Breaking: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ: ಸುರೇಶ್ ಕುಮಾರ್
ಬೆಂಗಳೂರು, ಜೂನ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಹಿನ್ನೆಲೆ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಕೊರೊನಾವೈರಸ್ ಹಾವಳಿ ನಡುವೆ ಪರೀಕ್ಷೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ.
ರಾಜ್ಯದಲ್ಲಿ ಒಂದು ವರ್ಗವು ಪರೀಕ್ಷೆ ಬೇಡ ಎನ್ನುತ್ತಿದ್ದರೆ, ಇನ್ನೊಂದು ವರ್ಗವು ಪರೀಕ್ಷೆ ನಡೆಸಬೇಕು ಎನ್ನುತ್ತಿದೆ. ಪ್ರತಿಯೊಂದು ನಿರ್ಧಾರದ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುವುದು ಸರ್ವೇ ಸಾಮಾನ್ಯವಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲು ತೀರ್ಮಾನ:
ರಾಜ್ಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸುವ ನಿರ್ಧಾರದಿಂದ ಕುಗ್ಗಬಾರದು. ಐಐಟಿ ವ್ಯಾಸಂಗ ಮಾಡುವ ಗುರಿಯನ್ನು ಹೊಂದಿದ್ದೀರಿ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ.
ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಕನಿಷ್ಠ 12 ದಿನಗಳೇ ಬೇಕಾಗಿರುತ್ತದೆ. ಕೊವಿಡ್-19 ಸಂದಿಗ್ಧ ಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವ ತೊಂದರೆ ತೆಗೆದುಕೊಳ್ಳುವುದಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
SSLC ಪರೀಕ್ಷೆ ನಡೆಸುವುದಕ್ಕೆ ಸರ್ಕಾರದ ನಿರ್ಧಾರ:
Recommended Video
ಕರ್ನಾಟಕದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಜುಲೈ ಮೂರನೇ ವಾರದಲ್ಲಿ ನಡೆಸುವುದಕ್ಕೆ ಸರ್ಕಾರವು ತೀರ್ಮಾನಿಸಿದೆ. ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನವನ್ನು ಕ್ರೂಡೀಕರಿಸಿ ಒಂದು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ. ಸರಳ ಹಾಗೂ ಸುಲಭ ಭಾಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗಿರುತ್ತದೆ. ಈ ಪ್ರಶ್ನೆ ಪತ್ರಿಕೆ ಹಿಂದೆ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಅದರ ಬದಲಿಗೆ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ಯಾವ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದನ್ನು ನಿರ್ಧರಿಸುವುದಕ್ಕೆ ಸಹಕಾರಿ ಆಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.












Click it and Unblock the Notifications