Karnataka Elections 2023: ರಾಹುಲ್ ಗಾಂಧಿ ರಾಜ್ಯ ಭೇಟಿಯಿಂದ ಯಾವುದೇ ಪರಿಣಾಮ ಬೀರಿಲ್ಲ: ಸಿಎಂ ಬೊಮ್ಮಾಯಿ
ಚುನಾವಣೆಗಾಗಿ ಹೈಕಮಾಂಡ್ ನಾಯಕರನ್ನ ಕರೆಸಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಅಬ್ಬರದ ಪ್ರಚಾರವನ್ನ ನಡೆಸಿದ್ದಾರೆ.
ಹುಬ್ಬಳ್ಳಿ, ಮಾರ್ಚ್ 21: ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಚುನಾವಣೆಗಾಗಿ ಹೈಕಮಾಂಡ್ ನಾಯಕರನ್ನ ಕರೆಸಿ ಬಿಜೆಪಿ ನಾಯಕರು ಪ್ರಚಾರವನ್ನ ನಡೆಸುತ್ತಿದ್ದು, ಇದೀಗ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಸೋಮವಾರ ಬಿಜೆಪಿ ಕೋಟೆಯಲ್ಲಿ ಅಬ್ಬರದ ಪ್ರಚಾರವನ್ನ ನಡೆಸಿದ್ದಾರೆ.
ಈ ಕುರಿತು ಮಂಗಳವಾರ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯಾವುದೇ ಪರಿಣಾಮ ಬೀರಿಲ್ಲ ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಿಲ್ಲ. ನಿನ್ನೆಯ ಅವರ ಬೋಗಸ್ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದಿರುವುದಕ್ಕೂ ಬಹಳ ವ್ಯತ್ಯಾಸವಿದೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡೀ ದೇಶ್ಯದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಸಿದ್ದರಾಮಯ್ಯ ಅವರು ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್ . ರಾಜಸ್ಥಾನ, ಛತ್ತೀಸ್ ಗಡದಲ್ಲಿ ಘೋಷಣೆ ಮಾಡಿದ್ದನ್ನು ಅವರು ಈಡೇರಿಸಿಲ್ಲ ಎಂದರು. ಛತ್ತೀಸ್ ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡಿದೆ, ಕೊನೆ ವರ್ಷ ಕೊಡಲು ಓಡಾಡಿದರು. ಈ ರೀತಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ ಹಾಗೂ ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಲು ಮಸಿಗೆ ಬುದ್ಧಿ ಹೇಳಿದಂತೆ ಎಂದರು. ಕಾಂಗ್ರೆಸ್ ಅಧ:ಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಪಾತನವಾಗಿದೆ ಎಂದರು.
ಸಿದ್ದರಾಮಯ್ಯ ಅವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣ ಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿತ್ತಿದೆ. ಕೆಲವೇ ದಿನಗಳಲ್ಲಿ ತೀರ್ಮಾನವಾಗುತ್ತದೆ ಎಂದರು. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದರು.

ಇನ್ನೂ ರಾಜ್ಯಕ್ಕೆ ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಮಾರ್ಚ್ 24 ಮತ್ತು 26 ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಉರಿಗೌಡ, ನಂಜೇಗೌಡ ಪ್ರಕರಣದ ಕುರಿತು ಮಾತನಾಡಿ, ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ ಎಂದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದರು.
ಬಾಬು ರಾವ್ ಚಿಂಚನಸೂರ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕುರಿತು ಮಾತನಾಡಿ, ಬಾಬು ರಾವ್ ಚಿಂಚನಸೂರ ಅವರು ಕಾಂಗ್ರೆಸ್ ನಲ್ಲಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಉತ್ತಮವಾಗಿದೆ. ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications