ಇಬ್ಬರು ಅತೃಪ್ತ ಶಾಸಕರು ಕಾಂಗ್ರೆಸ್ನಿಂದ ಅಮಾನತು?
ಬೆಂಗಳೂರು, ಫೆಬ್ರವರಿ 06 : ಕರ್ನಾಟಕ ಕಾಂಗ್ರೆಸ್ ಅತೃಪ್ತ ಶಾಸಕರಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದೆ. ಪಕ್ಷದ ಹೈಕಮಾಂಡ್ ಈ ಬಗ್ಗೆ ಸೂಚನೆ ನೀಡಿದ್ದು, ಗುರುವಾರ ಇಬ್ಬರು ಅತೃಪ್ತ ಶಾಸಕರನ್ನು ಅಮಾನತು ಮಾಡುವ ಸಾಧ್ಯತೆ ಇದೆ.
ಹೌದು, ಇಬ್ಬರನ್ನು ಅಮಾನತುಗೊಳಿಸಲು ಹೈಕಮಾಂಡ್ ಒಪ್ಪಿಗೆ ಕೊಟ್ಟಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಈ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲು ಸಾಧ್ಯತೆ ಇದೆ. ಈ ಮೂಲಕ ಅತೃಪ್ತರಿಗೆ ಸಂದೇಶ ರವಾನಿಸಲಿದ್ದಾರೆ.
ಅತೃಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರನ್ನು ಅಮಾನತುಗೊಳಿಸುವ ಸಾಧ್ಯತೆ ಇದೆ. ಇದಕ್ಕಾಗಿ ಕಾಂಗ್ರೆಸ್ ನಾಯಕರು ದಾಖಲೆಗಳನ್ನು ಸಿದ್ಧಪಡಿಸಿದ್ದಾರೆ.

ಸಂಪುಟ ವಿಸ್ತರಣೆ ಬಳಿಕ ರಮೇಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿದ್ದಾರೆ. ಪಕ್ಷದ ನಾಯಕರ ಸಂಪರ್ಕಕ್ಕೂ ಸಿಗದೇ ದೂರ ಉಳಿದಿದ್ದಾರೆ. ಶಾಸಕಾಂಗ ಪಕ್ಷದ ಸಭೆಗೆ ಸತತವಾಗಿ ಗೈರಾಗುವ ಮೂಲಕ ಪಕ್ಷದ ನಾಯಕರಿಗೂ ತಲೆನೋವಾಗಿದ್ದಾರೆ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಡಾ.ಉಮೇಶ್ ಜಾಧವ್ ಅವರು ಈಗಾಗಲೇ ಕಾಂಗ್ರೆಸ್ನಿಂದ ದೂರವಾಗಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಇದೆ. ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.












Click it and Unblock the Notifications