ಎಕ್ಸಿಟ್ ಪೋಲ್ಗಳಲ್ಲಿ ಕಾಂಗ್ರೆಸ್ಗೆ ಮುನ್ನಡೆ; ಸಿಎಂ ಕುರ್ಚಿ ಮೇಲೆ ಸಿದ್ದು, ಡಿಕೆಶಿ ಕಣ್ಣು
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ, ಮೇ 10ರಂದು ಮತದಾನ ನಡೆದಿದ್ದು, ಬಹು ನಿರೀಕ್ಷೆಯ ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ, ಮೇ 13ರಂದು ಪ್ರಕಟಗೊಳ್ಳಲಿದೆ.
ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಇವಿಎಂ ಮಷಿನ್ಗಳಲ್ಲಿ ಭದ್ರವಾಗಿದ್ದು, ಮತದಾನ ಮುಗಿಯುತ್ತಿದ್ದಂತೆಯೇ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಇನ್ನು ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗಿವೆ.

ಒಟ್ಟು 11 ಚುನಾವಣೋತ್ತರ ಸಮೀಕ್ಷೆಗಳಲ್ಲಿ 8 ಸಮೀಕ್ಷೆಗಳು ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನ ನೀಡಿದ್ದರೆ, ಬಿಜೆಪಿಗೆ ಕೇವಲ ಸಮೀಕ್ಷೆಗಳು ಹೆಚ್ಚಿನ ಸ್ಥಾನ ನೀಡಿವೆ. ಇನ್ನು ಜೆಡಿಎಸ್ 25ರಿಂದ 30 ಸ್ಥಾನ ಪಡೆದರೂ, ಕಿಂಗ್ ಮೇಕರ್ ಆಗುವ ಲಕ್ಷಣಗಳು ಕಾಣಿಸುತ್ತಿವೆ.
ಬಹುತೇಕ ಎಕ್ಸಿಟ್ ಪೋಲ್ಗಳಲ್ಲಿ ಕಾಂಗ್ರೆಸ್ಗೆ ಮುನ್ನಡೆ ದೊರಕಿದ ಕಾರಣ, ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಹುದ್ದೆಯ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದಾರೆ. ಅದರಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆ ಫಲಿತಾಂಶಕ್ಕೂ ಮೊದಲೇ ಸಿಎಂ ಕುರ್ಚಿಗೆ ಪೈಪೋಟಿ ನಡೆಸುತ್ತಿದ್ದಾರೆ.

ಇದರ ಪರಿಣಾಮ ಗೆಲ್ಲುವ ಸಾಧ್ಯತೆ ಇರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ದೂರವಾಣಿ ಮೂಲಕ ಸಂಪರ್ಕಿಸುತ್ತಿದ್ದಾರೆ. ಹೈ-ವೋಲ್ಟೇಜ್ ಹಾಗೂ 50:50 ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಜೊತೆಗೂ ಸಮೀಕ್ಷೆ ಲೆಕ್ಕ ಆಧರಿಸಿ ಮಾತುಕತೆ ನಡೆಸಲಾಗುತ್ತಿದೆ.
ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಹೆಚ್ಚು ಶಾಸಕರ ಬೆಂಬಲ ಇರುವವರು ಸಿಎಂ ಎಂಬ ಸಂದೇಶ ರವಾನಿಸಿದ ನಂತರ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಫುಲ್ ಅಲರ್ಟ್ ಆಗಿದ್ದಾರೆ. ಫಲಿತಾಂಶ ಪ್ರಕಟವಾಗುವ ಎರಡು ದಿನ ಮೊದಲೇ ಶಾಸಕರನ್ನು ಸೆಳೆದುಕೊಳ್ಳುತ್ತಿದ್ದಾರೆ.
ಈ ಮೊದಲಿನಿಂದಲೂ ಈ ಇಬ್ಬರು ನಾಯಕರ ನಡುವೆ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ಜೋರಾಗಿದೆ. ಒಂದು ವೇಳೆ ಕಾಂಗ್ರೆಸ್ಗೆ ಪೂರ್ಣ ಬಹುಮತ ಬಂದರೆ ಎಷ್ಟು ಶಾಸಕರು ಯಾವ ನಾಯಕನ ಬೆನ್ನಿಗೆ ನಿಲ್ಲಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ರಣದೀಪ್ ಸುರ್ಜೇವಾಲಗೆ ಸಮಾಧಾನಿಸುವ ಹೊಣೆ
ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಮುನ್ನಡೆ ಬರುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ಕಾಂಗ್ರೆಸ್ ನಾಯಕರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಎಲ್ಲಾ ನಾಯಕರಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಒಗ್ಗಟ್ಟು ಮೂಡಿಸುವುದು ದೊಡ್ಡ ಜವಾಬ್ದಾರಿಯಾಗಿದೆ.
ಈ ಹಿನ್ನೆಲೆಯಲ್ಲಿ ಗುರುವಾರ ರಾಜ್ಯ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ನಡೆಸಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ನಾಯಕರಲ್ಲಿ ಟೆನ್ಶನ್
ಹಲವು ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಗೆ ಹಿನ್ನಡೆ ಎಂದು ತೋರಿಸಲಾಗಿದ್ದು, ಇದು ಬಿಜೆಪಿ ನಾಯಕರ ತಳಮಳಕ್ಕೆ ಕಾರಣವಾಗಿದೆ. ಅಲ್ಲದೇ ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆ ಹೆಚ್ಚಾಗಿದ್ದು, ಬಿಜೆಪಿ ನಾಯಕರಲ್ಲಿ ಹೆಚ್ಚಿನ ಟೆನ್ಶನ್ ಆರಂಭವಾಗಿದೆ. ಆದರೆ, ಎಲ್ಲ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಉಲ್ಟಾ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.












Click it and Unblock the Notifications