ಐಐಟಿ ರಾಯಚೂರಿಗೆ ನೀಡಿ: ಕೇಂದ್ರಕ್ಕೆ ಸಿಎಂ ಪತ್ರ
ಬೆಂಗಳೂರು, ಸೆಪ್ಟೆಂಬರ್. 21: ಐಐಟಿ ಸ್ಥಾಪನೆಗೆ ಧಾರವಾಡವನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದ್ದರೂ ಗೊಂದಲಗಳಿಗೆ ಇನ್ನು ತೆರೆ ಬಿದ್ದಿಲ್ಲ. 'ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ'ಯನ್ನು (ಐಐಟಿ) ರಾಯಚೂರಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಧಾರವಾಡಕ್ಕಿಂತ ರಾಯಚೂರೇ ಪ್ರಶಸ್ತ ಜಾಗ. ಕೇಂದ್ರ ಸರ್ಕಾರ ಧಾರವಾಡದಲ್ಲಿ ಐಐಟಿ ಸ್ಥಾಪಿಸುವ ತನ್ನ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ಬರೆದ ಪತ್ರದಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.[ರಾಯಚೂರು ಬಂದ್ ದಿನ ಏನೇನಾಯ್ತು?]
ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಇಂಟರ್ನ್ಯಾಷನಲ್ ಇನ್ಫರ್ಮೇಷನ್ ಟೆಕ್ನಾಲಜಿ ಇನ್ಸ್ಟಿಟ್ಯೂಷನ್ (ಐಐಟಿಐ) ಸ್ಥಾಪಿಸಲಾಗಿದೆ. ಕಳೆದ ವರ್ಷವೇ ಇದು ಆರಂಭವಾಗಿದೆ. ಧಾರವಾಡದ ಬದಲು ರಾಯಚೂರಿನಲ್ಲಿ ಐಐಟಿ ಸ್ಥಾಪಿಸಿದರೆ ಪ್ರಾದೇಶಿಕ ಅಸಮತೋಲನ ಹೋಗಲಾಡಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.[ಧಾರವಾಡದಲ್ಲಿ ಐಐಟಿ : ಅಧಿಕೃತ ಆದೇಶ ಪತ್ರ]
ಹೈದ್ರಾಬಾದ್ ಕರ್ನಾಟಕ ಭಾಗದ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ರಾಯಚೂರಿನಲ್ಲೇ ಐಐಟಿ ಸ್ಥಾಪನೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದದ್ದರು. ಈ ಬಗ್ಗೆ ಮನವಿಯೊಂದನ್ನು ಸಲ್ಲಿಕೆ ಮಾಡಿದ್ದರು.
ಮೈಸೂರಿಗೆ ಐಐಟಿ ಕೈ ತಪ್ಪಲು ಸಿಎಂ ಸಿದ್ದರಾಮಯ್ಯ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಆರೋಪ ಮಾಡಿದ್ದರು. ಐಐಟಿ ಕೈ ತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ನಾಗರಿಕರು ರಾಯಚೂರು ಬಂದ್ ಸಹ ನಡೆಸಿದ್ದರು. ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇಂದ್ರ ಸರ್ಕಾರ ಯಾವ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕು.