ಮಹಾದಾಯಿ ನ್ಯಾಯಮಂಡಳಿ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 02 : ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳುವಂತೆ ನ್ಯಾಯಮಂಡಳಿ ನೀಡಿರುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಮಹದಾಯಿ ನ್ಯಾಯಮಂಡಳಿ ಸಲಹೆಯ ಕುರಿತು ಪ್ರಧಾನಿ ಹಾಗೂ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ನ್ಯಾಯ ಮಂಡಳಿ ಹೇಳಿರುವುದು ಒಳ್ಳೆಯ ಬೆಳವಣಿಗೆ' ಎಂದರು.[ಮಹದಾಯಿ ಸಮಸ್ಯೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ]

'ನ್ಯಾಯ ಮಂಡಳಿಯೇ ಸಲಹೆ ನೀಡಿರುವುದರಿಂದ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಗೆ ಸಿದ್ಧರಾಗಬಹುದು. ನಾವಂತೂ ತಯಾರಿದ್ದೇವೆ. ಸರ್ವಪಕ್ಷ ಮುಖಂಡರೊಂದಿಗೆ ಭೇಟಿಯಾದಾಗ ಮತ್ತು ಬರಗಾಲ ಕುರಿತಾದ ಚರ್ಚೆಗೆ ಹೋದಾಗಲೂ ಈ ಕುರಿತು ಪ್ರಧಾನಿಯವರಿಗೆ ಮನವಿ ಮಾಡಿದ್ದೇವೆ' ಎಂದು ಸಿದ್ದರಾಮಯ್ಯ ಹೇಳಿದರು.[ಮಾತುಕತೆ ಮೂಲಕ ಮಹದಾಯಿ ವಿವಾದಕ್ಕೆ ತೆರೆ?]
'ನ್ಯಾಯ ಮಂಡಳಿ ಸಲಹೆ ನೀಡಿದ ಬಳಿಕ ಗೋವಾ, ಮಹಾರಾಷ್ಟ್ರ ಪರ ವಕೀಲರು ನಮ್ಮ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ನಾವೂ ಸಲಹೆ ನೀಡುತ್ತೇವೆ ಎಂದಿದ್ದಾರೆ. ನಮ್ಮ ವಕೀಲರೂ ಇದೇ ಮಾತು ಹೇಳಿದ್ದಾರೆ. ಇದು ಸ್ವಾಗತಾರ್ಹ. ಇದಕ್ಕಾಗಿ ನ್ಯಾಯ ಮಂಡಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ಮುಖ್ಯಮಂತ್ರಿಯವರು ತಿಳಿಸಿದರು.[ಮಹದಾಯಿ ತೀರ್ಪು: ಕನ್ನಡಿಗರು ಗಮನಿಸಬೇಕಾದ್ದು ಏನು?]
'ವಿವಾದವನ್ನು ಬಗೆಹರಿಸಲು ತಾವು ಮಧ್ಯೆಪ್ರವೇಶ ಮಾಡಬೇಕು ಎಂದು ಪ್ರಧಾನಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಜಲ ಸಂಪನ್ಮೂಲ ಸಚಿವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸುವಂತೆ ಪತ್ರ ಮೂಲಕ ಗೋವಾ ಮುಖ್ಯಮಂತ್ರಿಗಳನ್ನೂ ಕೋರಲಾಗಿತ್ತು. ಈಗ ನ್ಯಾಯ ಮಂಡಳಿಯೇ ಸಲಹೆ ನೀಡಿರುವುದರಿಂದ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಗೆ ಮುಂದಾಗಬಹುದು' ಎಂದರು.[ಮಹದಾಯಿ ನೀರು ಹಂಚಿಕೆ : ಕಥೆ ವ್ಯಥೆ ಟೈಮ್ ಲೈನ್]
'ಪ್ರಧಾನಿ, ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಶೀಘ್ರವೇ ಪತ್ರ ಬರೆಯುತ್ತೇನೆ. ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿಯವರನ್ನೂ ಕೋರುತ್ತೇನೆ. ಮಾತುಕತೆಗೆ ಬೆಂಗಳೂರಿಗೆ ಬರುವಂತೆ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗುವುದು. ಒಂದು ವೇಳೆ ಗೋವಾ ಅಥವಾ ಮಹಾರಾಷ್ಟ್ರ ಸಿಎಂ ಕರೆದರೂ ಮಾತುಕತೆಗೆ ಹೋಗುತ್ತೇನೆ' ಎಂದು ಹೇಳಿದರು.












Click it and Unblock the Notifications