ಅಕ್ರಮ ಅದಿರು ಮಾರಾಟ: ಗಾಲಿ ರೆಡ್ಡಿ ವಿರುದ್ಧ ಕ್ರಿಮಿನಲ್ ದಾವೆಗೆ ಕೋರ್ಟ್ ಆದೇಶ
ಬೆಂಗಳೂರು, ಜ. 27: ಗಣಿ ಅಕ್ರಮದಿಂದ ರಾಜಕೀಯದಿಂದಲೇ ದೂರ ಉಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿಗೆ ಮತ್ತೆ ಗಣಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕ ನಷ್ಟವುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನ ಪ್ರತಿನಿಧಿಗಳ ನ್ಯಾಯಾಲಯ ಆದೇಶ ಮಾಡಿದೆ.
ಖಾಸಗಿ ದೂರಿನ ವಿಚಾರಣೆ ನಡೆಸಿದ 63ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮಾಜಿಸ್ಟ್ರೇಟ್ (ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ನ್ಯಾ. ಪ್ರೀತ್ ಜೆ. ಈ ಮಹತ್ವದ ಆದೇಶ ಮಾಡಿದ್ದಾರೆ.
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಆಪ್ತ ಕಾರ್ಯದರ್ಶಿ ಮತ್ತು ದೇವಿ ಎಂಟರ್ಪ್ರೈಸಸ್ ಪಾಲುದಾರ ಕೆ ಮೆಹಫೂಜ್ ಅಲಿ ಖಾನ್ ಮತ್ತು ಓಬಳಾಪುರಂ ಮೈನಿಂ ಕಂಪೆನಿ ನಿರ್ದೇಶಕ ಮತ್ತು ಶ್ರೀ ಮಿನರಲ್ಸ್ನ ಪಾಲುದಾರ ಬಿ ವಿ ಶ್ರೀನಿವಾಸ ರೆಡ್ಡಿ ಅವರ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣಗಳ ಕಾಯಿದೆ 1957ರ ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ.
ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ವರದಿ ನೀಡಿದ್ದರು. ಲೋಕಾಯುಕ್ತ ವರದಿಯಲ್ಲಿ ಬಳ್ಳಾರಿ ಗಣಿ ಅಕ್ರಮದ ಇಂಚಿಂಚೂ ಬಯಲಾಗಿತ್ತು. ಲೋಕಾಯುಕ್ತ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲೇ ಇಲ್ಲ. ಗಣಿ ಅಕ್ರಮಕ್ಕೆ ಸಂಬಂಧಿಸದಿಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗಾಲಿ ಜನಾರ್ದನರೆಡ್ಡಿ ಮತ್ತು ಅವರ ಪಟಾಲಂ ಮೇಲೆ ಮಾಡಿತ್ತು. ಈ ವೇಳೆ ಕೆಲವು ಮಹತ್ವದ ದಾಖಲೆಗಳು, ಪೆನ್ ಡ್ರೈವ್ಗಳು ಸಿಕ್ಕಿದ್ದವು. ಆ ನಂತರದ ಬೆಳವಣಿಗೆಯಲ್ಲಿ ಪ್ರಕರಣ ಸಿಬಿಐ ಅಂಗಳ ಸೇರಿತ್ತು. ಗಾಲಿ ಜನಾರ್ದನರೆಡ್ಡಿ ಸೇರಿದಂತೆ ಹಲವರು ಬಂಧನಕ್ಕೆ ಒಳಗಾಗಿದ್ದರು.
2009-10 ರಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್ ಮತ್ತು ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವರ ಮನೆ, ಸಂಸ್ಥೆ, ಕಚೇರಿಗಳ ಮೇಲೆ ದಾಳಿ ನಡೆಸಿ, ಡಿಜಿಟಲ್ ದತ್ತಾಂಶ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ಆರೋಪಿಗಳು ಸರ್ಕಾರಕ್ಕೆ ರಾಜಧನ ಮತ್ತಿತರ ಶುಲ್ಕ ಪಾವತಿಸದೆ 1,25,419 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಎನ್ ಶೇಕ್ಸಾಬ್ ಮೈನ್ಸ್ ಮತ್ತು ತಿರುಮಲ ಕನ್ವೇಯರ್ ಸಿಸ್ಟಮ್ಸ್ಗೆ ಮಾರಾಟ ಮಾಡಿದ್ದರು ಎಂಬುದು ತನಿಖೆಯ ಸಂದರ್ಭದಲ್ಲಿ ಪತ್ತೆಯಾಗಿತ್ತು. 1,25,419 ಮೆಟ್ರಿಕ್ ಟನ್ ಕಬ್ಬಿಣದ ಅದಿರಿನ ಪೈಕಿ 44,695 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಮಾರಾಟ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗದಿಗನೂರ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಬಾಕಿ ಇರುವ 80,724 ಮೆಟ್ರಿಕ್ ಟನ್ ಕಬ್ಬಿಣದ ಅದಿರಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ಶ್ರೀ ಮಿನರಲ್ಸ್ ಮೂಲಕ ಆರ್ಬಿಎಸ್ ಎಸ್ಎನ್ ಕಂಪೆನಿಗೆ 4,557 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಮಾರಿದ್ದರ ಪೈಕಿ 1,069 ಮೆಟ್ರಿಕ್ ಟನ್ ಕಬ್ಬಿಣದ ಅದಿರಿಗೆ ಸಂಬಂಧಿಸಿದಂತೆ ಯಾವುದೇ ಅನುಮತಿ ಅಥವಾ ಪರವಾನಗಿಯನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆಯಲಾಗಿರಲಿಲ್ಲ. ಈ ಮೂಲಕ ರಾಜ್ಯ ಸರ್ಕಾರಕ್ಕೆ 23,89,650 ರೂಪಾಯಿ ಆರ್ಥಿಕ ನಷ್ಟ ಉಂಟುಮಾಡಲಾಗಿತ್ತು.
2015ರಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379, 409, 420, 468 ಮತ್ತು 471 ಜೊತೆಗೆ ಸೆಕ್ಷನ್ 120ಬಿ ಅಡಿ ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆಯ ಸಂದರ್ಭದಲ್ಲಿ ತನಿಖಾಧಿಕಾರಿ ಸಲ್ಲಿಸಿರುವ ದಾಖಲೆಗಳನ್ನು ಪರಿಗಣಿಸುವಂತೆ ಅರ್ಜಿದಾರರು ಕೋರಿದ್ದಾರೆ. ತನಿಖಾಧಿಕಾರಿ ಸಲ್ಲಿಸಿರುವ ದಾಖಲೆಗಳಲ್ಲಿ ಮೇಲ್ನೋಟಕ್ಕೆ ವಾಸ್ತವ ಅಂಶಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.
Recommended Video