Karnataka Elections 2023: ಸಚಿವ ಬೈರತಿ ಬಸವರಾಜ ಕಾಂಗ್ರೆಸ್ ಸೇರ್ಪಡೆ? ಇಲ್ಲಿದೆ ಮಾಹಿತಿ
ಕೆಆರ್ ಪುರ ಬಿಜೆಪಿ ಶಾಸಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಬೆಂಗಳೂರು, ಮಾರ್ಚ್ 21: ಕರ್ನಾಟಕ ಚುನಾವಣೆಯು ( Karnataka Assembly Elections 2023 ) ಮೇ ತಿಂಗಳಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ರಾಜಕೀಯ ಮುಖಂಡರ ಪಕ್ಷಾಂತರು ಜೋರಾಗಿ ನಡೆದಿದೆ. ಅದರಲ್ಲೂ ಕಾಂಗ್ರೆಸ್ಗೆ ( Congress ) ಸೇರ್ಪಡೆಯಾಗುತ್ತಿರುವ ಮುಖಂಡರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಹೇಳಿದ್ದಾರೆ.
ಕಳೆದ ಎರಡು ವಾರಗಳಲ್ಲಿ ಇಬ್ಬರು ಬಿಜೆಪಿ ಎಂಎಲ್ಸಿಗಳು ಪಕ್ಷ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯಿಂದ ನಾಲ್ಕು ಬಾರಿ ಎಂಎಲ್ಸಿ ಆಗಿದ್ದ ಪುಟ್ಟಣ್ಣ ಅವರು ಕಳೆದ ವಾರ ಕಾಂಗ್ರೆಸ್ಗೆ ಸೇರಿದ್ದಾರೆ. ಇನ್ನೊಬ್ಬ ಬಿಜೆಪಿ ಎಂಎಲ್ಸಿ ಬಾಬುರಾವ್ ಚಿಂಚನಸೂರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 25ರಂದು ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ನಿಶ್ಚಿತವಾಗಿದೆ.

ಇಂದು ರಾಜ್ಯದ ದಲಿತ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸುದಾಮ ದಾಸ್, ಅಂಬಣ್ಣ ಅರೋಲಿಕರ್, ಗೋಪಾಲ್ ಹಾಗೂ ಶ್ರೀನಿವಾಸ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಬೈರತಿ ಬಸವರಾಜ ಕಾಂಗ್ರೆಸ್ ಸೇರ್ಪಡೆ?
ಸಚಿವ ಹಾಗೂ ಕೆ ಆರ್ ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳು ಹೆಚ್ಚಿವೆ. ರಾಜ್ಯ ವಿಧಾನ ಸಭೆ ಚುನಾವಣೆಗೆ ನೀತಿ ಸಂಹಿತೆ ಘೋಷಣೆಯಾದ ನಂತರ ಕೆ ಆರ್ ಪುರ ಬಿಜೆಪಿ ಶಾಸಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಕಾಂಗ್ರೇಸ್ ಸೇರಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಇತ್ತೀಚೆಗಷ್ಟೇ ಬಿಜೆಪಿ ಶಾಸಕ ಬೈರತಿ ಬಸವರಾಜ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡೆಸಿದ ದೂರವಾಣಿ ಸಂಭಾಷಣೆ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.
ಬೈರತಿ ಬಸವರಾಜ 2013 ರಲ್ಲಿ ಬೆಂಗಳೂರಿನ ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದರು. ಮೊದಲ ಸ್ಪರ್ಧೆಯಲ್ಲಿಯೇ ಅವರು ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾದರು. 2019ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಭಾರಿ ಅಂತರದಿಂದ ಗೆದ್ದರು. ಆ ನಂತರ ಅವರು ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದರು. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಎರಡನೇ ಅವಧಿಗೆ ಸಚಿವರಾದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನೂ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಹೆಚ್ಚಿದೆ. ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾದವ್ ಹಾಗೂ ಅಫಜಲಪುರ ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಓಡಾಡುತ್ತಿವೆ. ಈ ಇಬ್ಬರು ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರ ಶಿಷ್ಯಂದಿರ ಬಳಗದಲ್ಲಿದ್ದವರು. ಹೀಗಾಗಿ ಇವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷವು ಪ್ರಸ್ತುತ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದೆ. ಇಂದು ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕುಣಿಗಲ್ನಲ್ಲಿ ಪ್ರಜಾಧ್ವನಿ ಸಮಾವೇಶ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸಂಸದರಾದ ಡಿಕೆ ಸುರೇಶ್, ಶಾಸಕರಾದ ಡಾ. ರಂಗನಾಥ್, ಮಾಜಿ ಸಚಿವರಾದ ಉಮಾಶ್ರೀ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು ಎಂದು ಕಾಂಗ್ರೆಸ್ ಟ್ವಿಟ್ ಮಾಡಿದೆ.












Click it and Unblock the Notifications