Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ದಿನೇಶ್ ಗುಂಡೂರಾವ್
ಹಲವು ವರ್ಷಗಳಿಂದ ಚರ್ಚೆಯಲ್ಲಿದ್ದ ಹುಕ್ಕಾ ಬಾರ್ ನಿಷೇಧದ ಕುರಿತು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದೆ. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಲು ಕಾಯ್ದೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ಹಾನಿ ತಡೆಗೆ ಸಂಬಂಧಪಟ್ಟಂತೆ ಮಂಗಳವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಈ ವಿಚಾರ ತಿಳಿಸಿದರು.

ಹುಕ್ಕಾ ಬಾರ್ ನಿಷೇಧಿಸುವುದು ಅಗತ್ಯವಿದೆ ಎಂದು ತೀರ್ಮಾನ ಮಾಡಲಾಗಿದೆ. ಆದರೆ ಇದಕ್ಕಾಗಿ ಪ್ರತ್ಯೇಕ ಕಾಯ್ದೆಯ ಬಲ ಇಲ್ಲದೇ ಇದ್ದರೆ ನಿಷೇಧ ಮಾಡಿದರೂ ಹೆಚ್ಚಿನ ಪ್ರಯೋಜನ ಆಗಲಾರದು. ನ್ಯಾಯಾಲಯದಲ್ಲಿ ಕೂಡ ಸರ್ಕಾರಕ್ಕೆ ಹಿನ್ನಡೆಯಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸಲು ಪ್ರತ್ಯೇಕವಾದ ಕಾಯ್ದೆ ರೂಪಿಸಿ ಜಾರಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಕಾಯ್ದೆ ಮೂಲಕ ನಿಯಂತ್ರಣ
ಹುಕ್ಕಾಬಾರ್ ಗಳಿಂದ ಚಿಕ್ಕ ಮಕ್ಕಳು ಸಹ ಹಾಳಾಗುತ್ತಿದ್ದಾರೆ. ಯುವ ಜನ ಹೆಚ್ಚಾಗಿ ಇದರ ಚಟಕ್ಕೆ ಬಿದ್ದು ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹುಕ್ಕಾ ಕೂಡ ತಂಬಾಕು ಸೇವನೆ ಪ್ರಕ್ರಿಯೆಯಾಗಿದೆ. ಮುಂದಿನ ದಿನಗಳಲ್ಲಿ ಹುಕ್ಕಾಬಾರ್ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ. ಇದಕ್ಕಾಗಿ ಕಾನೂನು ರೂಪಿಸಲಾಗುವುದು ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸುವ ಕುರಿತು ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಸದ್ಯ ಶಾಲಾ-ಕಾಲೇಜು ವ್ಯಾಪ್ತಿಯಿಂದ 100 ಮೀಟರ್ ವರೆಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈಗ ಇದನ್ನು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ಮುತ್ತ ಕೂಡ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ
ಈಗ ತಂಬಾಕು ಉತ್ಪನ್ನಗಳನ್ನು ಸೇವಿಸಲು 18 ವರ್ಷ ಮೇಲ್ಪಟ್ಟ ಯುವಕರಿಗೆ ಅವಕಾಶ ಇದೆ. ಇದನ್ನು 21 ವರ್ಷಕ್ಕೆ ಏರಿಕೆ ಮಾಡಲು ಕೂಡ ಚಿಂತನೆ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇದನ್ನು ಸುಮ್ಮನೆ ಘೋಷಣೆ ಮಾಡಲು ಆಗದು, ಇದಕ್ಕಾಗಿ ಕಾನೂನು ರೂಪಿಸಬೇಕಾಗುತ್ತದೆ.
ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಇದನ್ನು ಜಾರಿ ಮಾಡಬೇಕಾಗುತ್ತದೆ. ಇದಕ್ಕಾಗಿ ವಿಧೇಯಕ ತರಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
"ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ." ಎಂದು ಅವರು ಟ್ವೀಟ್ ಮಾಡಿದ್ದಾರೆ.












Click it and Unblock the Notifications