ಚುನಾವಣಾ ಆಯೋಗಕ್ಕೆ ಸಚಿವ ಸುರೇಶ್ ಕುಮಾರ್ ಅಪರೂಪದ ಮನವಿ
ಬೆಂಗಳೂರು, ನ 12: ಕರ್ನಾಟಕ ಮುಖ್ಯ ಚುನಾವಣಾ ಆಯೋಗಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಸಚಿವ ಸುರೇಶ್ ಕುಮಾರ್ ಅಪರೂಪದ ಮನವಿಯೊಂದನ್ನು ಸಲ್ಲಿಸಿದ್ದಾರೆ.
ಈ ಬಗ್ಗೆ ಆಯೋಗಕ್ಕೆ ಪತ್ರ ಬರೆದಿರುವ ಸಚಿವರು, "ಚುನಾವಣಾ ಸಂಬಂಧದ ಕೆಲಸಗಳಿಗೆ, ಶಿಕ್ಷಕರನ್ನು ಬಳಸಿಕೊಳ್ಳಬೇಡಿ" ಎನ್ನುವ ಮನವಿಯನ್ನು ಸುರೇಶ್ ಕುಮಾರ್ ಮಾಡಿದ್ದಾರೆ.
"ಚುನಾವಣಾ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುವ ಪ್ರಕ್ರಿಯೆ ಹಿಂದೆಯಿಂದಲೂ ನಡೆದುಕೊಂಡು ಬರುತ್ತಿದೆ. ಇದು, ಒಟ್ಟಾರೆಯಾಗಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ" ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

"ಶಿಕ್ಷಕರು ಚುನಾವಣಾ ಕೆಲಸಕ್ಕೆ ಹೋದರೆ, ಪಾಠಗಳನ್ನು ಪರೀಕ್ಷೆಯ ಮುನ್ನ ಮುಗಿಸಲು ಸಾಧ್ಯವಾಗುವುದಿಲ್ಲ. ಇಂತಹ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು" ಎಂದು ಸಚಿವರು, ಆಯೋಗಕ್ಕೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಇದೇ ಬರುವ ಡಿಸೆಂಬರ್ ಐದರಂದು ಅನರ್ಹಗೊಂಡ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿದೆ. ಶಿಕ್ಷಣ ಸಚಿವರ ಈ ಮನವಿಗೆ, ರಾಜ್ಯ ಚುನಾವಣಾ ಆಯೋಗ, ಯಾವರೀತಿ ಸ್ಪಂದಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೇರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ.












Click it and Unblock the Notifications