ಬಜರಂಗದಳ ಬ್ಯಾನ್ ಭರವಸೆಗೆ ಕಾಂಗ್ರೆಸ್ ವಿರುದ್ದ ಭುಗಿಲೆದ್ದ ಆಕ್ರೋಶ; ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದೇನು.?
ಕಲಬುರಗಿ,ಮೇ3: ರಾಜ್ಯ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆ ಹೊತ್ತಲ್ಲಿ ಆಡಳಿತಾರೂಢ ಬಿಜೆಪಿಗೆ ಹೊಸ ಅಸ್ತ್ರವೊಂದು ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಕಟವಾದ ವಿವಾದಾತ್ಮಕ ವಿಚಾರವೊಂದು ಬಿಜೆಪಿಗೆ ಬಲ ನೀಡಿದೆ. ಬಜರಂಗ ದಳವನ್ನು ನಿಷೇಧ ಮಾಡ್ತೇವೆ ಎಂಬ ಭರವಸೆ ಕೊಟ್ಟ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.
ಈ ಕುರಿತು ಕಲಬುರಗಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ, ಕಾಂಗ್ರೆಸ್ ಪ್ರಣಾಳಿಕೆಗೆ ಸಂಬಂಧಿಸಿದಂತೆ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರು ಈ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಕೆಲವರು ರಾತ್ರಿಯಲ್ಲಿ ಮಟನ್ ತಿಂದು ಹಗಲು ಹೊತ್ತಲ್ಲಿ ನಾನ್ ವೆಜ್ ತಿನ್ನುವವರನ್ನು ಬೈಯ್ದಾಡಿಕೊಂಡು ಓಡಾಡುತ್ತಾರೆ. ಒಟ್ಟಾರೆ, ಜನರ ಮಧ್ಯೆ ಜಗಳ ಹಚ್ಚಿ ವೋಟು ಪಡೆಯುವ ಗಿಮಿಕ್ ಒಳ್ಳೆಯದಲ್ಲ ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಗೆ ವಾರಂಟಿಯೂ ಇಲ್ಲ, ಗ್ಯಾರಂಟಿಯೂ ಇಲ್ಲ ಎಂಬ ಪ್ರಧಾನಿ ಮೋದಿ ಮಾತಿಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಎಂದ ಮೇಲೆ ಸಹಜವಾಗಿಯೇ ಟೀಕಿಸುತ್ತಾರೆ. ಈ ಹಿಂದೆ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಈ ಬಾರೀ ಕಾಂಗ್ರೆಸ್ ಸರಕಾರ ರಚನೆಗೊಂಡರೆ ಮೊದಲ ಸಂಪುಟ ಸಭೆಯಲ್ಲಿಯೇ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗ್ಗೆಯಿಂದ ಸಂಜೆವರೆಗೆ ಅಳುತ್ತಲೇ ಇರುವುದು ಪ್ರಧಾನಿ ಮೋದಿ ಅವರಿಗೆ ರೂಢಿಯಾಗಿಬಿಟ್ಟಿದೆ. ಅವರೊಬ್ಬ ಕ್ರೈ ಬೇಬಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದರು. ಕಾಂಗ್ರೆಸ್ ನಾಯಕರು 91 ಬಾರಿ ನನ್ನನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎನ್ನುವ ಮೋದಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಡಿರುವ ಹಗುರವಾದ ಮಾತುಗಳನ್ನು ಮರೆತಿದ್ದಾರೆ. ಸೋನಿಯಾ ಗಾಂಧಿ ಅವರನ್ನು ವಿಧವೆ, ಇಟಲಿ ಗರ್ಲ್ ಎಂದಿದ್ದರು. ರಾಹುಲ್ಗಾಂಧಿ ಒಬ್ಬ ಹೈಬ್ರಿಡ್ ಎಂದಿದ್ದರು. ಇಷ್ಟೆಲ್ಲಾ ಹಗುರವಾದ ಮಾತುಗಳನ್ನು ನಮ್ಮ ಪಕ್ಷದ ಹೈಕಮಾಂಡ್ ವಿರುದ್ಧ ಆಡಿದ್ದರೂ ನಾವ್ಯಾರೂ ಮೋದಿ ಅವರಂತೆ ಅಳುತ್ತಾ ಕುಳಿತಿಲ್ಲ ಎಂದು ಕಿಡಿಕಾರಿದರು.

ಇದೊಂದು ವಾರ್ ಅನ್ನೋದು ನಮಗೆ ಗೊತ್ತು. ಬರೀ ಅಳುತ್ತಾ ಕುಳಿತುಕೊಂಡರೆ ಆಗಲ್ಲ. ನಾನು ಹಿಂದುಳಿದ ವರ್ಗದ ವ್ಯಕ್ತಿ ಆಗಿರುವುದರಿಂದ ತಮ್ಮ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಮೋದಿ ಪದೇ ಪದೆ ಉಲ್ಲೇಖಿಸುತ್ತಾರೆ. ಆದರೆ, ಮೋದಿಯವರು ಒಂದು ಅಂಶವನ್ನು ನೆನಪಿಡಬೇಕು, ನಾನು ದಲಿತ. ಮೋದಿಗಿಂತಲೂ ಕೆಳಗೆ ಇದ್ದೇನೆ. ಮೊದಲು ನನ್ನ ತಲೆಯ ಮೇಲೆ ಕಾಲಿಟ್ಟ ಮೇಲೆಯೇ ನಿಮ್ಮ ಕಡೆಗೆ ಬರುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಅಂಶಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ಮೊದಲು ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕು. 'ನಮ್ ಕೈಗೆ ಪ್ರಶ್ನೆ ಪತ್ರಿಕೆಯನ್ನೇ ನೀಡದೆ ಉತ್ತರ ಕೊಡಿ ಎಂದರೆ ಹೇಗೆ?' ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ, ಅಧಿಕಾರಕ್ಕೆ ಬಂದರೆ ಚುನಾವಣಾ ಪ್ರಣಾಳಿಕೆಯಲ್ಲಿರುವ ಎಲ್ಲ ಅಂಶಗಳನ್ನು ಖಂಡಿತ ಈಡೇರಿಸುವುದಾಗಿ ಸ್ಪಷ್ಟನೆ ನೀಡಿದರು.












Click it and Unblock the Notifications