ಕೆಪಿಸಿಸಿ ಅಧ್ಯಕ್ಷರಲ್ಲ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯೇ ಬದಲಾವಣೆ!
ಬೆಂಗಳೂರು, ಫೆಬ್ರವರಿ 13: ಕರ್ನಾಟಕದ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ದೆಹಲಿಯಲ್ಲಿ ಬಿರುಸಿನ ಚಟುವಟಿಕೆ ಕೈಗೊಂಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಮುಂದಾಗಿವೆ ಎಂಬುದು ಸದ್ಯದ ಮಾಹಿತಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಜೆಪಿ ಪ್ರತಿಪಕ್ಷವಾಗಿದೆ.
ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ, ಜಲ ಸಂಪನ್ಮೂಲ ಸಚಿವರಾಗಿರುವ ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು. ಕೆಪಿಸಿಸಿಗೆ ಹೊಸ ಸಾರಥಿ ನೇಮಕ ಮಾಡಬೇಕು ಎಂದು ಕೆಲವು ಸಚಿವರು, ಪಕ್ಷದ ನಾಯಕರು ದೆಹಲಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ.

ಎಐಸಿಸಿ ಅಧ್ಯಕ್ಷರು ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ. ರಾಜ್ಯದ ರಾಜಕೀಯ ಅವರಿಗೆ ಚೆನ್ನಾಗಿ ತಿಳಿದಿದೆ. ಆದ್ದರಿಂದ ಇತರ ಹೈಕಮಾಂಡ್ ನಾಯಕರು ಈ ಬೆಳವಣಿಗೆ ಕುರಿತು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಎಲ್ಲವನ್ನೂ ಖರ್ಗೆ ಹೆಗಲಿಗೆ ಹಾಕಿದ್ದಾರೆ. ಆದರೆ ಈಗ ಕೆಪಿಸಿಸಿ ಅಧ್ಯಕ್ಷರಲ್ಲ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿಯೇ ಬದಲಾಗಲಿದ್ದಾರೆ? ಎಂಬ ಸುದ್ದಿ ಹಬ್ಬಿದೆ.
ರಣದೀಪ್ ಸಿಂಗ್ ಸುರ್ಜೇವಾಲ ಬದಲು?; ಹಾಲಿ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ರಣದೀಪ್ ಸಿಂಗ್ ಸುರ್ಜೇವಾಲ. 2023ರ ರಾಜ್ಯ ವಿಧಾನಸಭೆ ಚುನಾವಣೆ, 2024ರ ಲೋಕಸಭೆ ಚುನಾವಣೆಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ರಾಜ್ಯ ಉಸ್ತುವಾರಿಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಅವರು ಉಸ್ತುವಾರಿ ಸ್ಥಾನದಿಂದ ಬಿಡುಗಡೆ ಬಯಸಿದ್ದಾರೆ.
ಮಾಹಿತಿಗಳ ಪ್ರಕಾರ ರಣದೀಪ್ ಸಿಂಗ್ ಸುರ್ಜೇವಾಲ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ತಮ್ಮನ್ನು ಬಿಡುಗಡೆಗೊಳಿಸಿ ಎಂದು ಹೈಕಮಾಂಡ್ ನಾಯಕರಿಗೆ ಎರಡು ತಿಂಗಳ ಹಿಂದೆಯೇ ಮನವಿ ಮಾಡಿದ್ದಾರೆ. ಈಗ ಹೈಕಮಾಂಡ್ ಈ ಕುರಿತು ಆಲೋಚಿಸಿದ್ದು, ಉಸ್ತುವಾರಿ ಬದಲಾಗುವ ನಿರೀಕ್ಷೆ ಇದೆ.
ಪಕ್ಷದೊಳಗಿನ ಮಾಹಿತಿಯಂತೆ ರಣದೀಪ್ ಸಿಂಗ್ ಸುರ್ಜೇವಾಲ ಹರ್ಯಾಣ ರಾಜ್ಯದ ಉಸ್ತುವಾರಿ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಅವರನ್ನು ಅಲ್ಲಿಗೆ ನೇಮಕ ಮಾಡಿ, ಕರ್ನಾಟಕಕ್ಕೆ ಮಧ್ಯ ಪ್ರದೇಶ ಮೂಲದ ನಾಯಕರೊಬ್ಬರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗುತ್ತದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕಾರಣ ಉಸ್ತುವಾರಿಗಾಗಿ ಪೈಪೋಟಿ ನಡೆಯುವ ನಿರೀಕ್ಷೆಯೂ ಇದೆ. ಆದರೆ ಅಂತಿಮ ತೀರ್ಮಾನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆಗೆದುಕೊಳ್ಳಲಿದ್ದಾರೆ. ಪಕ್ಷ ಅಧಿಕಾರದಲ್ಲಿರುವ ರಾಜ್ಯವಾದ ಕಾರಣ ಹೈಕಮಾಂಡ್ ಸಹ ಎಚ್ಚರಿಕೆಯ ಹೆಜ್ಜೆ ಇಡಲಿದೆ.
ಈ ಹಿಂದೆ ಕೆ. ಸಿ. ವೇಣುಗೋಪಾಲ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪ್ತರಾದ ಅವರು ರಾಷ್ಟ್ರಮಟ್ಟದಲ್ಲಿ ವಿವಿಧ ಹುದ್ದೆ ನಿರ್ವಹಣೆ ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಪುನಃ ರಾಜ್ಯ ಉಸ್ತುವಾರಿಯಾಗಿ ನೇಮಕ ಮಾಡುವ ಸಾಧ್ಯತೆಗಳಿಲ್ಲ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬ ಮಾಹಿತಿ ಇದೆ. ಲೋಕಸಭೆ ಚುನಾವಣೆ 2024ರ ತನಕ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಮಾಡಬಾರದು ಎಂದು ಡಿ. ಕೆ. ಶಿವಕುಮಾರ್ ಹೈಕಮಾಂಡ್ ನಾಯಕರಿಗೆ ಷರತ್ತು ಹಾಕಿದ್ದರು. ಈಗ ಅಧ್ಯಕ್ಷ ಹುದ್ದೆ ಬದಲಾವಣೆ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರವಾಗಿದೆ.
ಹರ್ಯಾಣ ಸೇರಿ ವಿವಿಧ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಎಐಸಿಸಿ ಕಳೆದ ವಾರ ಬದಲಾವಣೆ ಮಾಡಿದೆ. ಆದರೆ ಕರ್ನಾಟಕದ ವಿಚಾರದಲ್ಲಿ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಖರ್ಗೆಗೆ ರಾಜ್ಯ ರಾಜಕೀಯ ಚೆನ್ನಾಗಿ ತಿಳಿದಿರುವ ಕಾರಣ ಸೂಕ್ತ ಸಮಯದಲ್ಲಿ ಅವರು ತೀರ್ಮಾನ ಮಾಡುವ ಸಾಧ್ಯತೆ ಇದೆ.












Click it and Unblock the Notifications