆ, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್ ನಿಂದ ವಿದ್ಯುತ್ ಲಭ್ಯ ಆಗುತ್ತದೆ ಎಂದು ಸಭೆಗೆ ವಿವರಣೆ ನೀಡಲಾಯಿತು.
ಒಟ್ನಲ್ಲಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಹಾಗೇ ಬಿಜೆಪಿ ವಿರುದ್ಧ ಹೊಸ ಅಸ್ತ್ರವನ್ನೂ ಪ್ರಯೋಗ ಮಾಡಿದ್ದಾರೆ. ಮತ್ತೊಂದು ಕಡೆ ವಿದ್ಯುತ್ ಅಭಾವದಿಂದ ಸಮಸ್ಯೆಯ ಸುಳಿಗೆ ಸಿಲುಕಿದ್ದ ಕರ್ನಾಟಕದ ರೈತರಲ್ಲಿ ಇದು ಹೊಸ ಹುಮ್ಮಸ್ಸು ತರುವ ನಿರೀಕ್ಷೆ ಇದೆ.












Click it and Unblock the Notifications