Siddaramaiah: ಅಮಿತ್ ಶಾ ಹೇಳಿದ ತಕ್ಷಣ ಜಗದೀಶ್ ಶೆಟ್ಟರನ್ನ ಜನ ಸೋಲಿಸಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಲಿಂಗಾಯತ ಸಿಎಂ ವಿಚಾರದಲ್ಲಿ ನಾನು ನೀಡಿದ ಹೇಳಿಕೆಯನ್ನು ತಿರುಚುವ ಮೂಲಕ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ ತಕ್ಷಣ ಜಗದೀಶ್ ಶೆಟ್ಟರ್ ಅವರನ್ನು ಜನ ಸೋಲಿಸ್ತಾರ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಜಗದೀಶ್ ಶೆಟ್ಟರ್ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, ಅಮಿತ್ ಶಾ ಹೇಳಿದ ತಕ್ಷಣ ಜನ ಬದಲಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಅಮಿತ್ ಶಾಗೂ ಕರ್ನಾಟಕ ರಾಜ್ಯಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು. ಅಮಿತ್ ಶಾ ಮತ್ತು ನರೇಂದ್ರ ಮೋದಿ ನೂರು ಬಾರಿ ರಾಜ್ಯಕ್ಕೆ ಬಂದರೂ ಏನೂ ಆಗಲ್ಲ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭೆ ಕ್ಷೇತ್ರದ ಹೂಗಾರ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರಿ, ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಪರವಾಗಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಅಮಿತ್ ಶಾ ಹುಬ್ಬಳ್ಳಿಯಲ್ಲಿ ಎಷ್ಟು ಸಭೆ ಮಾಡಿದರೂ ಏನೂ ಬದಲಾಗಲ್ಲ, ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ, ಅವರ ಅಭಿವೃದ್ಧಿ ಕೆಲಸಗಳು ಅವರನ್ನು ಗೆಲ್ಲಿಸುತ್ತವೆ. ಅಮಿತ್ ಶಾ ಬಂದ ಮಾತ್ರಕ್ಕೆ ಶೆಟ್ಟರ್ ಸೋಲುವುದಿಲ್ಲ" ಎಂದು ಹೇಳಿದರು.
ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಬಿಜೆಪಿಯಿಂದ ಟಿಕೆಟ್ ಸಿಗದ ಬಳಿಕ ಬಂಡಾಯವೆದ್ದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಕಡೆ ಮುಖ ಮಾಡಿದ್ದರು. ಬಿಜೆಪಿ ಶೆಟ್ಟರ್ ವಿರುದ್ಧ ಮಹೇಶ್ ಟೆಂಗಿನಕಾಯಿ ಅವರನ್ನು ಕಣಕ್ಕಿಳಿಸಿದೆ. ಜೆಪಿ ನಡ್ಡಾ ಕೂಡ ಹುಬ್ಬಳ್ಳಿಯಲ್ಲಿ ಪ್ರಮುಖ ಮುಖಂಡರ ಸಭೆ ನಡೆಸಿ ಶೆಟ್ಟರ್ ಅವರನ್ನು ಸೋಲಿಸಲೇ ಬೇಕೆಂದು ಹೇಳಿದ್ದಾರೆ.
ಸಂಘ ಪರಿವಾರ ಇಲ್ಲಿ ಪ್ರಬಲವಾಗಿದ್ದು ಶೆಟ್ಟರ್ ಪ್ರಭಾವನ್ನು ಮೀರಿ ಬಿಜೆಪಿ ಹೊಸ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸದಲ್ಲಿದೆ. ಹಿರಿಯ ನಾಯಕನಿಗೆ ಟಿಕೆಟ್ ಕೊಡದೇ ಕಡೆಗಣಿಸಿದ್ದು, ಶೆಟ್ಟರ್ ಮೇಲೆ ಜನ ಅನುಕಂಪವನ್ನು ತೋರಿದರೆ, ಅವರ ಅಭಿವೃದ್ಧಿ ಕೆಲಸಗಳು ಕೈಹಿಡಿದರೆ ಶೆಟ್ಟರ್ ಮತ್ತೆ ಶಾಸಕರಾಗುವುದು ಖಚಿತವಾಗಿದೆ.












Click it and Unblock the Notifications