ಬಿಜೆಪಿ ಪ್ರಣಾಳಿಕೆ; ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಬೆಂಗಳೂರು, ಮೇ 01; ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತದಾನಕ್ಕೆ 9 ದಿನಗಳು ಬಾಕಿ ಇರುವಾಗ ರಾಜ್ಯದ ಆಡಳಿತಾರೂಢ ಸರ್ಕಾರ ಹಲವಾರು ಭರವಸೆಗಳನ್ನು ಜನರಿಗೆ ನೀಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೋಮವಾರ 'ಬಿಜೆಪಿ ಪ್ರಜಾ ಪ್ರಣಾಳಿಕೆ 2023' ಬಿಡುಗಡೆ ಮಾಡಿದರು. ಪಕ್ಷ ಡಾ. ಕೆ. ಸುಧಾಕರ್ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ ಮಾಡಿತ್ತು. ಪ್ರಣಾಳಿಕೆಯಲ್ಲಿ ವಿವಿಧ ವಲಯಗಳಿಗೆ ಹಲವಾರು ಘೋಷಣೆಗಳನ್ನು ಮಾಡಲಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿ ರಚನೆ ಮಾಡಲಾಗಿತ್ತು. ಆದ್ದರಿಂದ ಆರೋಗ್ಯ ಕ್ಷೇತ್ರಕ್ಕೆ ಯಾವ ಭರವಸೆ ಸಿಗಲಿದೆ? ಎಂಬ ನಿರೀಕ್ಷೆ ಇತ್ತು. ಪ್ರಣಾಳಿಕೆ ಬಿಡುಗಡೆಯಾಗಿದ್ದು ಹಲವು ಭರವಸೆಗಳನ್ನು ಕೊಡಲಾಗಿದೆ. ಉತ್ತರ ಕನ್ನಡ, ಶೃಂಗೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಭಾರೀ ಹೋರಾಟ ನಡೆದಿತ್ತು. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಣಾಳಿಕೆಯಲ್ಲಿ ಈ ಕುರಿತು ಭರವಸೆ ನೀಡಿದೆ.
ಆರೋಗ್ಯ ಕ್ಷೇತ್ರಕ್ಕೆ ಭರವಸೆಗಳು
* ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಪ್ರತಿ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 10 ಲಕ್ಷ ಪ್ರತಿ ಎಪಿಎಲ್ ಕುಟುಂಬದ ಆರೋಗ್ಯ ವಿಮೆ ಮೊತ್ತವನ್ನು 5 ಲಕ್ಷ ಹೆಚ್ಚಿಸುತ್ತೇವೆ.
* ಎಲ್ಲಾ ತಾಲೂಕುಗಳಲ್ಲಿ ಕೀಮೋಥೆರಪಿ, ಡಯಾಲಿಸಿಸ್ ಸೇವೆ, ಪ್ರಯೋಗಾಲಯ ಮತ್ತು ರೋಗ ನಿರ್ಣಯ ಕೇಂದ್ರಗಳ ಸೌಲಭ್ಯಗಳನ್ನು ಒದಗಿಸುತ್ತೇವೆ.
* ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಕೇಂದ್ರಗಳಲ್ಲಿನ ಮೂಲ ಸೌಕರ್ಯ ಸುಧಾರಿಸುತ್ತೇವೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ನರ್ಸಿಂಗ್ ಕಾಲೇಜು, ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುತ್ತೇವೆ. ಇದಲ್ಲದೇ ಎಲ್ಲಾ ನರ್ಸಿಂಗ್ ಪದವೀಧರ ನೋಂದಣಿಗೆ ಅನುಕೂಲವಾಗುವಂತೆ ಪ್ರತಿ ವಿಭಾಗೀಯ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಪ್ರಾದೇಶಿಕ ಕೇಂದ್ರ ಸ್ಥಾಪಿಸುತ್ತೇವೆ ಎಂದು ಬಿಜೆಪಿ ಹೇಳಿದೆ.
* ನಗರದ ಪ್ರದೇಶದಲ್ಲಿ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೌಲಭ್ಯ ಕಲ್ಪಿಸಲು ಮುನ್ಸಿಪಲ್ ಕಾರ್ಪೊರೇಷನ್ನ ಪ್ರತಿ ವಾರ್ಡ್ನಲ್ಲಿ ರೋಗ ನಿರ್ಣಯ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದೆ.
* ಪ್ರತಿ ವರ್ಷ ರಾಜ್ಯದ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಜತೆಗೆ ಕೈಗೆಟಕುವ ದರದಲ್ಲಿ ರೋಗ ನಿರ್ಣಯ ಸೌಲಭ್ಯವನ್ನು ಒದಗಿಸುತ್ತೇವೆ.
* ಅನಿಮೀಯಾ-ಮುಕ್ತ ಕರ್ನಾಟಕ ಸಾಧಿಸಲು ರಾಜ್ಯದಲ್ಲಿ 6 ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಐರನ್ ಫೋಲಿಕ್ ಆಸಿಡ್ ಸಪ್ಲಿಮೆಂಟ್ ಒದಗಿಸುತ್ತೇವೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಸರ್ಕಾರದ ಸಾಧನೆಗಳೇನು? ಎಂದು ಸಹ ಹೇಳಿದೆ. 438 ನಮ್ಮ ಕ್ಲಿನಿಕ್ಗಳನ್ನು ಸ್ಥಾಪಿಸುತ್ತಿದ್ದೇವೆ. ಇದು ನಗರದ ಜನರ ಆರೋಗ್ಯ ಕವಚವಾಗಲಿದೆ ಎಂದು ಬಿಜೆಪಿ ಹೇಳಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಅಡಿಯಲ್ಲಿ ರಾಜ್ಯದ 1.38 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗಿದೆ. ಚಿಕ್ಕಮಗಳೂರು, ಹಾವೇರಿ, ಯಾದಗಿರಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 4 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಮಾಡಿದ್ದೇವೆ ಎಂದು ಬಿಜೆಪಿ ತಿಳಿಸಿದೆ.
ಕರ್ನಾಟಕದಲ್ಲಿ 1052 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ಲಭ್ಯವಾಗುತ್ತಿವೆ. 2021ರಲ್ಲಿ ಕರ್ನಾಟಕವು 8618 ಆರೋಗ್ಯ ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸಿ ನಿಗದಿತ 7257ರ ಗುರಿ ಮೀರಿ ದೇಶದ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ. ಕರ್ನಾಟಕದಲ್ಲಿ 1.15 ಕೋಟಿಗೂ ಹೆಚ್ಚು ಬೂಸ್ಟರ್ ಡೋಸ್ ಸೇರಿದಂತೆ 12.2 ಕೋಟಿ ಲಸಿಕೆಗಳನ್ನು ನೀಡಲಾಗಿದೆ.












Click it and Unblock the Notifications