ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ಬೆಂಗಳೂರು, ಆಗಸ್ಟ್ 29 : ಕರ್ನಾಟಕ ಕಾಂಗ್ರೆಸ್ ರಾಜ್ಯಪಾಲರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ವಿರುದ್ಧ ದೂರು ನೀಡಿದೆ. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪ ಮಾಡಿದೆ.
ಆನಂದರಾವ್ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಪಕ್ಷ ಕಾಂಗ್ರೆಸ್ನ ನಾಯಕರು ಗುರುವಾರ ಬೃಹತ್ ಧರಣಿ ನಡೆಸಿದರು. ಕರ್ನಾಟಕದ ಬಿಜೆಪಿ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಈ ಧರಣಿ ಹಮ್ಮಿಕೊಳ್ಳಲಾಗಿತ್ತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ವಿ. ಎಸ್. ಉಗ್ರಪ್ಪ, ಎಂ. ವೀರಪ್ಪ ಮೊಯ್ಲಿ ಸೇರಿದಂತೆ ಹಲವಾರು ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಧರಣಿ ಬಳಿಕ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು.
ಧರಣಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ರಾಜ್ಯದಿಂದ ಬಿಜೆಪಿಯ 25 ಸಂಸದರು ಆಯ್ಕೆಯಾಗಿದ್ದಾರೆ, ಇಲ್ಲಿ ಬಿಜೆಪಿಯದೇ ಸರ್ಕಾರವಿದೆ, ಪ್ರವಾಹ ಬಂದು ತಿಂಗಳಾಗುತ್ತಾ ಬಂತು ಆದರೂ ಕೇಂದ್ರ ಸರ್ಕಾರ ನಯಾಪೈಸೆ ಹಣವನ್ನು ಬಿಡುಗಡೆ ಮಾಡಿಲ್ಲ. ಯಡಿಯೂರಪ್ಪನವರು ಪದೇ ಪದೇ ದೆಹಲಿಗೆ ಹೋಗಿ ಬಂದರೂ ಒಂದು ಪೈಸೆ ಅನುದಾನ ತರಲು ಅವರಿಂದ ಆಗಲಿಲ್ಲ" ಎಂದು ಆರೋಪಿಸಿದರು.

ಕಾಂಗ್ರೆಸ್ನಿಂದ ಧರಣಿ
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾದ ಪುಷ್ಪಾ ಅಮರನಾಥ್, ಮಾಜಿ ಸಚಿವರಾದ ಡಿ.ಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ, ಕಿಮ್ಮನೆ ರತ್ನಾಕರ್, ಎಚ್.ಕೆ ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರಕ್ಕೆ ಚುರುಕಾಗಿ ಕೆಲಸ ಮಾಡಲು ಸೂಚನೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾಗೆ ದೂರು ನೀಡಿದೆ.

ಜನಪರ ಕಾಳಜಿ ಈಗೇಕೆ ಇಲ್ಲ?
"ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ರೂ.10 ಲಕ್ಷ, ಒಂದು ಎಕರೆ ಕಬ್ಬು ಬೆಳೆ ನಾಶಕ್ಕೆ ರೂ.50 ಸಾವಿರ ಪರಿಹಾರ ನೀಡಲಿ. ಮುಳುಗಡೆಯಾದ ಇಡೀ ಊರನ್ನೆ ಸ್ಥಳಾಂತರಿಸುವ ಕೆಲಸ ಆಗಬೇಕು. ಬಿಜೆಪಿ ನಾಯಕರು ಆಪರೇಷನ್ ಕಮಲಕ್ಕೆ ತೋರುತ್ತಿದ್ದ ಉತ್ಸಾಹವನ್ನು ಪ್ರವಾಹ ಪೀಡಿತರ ಕಷ್ಟಕ್ಕೆ ನೆರವಾಗುವುದರಲ್ಲಿ ತೋರಲಿ. ಅಧಿಕಾರ ಸಿಗುವವರೆಗೂ ಇದ್ದ ಜನಪರ ಕಾಳಜಿ ಈಗೇಕೆ ಇಲ್ಲ?" ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ
ಪ್ರವಾಹ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಕೂಡಲೇ ವಿಶೇಷ ಅಧಿವೇಶನ ಕರೆದು, ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿ. ಪ್ರವಾಹ ಪರಿಸ್ಥಿತಿಯನ್ನು ಕೇಂದ್ರಕ್ಕೆ ನಾವು ಮನವರಿಕೆ ಮಾಡಿಕೊಟ್ಟು, ಪರಿಹಾರದ ಹಣ ಕೇಳುತ್ತೇವೆ. ಆಗಲೂ ಕೊಡದಿದ್ದರೆ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ಕೊಟ್ಟಿದ್ದಾರೆ.












Click it and Unblock the Notifications