ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ನಿಂದ ಸಂಧಾನ ಸೂತ್ರ
ಬೆಂಗಳೂರು, ಸೆಪ್ಟೆಂಬರ್ 20 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ. ಕಾಂಗ್ರೆಸ್ ಪಕ್ಷದ ಕೋಟಾದಡಿ 6 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತದೆ. ಆದರೆ, 6 ಸ್ಥಾನಕ್ಕೆ 20ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದ ಪಕ್ಷದ ನಾಯಕರ ಜೊತೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಸಚಿವ ಸಂಪುಟ ವಿಸ್ತರಣೆಗೆ ಅವರು ಒಪ್ಪಿಗೆ ನೀಡಿದ್ದಾರೆ. ಅಕ್ಟೋಬರ್ 3ರ ಬಳಿಕ ಮತ್ತೊಮ್ಮೆ ಬಂದು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ 6 ಸ್ಥಾನಗಳನ್ನು ಭರ್ತಿ ಮಾಡಬೇಕಿದೆ. 20ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಇದರಲ್ಲಿ ಕೆಲವು ಹಿರಿಯ ಶಾಸಕರು ಸಹ ಇದ್ದಾರೆ. ಆದ್ದರಿಂದ, ಕಾಂಗ್ರೆಸ್ ಸಂಧಾನ ಸೂತ್ರವೊಂದನ್ನು ಸಿದ್ಧಪಡಿಸಿದೆ.
ಅಕ್ಟೋಬರ್ 3ರಂದು ವಿಧಾನಸಭೆಯಿಂದ ಮೂವರು ಸದಸ್ಯರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ಸಂಪುಟ ವಿಸ್ತರಣೆ ಮಾಡಲಿದೆ. ಕಾಂಗ್ರೆಸ್ ಮಾಡಿರುವ ಸೂತ್ರವೇನು? ಇಲ್ಲಿದೆ ಮಾಹಿತಿ....

ಸಚಿವ ಸ್ಥಾನದ ಆಕಾಂಕ್ಷಿಗಳು
ಮಾಜಿ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾ ರೆಡ್ಡಿ, ಪಿ.ಟಿ.ಪರಮೇಶ್ವರ ನಾಯ್ಕ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಇವರ ಜೊತೆಗೆ ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್, ಸಂಡೂರು ಶಾಸಕ ಇ.ತುಕಾರಾಂ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್ ಸಮನ್ವಯ ಸೂತ್ರ
20ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳು. ಕೇವಲ ಆರು ಮಂದಿಯನ್ನು ಸೇರಿಸಿಕೊಂಡರೆ ಅಸಮಾಧಾನ ಉಂಟಾಗಲಿದೆ ಎಂಬುದು ಪಕ್ಷದ ನಾಯಕರಿಗೂ ಗೊತ್ತು. ಆದ್ದರಿಂದ, ಸಮನ್ವಯ ಸೂತ್ರ ಸಿದ್ಧವಾಗಿದೆ.
ಸಂಪುಟದಿಂದ ಮೂವರು ಸಚಿವರನ್ನು ಕೈಬಿಟ್ಟು, ಅತೃಪ್ತರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. ಆದರೆ, ಯಾರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ.

ಬಳ್ಳಾರಿ ನಾಯಕರ ಮುನಿಸು
ಬಳ್ಳಾರಿ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೊಡಿ ಎಂದು 6 ಶಾಸಕರು ಒತ್ತಾಯಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಸಹ ಈ ಬೇಡಿಕೆಯನ್ನು ಇಟ್ಟಿದ್ದರು. ಆದರೆ, ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುಲು ವಿರೋಧವಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಬಂದ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂಬುದು ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ್, ಇ.ತುಕಾರಾಂ ಮತ್ತು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರ ಒತ್ತಾಯವಾಗಿದೆ.

ನಾನು ಸಚಿವ ಸ್ಥಾನದ ಆಕಾಂಕ್ಷಿ
ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅವರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, 'ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ, ಪಕ್ಷದ ನಾಯಕರ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಅಕ್ಟೋಬರ್ 3ರ ಬಳಿಕ ನಿಲುವನ್ನು ತಿಳಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಬಿಜೆಪಿ ನಾಯಕರು ಯಾರೂ ನನ್ನನ್ನು ಸಂಪರ್ಕಿಸಿಲ್ಲ' ಎಂದು ಹೇಳಿದರು.











Click it and Unblock the Notifications