Ratna Mamani News: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಗೆ ನಾಮಪತ್ರ ತಿರಸ್ಕಾರ ಭೀತಿ: ಕಾಂಗ್ರೆಸ್, ಎಎಪಿ ಆರೋಪವೇನು?
ಬೆಳಗಾವಿ,ಏಪ್ರಿಲ್22: ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಆನಂದ ಮಾಮನಿ ನಾಮಪತ್ರದ ಜೊತೆಗೆ ಸಲ್ಲಿಸಿದ ಅಫಿಡೆವಿಟ್ ಕುರಿತು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಚುನಾವಣೆ ಅಧಿಕಾರಿಗೆ ಆಕ್ಷೇಪ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗಳು ಬಿಜೆಪಿ ಅಭ್ಯರ್ಥಿ ರತ್ನಮಾಮುನಿ ವಿಚಾರಣೆಗೆ ನೋಟಿಸ್ ನೀಡಿದ್ದು, ಏಪ್ರಿಲ್ 22ರ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ರತ್ನಾ ಆನಂದ ಮಾಮನಿ ಸಲ್ಲಿಸಿರುವ ಅಫಿಡೆವಿಟ್ 2018ರ ಮಾದರಿಯಲ್ಲಿದ್ದು, 2019ರ ನಂತರ ತಿದ್ದುಪಡಿಯಾಗಿರುವ ಪರಿಷ್ಕೃತ ಅಫಿಡೆವಿಟ್ ಪ್ರಕಾರ ಸೂಕ್ತ ಮಾಹಿತಿ ಇಲ್ಲ. ಹೀಗಾಗಿ ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಾಪೂಗೌಡ ಪಾಟೀಲ ಚುನಾವಣೆ ಅಧಿಕಾರಿಗೆ ಆಕ್ಷೇಪ ಸಲ್ಲಿಸಿದ್ದರು.

ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ 2018ರ ಮಾದರಿಯಲ್ಲಿಅಫಿಡೆವಿಟ್ ಸಲ್ಲಿಸಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯ ತಪ್ಪು ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಒತ್ತಾಯಿಸಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗೂ ಮಾಹಿತಿ ಸಲ್ಲಿಸಲಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಚುನಾವಣಾಧಿಕಾರಿ ಡಾ.ರಾಜೀವ ಕೂಲೇರ, ನಾಮಪತ್ರ ಸಲ್ಲಿಸಿದ ನಂತರ ನಾಮಪತ್ರಗಳ ಪರಿಶೀಲನೆ ಪ್ರಾರಂಭವಾಗುವ ಅವಧಿಗಿಂತ ಮುಂಚಿತಗಿ ಅಂದರೆ 11 ಗಂಟೆಯೊಳಗೆ ಆಯಾ ಅಭ್ಯರ್ಥಿಗಳು ತಪ್ಪಾಗಿ ಕೊಟ್ಟಿರುವ ತಮ್ಮ ದಾಖಲೆಗಳನ್ನು ಸರಿಪಡಿಸಿ ನೀಡಲು ಅವಕಾಶವಿದೆ. ಆಕ್ಷೇಪಣೆ ಸಲ್ಲಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳಿಗೆ ಹಿಂಬರಹ ನೀಡಲಾಗಿದ್ದು, ಶನಿವಾರ ಬೆಳಗ್ಗೆ ಈ ಕುರಿತು ವಿಚಾರಣೆಗೆ ಆಗಮಿಸಲು ಅವರಿಗೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನೆ ನಡೆದಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.












Click it and Unblock the Notifications