ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : 7 ಮಹತ್ವದ ನಿರ್ಣಯಗಳು
Recommended Video
ಬೆಂಗಳೂರು, ಸೆಪ್ಟೆಂಬರ್ 18 : ಕರ್ನಾಟಕ ಕಾಂಗ್ರೆಸ್ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಕೈಗೊಳ್ಳಲು ತೀರ್ಮಾನಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಅನುದಾನ ನೀಡದಿರುವುದನ್ನು ಪ್ರಮುಖ ವಿಚಾರವಾಗಿ ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕರ ಜೊತೆ ಚರ್ಚೆ ನಡೆಸಿ ಹಲವಾರು ತೀರ್ಮಾನಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಪ್ರವಾಹ ಮತ್ತು ಬರ ಪೀಡಿತ ಸಂತ್ರಸ್ತರಿಗೆ ಪರಿಹಾರವನ್ನು ಒದಗಿಸಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನವನ್ನು ಕೈಗೊಳ್ಳಲಾಯಿತು.
ಸಭೆಯ ಬಳಿಕ ಕಾಂಗ್ರೆಸ್ ನಾಯಕರು ನೆರೆ ಪರಿಹಾರ ಕೊಡಲು ವಿಫಲವಾದ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳ ವಿರುದ್ಧ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಸೆಪ್ಟೆಂಬರ್ 24ರಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ
ಪ್ರವಾಹ ಪೀಡಿತ ಮತ್ತು ಬರ ಪೀಡಿತ ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ಪರಿಹಾರವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ನೀಡಲು ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ಜನಾಂದೋಲನಕ್ಕೆ ಯೋಜನೆ
ಬರ ಮತ್ತು ಪ್ರವಾಹ ಪೀಡಿತ ಸಂತ್ರಸ್ತರಿಗೆ ರಾಜ್ಯ ಸರ್ಕಾರವ ಕೂಡಲೇ ಪರಿಹಾರ ನೀಡುವಂತೆ ಒತ್ತಾಯಿಸಲು ಪ್ರದೇಶವಾರು ಆಂದೋಲನವನ್ನು ರೂಪಿಸಲು ನಿರ್ಣಯ ಕೈಗೊಳ್ಳಲಾಯಿತು.

ಸಾಲಮನ್ನಾಕ್ಕಾಗಿ ಒತ್ತಾಯ
ಪ್ರವಾಹ ಮತ್ತು ಬರ ಪರಿಸ್ಥಿತಿಯ ಕಾರಣ ರಾಜ್ಯದ ರೈತಾಪಿ ವರ್ಗದವರು ಮಾಡಿರುವ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ಗಳ ಸಾಲಗಳನ್ನು ಮನ್ನಾ ಮಾಡಲು ಅತಿ ಜರೂರು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ಬೆಳಗಾವಿಯಲ್ಲಿ ಅಧಿವೇಶನ ಕರೆಯಿರಿ
ಪ್ರವಾಹ ಮತ್ತು ಬರ ಪರಿಸ್ಥಿತಿಯ ಚರ್ಚೆಗೆ ಕೂಡಲೇ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನವನ್ನು ಕರೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ಬರ ಪೀಡಿತ ತಾಲೂಕು ಘೋಷಣೆ
ಬರ ಪೀಡಿತ ತಾಲೂಕು/ಪ್ರದೇಶ ಕೂಡಲೇ ಘೋಷಣೆ ಮಾಡಲು ಸರ್ಕಾರವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ಸಂತಾಪ ಸೂಚನೆ
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟ ಜನರಿಗೆ ಸಂತಾಪ ಸೂಚಿಸಲಾಯಿತು.

ಕಾಂಗ್ರೆಸ್ ಡಿಕೆಶಿ ಜೊತೆಗಿದೆ
ಡಿ. ಕೆ. ಶಿವಕುಮಾರ್ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿಯ ನಿಲುವನ್ನು ತೀವ್ರವಾಗಿ ಖಂಡಿಸಲಾಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಕಾಂಗ್ರೆಸ್ ಪಕ್ಷವು ಸದಾ ಡಿ. ಕೆ. ಶಿವಕುಮಾರ್ ಜೊತೆಗೆ ಇರುತ್ತದೆ ಎಂದು ನಿರ್ಣಯ ಕೈಗೊಳ್ಳಲಾಯಿತು.











Click it and Unblock the Notifications