ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ
ಸಿಎಂ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಅದು ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಸಮಾರಂಭದಲ್ಲಿ ಸಿಎಂ ಮಾತನಾಡಿದ್ದಾರೆ. ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ಧರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ. ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ.

ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿರುವೆ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಕಡ್ಡಾಯ ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಗಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ ಎಂದು ಮನವಿ ಮಾಡಿದ್ದಾರೆ.

ಅಂಬೇಡ್ಕರ್ ಅವರಿಂದ ಬುದ್ಧ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕು. ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತ್ಯೇಕ ಸಭೆ ನಡೆಸಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಲ್ಲದಾಗ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಾರಕಿಹೊಳಿ ನಿವಾಸದಲ್ಲಿ ಭೋಜನಕೂಟಕ್ಕೆ ಸೇರಿದ್ದರು. ಈ ವೇಳೆ ಮಹತ್ವದ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ ಎಂದಿದ್ದಾರೆ.












Click it and Unblock the Notifications