ಕರ್ನಾಟಕದ ಜನರಿಗೆ ಕೃತಜ್ಞತೆ ಸಲ್ಲಿಸಿದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜನವರಿ 22 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಶಿವಕುಮಾರ ಶ್ರೀಗಳ ನಿಧನದ ಸಂದರ್ಭದಲ್ಲಿ ಹಗಲಿರುಳು ದುಡಿದ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಂಗಳವಾರ ರಾತ್ರಿ ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಅಂತಿಮ ಕ್ರಿಯಾ ವಿಧಿಗಳು ಶ್ರದ್ಧಾಪೂರ್ವಕವಾಗಿ, ಶಾಂತಿಯುತವಾಗಿ ನೆರವೇರಿತು. ಲಕ್ಷಾಂತರ ಭಕ್ತರು ಶಾಂತಿಯುತವಾಗಿ ಸರತಿಯಲ್ಲಿ ಕಾದು, ಈ ತ್ರಿವಿಧ ದಾಸೋಹಿಗೆ ಅಂತಿಮ ನಮನಗಳನ್ನು ಅರ್ಪಿಸಿದರು ಎಂದು ಹೇಳಿದ್ದಾರೆ.
ಶಿವಕುಮಾರ ಶ್ರೀಗಳ ಅಂತಿಮ ಕಾರ್ಯಗಳು ಸುಗಮವಾಗಿ ನಡೆಸಲು ಸಹಕರಿಸಿದ ಎಲ್ಲರಿಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸರನ್ನು ಅಭಿನಂದಿಸಿದ್ದಾರೆ.

ಜನಸಾಗರವೇ ಹರಿದು ಬಂದರೂ ಎಲ್ಲ ವಿಧಿವಿಧಾನಗಳು ಅಚ್ಚುಕಟ್ಟಾಗಿ ನೆರವೇರಿದವು. ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧತೆ ನಡೆಸಲು ಶ್ರಮಿಸಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಗೃಹ ಸಚಿವ ಎಂ.ಬಿ. ಪಾಟೀಲ್, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ತುಮಕೂರು ಜಿಲ್ಲಾಡಳಿತ, ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಿ, ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಮಠದ ಭಕ್ತರು, ಅಭಿಮಾನಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಎಲ್ಲರಿಗೂ ಮುಖ್ಯಮಂತ್ರಿಗಳು ತಮ್ಮ ಪ್ರಕಟಣೆಯಲ್ಲಿ ಧನ್ಯವಾದ ಹೇಳಿದ್ದಾರೆ.












Click it and Unblock the Notifications