Jagadish Shettar: ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ, ಹುಬ್ಬಳ್ಳಿ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಮೇ7: ಟಿಕೆಟ್ ಕೈ ತಪ್ಪಿದ ಹಿನ್ನಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ. ಇತ್ತ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೋಗಿದಕ್ಕೆ ಪಾಠ ಕಲಿಸಬೇಕು ಎಂದು ಬಿಜೆಪಿ ಹೈಕಮಾಂಡ್ ನಿರ್ಧಾರಿಸಿದ್ದು, ಹಲವು ತಂತ್ರಗಾರಿಕೆಯ ಜೊತೆಗೆ ಯಡಿಯೂರಪ್ಪ ಅವರಿಗೆ ಈ ಜವಾಬ್ದಾರಿಯನ್ನ ನೀಡಿದೆ.
ಇನ್ನೂ ಜಗದೀಶ್ ಶೆಟ್ಟರ್ ಈ ಬಾರಿ ಚುನಾವಣೆಯಲ್ಲಿ ಗೆಲ್ಲಲ್ಲ ಎಂದು ಬಿಜೆಪಿ ನಾಯಕರು ಹೇಳಿತ್ತಿದ್ದು, ಬಿಜೆಪಿ ನಾಯಕರ ವಿರುದ್ದವಾಗಿ ನನ್ನನ್ನು ಸೋಲಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.

ಈ ಕುರಿತು ಕ್ಷೇತ್ರದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಇದು ಗುಜರಾತ್ನ ಅಹಮದಾಬಾದ್ ಅಲ್ಲ, ಹುಬ್ಬಳ್ಳಿ. ಅಲ್ಲಿಯಂತೆ ಆಟ ಆಡಿ ನನ್ನನ್ನು ಇಲ್ಲಿ ಸೋಲಿಸುತ್ತೇವೆ ಎಂಬ ಭಾವನೆ ಬಿಜೆಪಿಗಿದ್ದರೆ ಅದನ್ನು ಮನಸಿನಿಂದ ತೆಗೆದುಬಿಡಿ. ನನ್ನನ್ನು ಸೋಲಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದವಾಗಿ ಕಿಡಿಕಾರಿದ್ದಾರೆ.
ಬಿಜೆಪಿಯಲ್ಲಿ ನನ್ನ ಅನ್ಯಾಯವಾಗಿದೆ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇನೆ. ಅದಕ್ಕಾಗಿ ಇಡೀ ಬಿಜೆಪಿ ನನ್ನನ್ನು ಸೋಲಿಸಲು ಪಣ ತೊಟ್ಟಿದೆ.ಆದರೆ ಬಿಜೆಪಿ ನಾಯಕರ ಉದ್ದೇಶ ಫಲ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದಲ್ಲಿ ನನಗೆ ಮಾತ್ರ ಅವಮಾನ ಆಗಿಲ್ಲ, ಲಿಂಗಾಯತ ಸಮುದಾಯಕ್ಕೆ ಹಾಗೂ ನನ್ನ ಇಡೀ ಹುಬ್ಬಳ್ಳಿ ಮತದಾರರಿಗೆ ಮಾಡಿದ ಅವಮಾನ ಇದು ಎಂದು ಕಿಡಿಕಾರಿದ ಅವರು, ನನ್ನ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ ನನ್ನ ಮೇಲೆ ಇದೆ. ಈ ಅವಮಾನವನ್ನು ಅವರು ಮರೆಯುವುದಿಲ್ಲ. ಮೇ 10ರಂದು ನನ್ನನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಅಲ್ಲದೇ ಬಿಜೆಪಿಯ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ನನ್ನನ್ನ ಸೋಲಿಸುವಂತೆ ಮತದಾರರ ಬಳಿ ಕೇಳಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ಮತ ಕ್ಷೇತ್ರ ಮತದಾರರು ನನ್ನ ಕೈ ಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ನಾನು ಕಾಂಗ್ರೆಸ್ ಪಕ್ಷವನ್ನ ಸೇರ್ಪಡೆಯಾಗಿದ್ದೇನೆ. ನನಗೆ ಯಾವುದೇ ಅಧಿಕಾರದ ಆಸೆಯಿಲ್ಲ. ಮುಖ್ಯಮಂತ್ರಿಯಾಗುವುದು ಸೇರಿದಂತೆ ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ. ಕಾಂಗ್ರೆಸ್ ಹಿರಿಯ ನಾಯಕರು ಗೌರವದಿಂದ ನಡೆಸಿಕೊಳ್ಳುವುದಾಗಿ ಹೇಳಿದ್ದಾರೆ. ನನ್ನನ್ನು ಗೌರವದಿಂದ ನಡೆಸಿಕೊಂಡರೆ ಅಷ್ಟೇ ಸಾಕು. ಅದೇ ಬೇಡಿಕೆಯನ್ನಿಟ್ಟುಕೊಂಡು ಕಾಂಗ್ರೆಸ್ಗೆ ಸೇರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಾನು ಮುಖ್ಯಮಂತ್ರಿಯಾಗಬೇಕು ಅಥವಾ ಮತ್ಯಾವುದೋ ಉನ್ನತ ಸ್ಥಾನದ ಆಸೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ಅದರ ಆಕಾಂಕ್ಷಿಯೂ ನಾನಲ್ಲ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು. ಇನ್ನೂ ಬಿಜೆಪಿಯಲ್ಲಿ ಲಿಂಗಾಯತರನ್ನು ತುಳಿಯುವ ಕೆಲಸ ಮಾಡುತ್ತಲೇ ಬರುತ್ತಿದೆ. ಈಗಿನ ಕೇಂದ್ರ ಸಂಪುಟವನ್ನು ನೋಡಿದರೆ ಗೊತ್ತಾಗುತ್ತದೆ. ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ, ಪ್ರಹ್ಲಾದ ಜೋಶಿ ಸಚಿವರಿದ್ದಾರೆ. ಇವರಲ್ಲಿ ಪ್ರಹ್ಲಾದ ಜೋಶಿ ಮಾತ್ರ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಉಳಿದವರು ರಾಜ್ಯ ಸಚಿವರಾಗಿದ್ದಾರೆ ಎಂದು ಹೇಳಿದರು.
ಇನ್ನೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ಸಿನಲ್ಲಿ 9 ಮಂದಿ ಆಕಾಂಕ್ಷಿಗಳಿದ್ದರು. ಆದರೆ, ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ವೇಳೆ ಎಲ್ಲ 9 ಆಕಾಂಕ್ಷಿಗಳು ಬಂದು ನನ್ನನ್ನು ಸ್ವಾಗತಿಸಿ, ನನ್ನ ಪರ ಪ್ರಚಾರ ಮಾಡುತ್ತಿರುವುದನ್ನು ಕಂಡು ಸಂತಸವಾಗುತ್ತಿದೆ ಎಂದರು.












Click it and Unblock the Notifications