ಕಾಂಗ್ರೆಸ್ ನಿಂದ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’
ಬೆಂಗಳೂರು, ಡಿಸೆಂಬರ್ 8: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ 'ಐಕ್ಯತಾ ಸಮಾವೇಶ'ವನ್ನು ಕಾಂಗ್ರೆಸ್ ಪಕ್ಷ ಜ.8ರಂದು ಚಿತ್ರದುರ್ಗದಲ್ಲಿ ನಡೆಸಲು ತೀರ್ಮಾನಿಸಿದೆ' ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ಸಮಾಜದಲ್ಲಿ ಶೋಷಿತ ವರ್ಗಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಅಂದಿನಿಂದ ಇಲ್ಲಿಯವರೆಗೂ ಈ ಸಮುದಾಯಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿವೆ. ಕಾಂಗ್ರೆಸ್ ಪಕ್ಷ ಕೂಡ ಅವರ ಕ್ಷೇಮಾಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಕಾನೂನು ತರುವ ಮೂಲಕ ಭಾರತದಲ್ಲಿ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಅವುಗಳನ್ನು ಜಾರಿಗೆ ತರಲು ಎಲ್ಲ ಪ್ರಯತ್ನ ಮಾಡಿದೆ.
ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು
ಕರ್ನಾಟಕದಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ, ಬಡತನ ರೇಖೆಯಿಂದ ಹೊರಗೆ ಮುಖ್ಯವಾಹಿನಿಗೆ ತರಲು ಕಾನೂನಾತ್ಮಕವಾಗಿ ಕೆಲಸ ಮಾಡಿಕೊಂಡು ಬಂದಿದೆ. ಇಂದು ಬೇರೆ ಬೇರೆ ಪಕ್ಷಗಳು ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿವೆ. ಯಾವ ಪಕ್ಷಗಳು ಅವರ ಯೋಗಕ್ಷೇಮಕ್ಕೆ ಪ್ರಯತ್ನಿಸಲಿಲ್ಲ. ಪಕ್ಷದ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಪೋಟೋಗಳನ್ನು ಹಾಕಿಕೊಳ್ಳದವರು ಇಂದು ದಲಿತರ ಮನೆಗಳಲ್ಲಿ ಮಲಗಲು, ಬೇರೆ ಹೊಟೇಲ್ ನಿಂದ ಊಟ ತಂರಿಸಿ ತಿಂದು ಬರುತ್ತಿದ್ದಾರೆ.
ಈ ಸಮುದಾಯಗಳನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿವೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರುಗಳು ನಮ್ಮ ಜನರಿಗೆ ನಿಮ್ಮ ಜತೆ ಇದ್ದೇವೆ. ನಿಮ್ಮ ಕ್ಷೇಮ ಕಾಪಾಡಲು ನಾವು ಇದ್ದೇವೆ ಎಂದು ಮರುಭರವಸೆ ನೀಡಲು ಸಮಾವೇಶ ಮಾಡಲು ನಾವೆಲ್ಲ ಪೂರ್ವಭಾವಿ ಸಭೆ ಮಾಡಿ ನಿರ್ಧರಿಸಿದ್ದೇವೆ.
ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ಈಗ ದಲಿತರ ಓಲೈಕೆಗೆ ಪಕ್ಷ ಪ್ರಯತ್ನಿಸುತ್ತಿದೆಯೇ ಎಂಬ ವಿಚಾರವಾಗಿ ಮಾತನಾಡಿ, ನಾವೇ ದಲಿತರಾಗಿದ್ದೇವೆ. ನಾವು ಯಾರನ್ನೂ ಓಲೈಸುವ ಅಗತ್ಯವಿಲ್ಲ. ದಲಿತರ ಮೇಲಿನ ದೌರ್ಜನ್ಯ, ಹತ್ಯೆಗಳಾಗಿದ್ದು, ಇವರ ರಕ್ಷಣೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಪಕ್ಷವಾಗಿ ನಮ್ಮ ಅಜೆಂಡಾ ದಲಿತರ ರಕ್ಷಣೆಯಾಗಿವೆ. ಅವರ ರಕ್ಷಣೆಗೆ ಕಾನೂನು ತಂದಿರುವುದು ಕಾಂಗ್ರೆಸ್ ಪಕ್ಷ. ಅದನ್ನು ಅನುಷ್ಠಾನ ಮಾಡುವುದು ಸರ್ಕಾರದ ಕೆಲಸ. ನಮ್ಮ ಸರ್ಕಾರದ ಇದ್ದಾಗ ದೌರ್ಜನ್ಯ ಆದಾಗ ನಾವು ಧ್ವನಿ ಎತ್ತಿದ್ದೇವೆ. ನಾವು ಇಂತಹ ಪ್ರಕರಣದಲ್ಲಿ ಹೇಳಿಕೆ ನೀಡಿ ಸುಮ್ಮನೆ ಕೂತಿಲ್ಲ. ಸಂತ್ರಸ್ತರ ಮನೆಗೆ ಹೋಗಿ ಅವರ ಸಾಂತ್ವಾನ ಹೇಳಿದ್ದೇವೆ ಎಂದು ತಿಳಿಸಿದರು.
ಐಕ್ಯತಾ ಸಮಾವೇಶದಲ್ಲಿ ದಲಿತರ ರಾಜಕೀಯ ಆಕಾಂಕ್ಷೆಗಳನ್ನು ವ್ಯಕ್ತಪಡಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೀಸಲಾತಿ ನಮ್ಮ ಹಕ್ಕು. ರಾಜಕೀಯದಲ್ಲಿ ನಾವು ಅದನ್ನು ಆಗ್ರಹಿಸುತ್ತೇವೆ. ಕಾಂಗ್ರೆಸ್ ಪಕ್ಷದ ಚೌಕಟ್ಟಿನಲ್ಲಿ ನಾವು ಪಕ್ಷದಲ್ಲಿ ಕೋರುತ್ತೇವೆ ಎಂದು ತಿಳಿಸಿದರು.
ದಲಿತರಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಇಲ್ಲವೆ ಎಂಬ ವಿಚಾರವಾಗಿ ಮಾತನಾಡಿ, ನಾವೆಲ್ಲರೂ ಅರ್ಹರಿದ್ದು, ಸಮಯ ಬಂದಾಗ ನಾವು ಅದನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ. ನಾವು ಕಾಂಗ್ರೆಸ್ ಪಕ್ಷದ ನಿಯಮಗಳಿಗೆ ಬದ್ಧರಾಗಿದ್ದು, ಕಾಂಗ್ರೆಸ್ ನಮಗೆ ರಕ್ಷಣೆ ನೀಡಿದೆ. ಸಮಾಜದ ಮುಖ್ಯವಾಹಿನಿಗೆ ತರಲು ಕಾಂಗ್ರೆಸ್ ಶ್ರಮಿಸಿದೆ. ಮೊದಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಮುಖ್ಯಮಂತ್ರಿ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಡೋಣ. ಇಲ್ಲಿ ವೈಯಕ್ತಿಕ ಪ್ರಶ್ನೆ ಉದ್ಭವಿಸುವುದಿಲ್ಲ. ನಮ್ಮ ಪ್ರಶ್ನೆ ನಮ್ಮ ಒಗ್ಗಟ್ಟು ಪ್ರದರ್ಶಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಬಡವರಿಗೆ ಅಧಿಕಾರ ಕೊಟ್ಟು ಅವರನ್ನು ಸಧೃಡಗೊಳಿಸಲು ನಾವು ಕಾಂಗ್ರೆಸ್ ಪಕ್ಷ ನಮ್ಮ ಜನರಿಗೆ ನೀಡುವ ಮರುಭರವಸೆ ಇದಾಗಿದೆ. ಇದನ್ನು ಗಮನಿಸಿದ ನಂತರ ಹೈಕಮಾಂಡ್ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರಾದ ಕೆ.ಎಚ್ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಹೆಚ್. ಆಂಜನೇಯ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ತಂಗಡಗಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.