ಬಿಜೆಪಿಗೆ ಸೋಲು: ಜನಾದೇಶವನ್ನ ಒಪ್ಪಿಕೊಳ್ಳುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 13: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಆದರೆ ಆಡಳಿತ ರೂಢ ಬಿಜೆಪಿ ಭಾರೀ ಹಿನ್ನಡೆಯನ್ನ ಅನುಭವಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯನ್ನ ಹಾಗೂ ಜನಾದೇಶವನ್ನ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ಬಳಿಕ ನಾವು ಅವಲೋಕನ ಮಾಡಲಿದ್ದೇವೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಎಲ್ಲಿ ಹಿನ್ನಡೆಯಾಗಿದೆ ಎಂಬುದನ್ನ ಕುರಿತು ವಿಶ್ಲೇಷಣೆ. ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇನ್ನೂ ಮುಂಬರುವಂತಹ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದರು.
ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು: ಡಿಕೆಶಿ
ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ನನ್ನ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹೇಳಿದ್ದೆ, ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಯೂಡಿ ಕೆಲಸ ಮಾಡುವುದು ಯಶಸ್ಸು ಎಂದು. ಅದೇ ರೀತಿ ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ.

ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ನಾನು ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ನನ್ನ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿ ಬಿಜೆಪಿ ಸೇರಬೇಕು ಅಥವಾ ಜೈಲಿಗೆ ಹೋಗಬೇಕು ಎಂಬ ಆಯ್ಕೆ ಇಟ್ಟಾಗ ನಾನು ಜೈಲಿಗೆ ಹೋಗುವುದನ್ನು ಆರಿಸಿಕೊಂಡೆ. ಆಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ಅವರು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟಿದ್ದರು.
ಇದು ಒಬ್ಬನಿಂದ ಬಂದಿರುವ ಯಶಸ್ಸಲ್ಲ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಶಾಸಕರುಗಳು, ಎಐಸಿಸಿ ಪದಾಧಿಕಾರಿಗಳು, ಉಸ್ತುವಾರಿಗಳು, ರಾಜ್ಯದ ನಾಯಕರುಗಳು, ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದಲ್ಲಿ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿರುವ ಎಲ್ಲಾ ಕಾರ್ಯಕರ್ತರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ನಾನು ಈಗ ಹೆಚ್ಚಾಗಿ ಏನು ಮಾತನಾಡುವುದಿಲ್ಲ. ಕಾರ್ಯಕರ್ತರು ಉತ್ಸಾಹದಿಂದ ಗಲಾಟೆ ಮಾಡುತ್ತಿದ್ದಾರೆ ಎಂದು ನನ್ನ ಚುನಾವಣಾ ಪ್ರಮಾಣಪತ್ರ ಪಡೆಯಲು ನಾನೇ ಹೋಗಬೇಕು ಎಂದು ರಾಮನಗರ ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ನಾನು ಅಲ್ಲಿಗೆ ಹೋಗುತ್ತಿದ್ದು, ಅಲ್ಲಿಂದ ಬಂದ ನಂತರ ನನ್ನ ದೇವಾಲಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತೇನೆ.












Click it and Unblock the Notifications