PM Modi: ಏಪ್ರಿಲ್ 27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಮೋದಿ ಸಂವಾದ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ಪಕ್ಷಗಳು ಪ್ರಚಾರದ ಭರಾಟೆಯಲ್ಲಿ ತೊಡಗಿಕೊಂಡಿವೆ. ರಾಷ್ಟ್ರ ಮಟ್ಟದ ನಾಯಕರು ರಾಜ್ಯದತ್ತ ಮುಖ ಮಾಡಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಬಿಜೆಪಿ ಕೂಡ ತನ್ನದೇ ರೀತಿಯಲ್ಲಿ ಮತದಾರರನ್ನು ಸೆಳೆಯಲು ಮುಂದಾಗಿದೆ. ಕಾರ್ಯಕರ್ತರನ್ನು ಸಂಘಟಿಸಲು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 27ರಂದು ಸಂವಾದ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ಕಾರ್ಯಕರ್ತರ ಜೊತೆ ಸಂವಾದ ನಡೆಸಲಿದ್ದಾರೆ. ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ರಾಜ್ಯದ 1680 ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸುಮಾರು 50 ಲಕ್ಷ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಸಂವಾದ ನಡೆಯಲಿದೆ ಎಂದು ಹೇಳಿದರು.

ಸಂವಾದ ಕಾರ್ಯಕ್ರಮವನ್ನು ನೋಡಲು 650 ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದೆ. 24 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ಮೋದಿ ಸಂವಾದದಲ್ಲಿ ಭಾಗವಹಿಸಲು ಅಪ್ಲಿಕೇಶನ್ ಲಿಂಕ್ಗಳನ್ನು ಕಳುಹಿಸಲಾಗಿದೆ. ಮೋದಿ ಆ್ಯಪ್ ಮೂಲಕವೂ ಸಂವಾದ ಕಾರ್ಯಕ್ರಮವನ್ನು ನೋಡಲು ಅವಕಾಶ ಕಲ್ಪಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಶೋಭಾ ಕರಂದ್ಲಾಜೆ
ಚುನಾವಣೆ ಸಮೀಪವಾಗುತ್ತಿರುವ ಸಮಯದಲ್ಲೇ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ, ಅಲ್ಪಸಂಖ್ಯಾತರಿಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡುವ ಬಗ್ಗೆ ಸಂವಿಧಾನದಲ್ಲೇ ಎಲ್ಲೂ ಹೇಳಿಲ್ಲ. ತಡೆ ನೀಡಿರುವ ಬಗ್ಗೆ ಮತ್ತೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.
ಶೇಕಡಾ 4ರಷ್ಟು ಮೀಸಲಾತಿ ತೆಗೆಯುವ ನಿರ್ಧಾರಕ್ಕೆ ಬಿಜೆಪಿ ಈಗಲೂ ಬದ್ಧವಾಗಿದೆ. ವೋಟ್ ಬ್ಯಾಂಕ್ ರಾಜಕರಾಣಕ್ಕಾಗಿ ಕಾಂಗ್ರೆಸ್ ಈ ಮೀಸಲಾತಿ ನಿಯಮ ಜಾರಿ ಮಾಡಿದೆ. ನಾವು ಮತ್ತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡುತ್ತೇವೆ. ಸುಪ್ರೀಂ ಕೋರ್ಟ್ ನೀಡಿರುವ ತಡೆಗೆ ನಮ್ಮ ಒಪ್ಪಿಗೆ ಇಲ್ಲ. ಧರ್ಮಧ ಆಧಾರದಲ್ಲಿ ಮೀಸಲಾತಿ ಕೊಡುವುದಕ್ಕೆ ಬಿಜೆಪಿ ವಿರೋಧಿಸುತ್ತದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಸುಪ್ರೀಂ ಕೋರ್ಟ್ ತಡೆ ಕೊಟ್ಟಿರುವ ವಿಚಾರ ಈಗ ರಾಜಕೀಯ ದಾಳವಾಗಿ ಮಾರ್ಪಟ್ಟಿದೆ. ಬಿಜೆಪಿ ಈಗಲೂ ತಾನು ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿಯನ್ನು ಅಲ್ಪಸಂಖ್ಯಾತರ ವಿರೋಧಿ ಎಂದು ಟೀಕೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇದು ಬಿಜೆಪಿಗೆ ಲಾಭವಾಗುತ್ತಾ ಅಥವಾ ಹಿನ್ನಡೆಯಾಗುತ್ತಾ ಎಂದು ನೋಡಬೇಕಿದೆ.












Click it and Unblock the Notifications